ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವವು ಜುಲೈ 8ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದು, ಪ್ರೊ. ಟಿ. ಜಿ. ಸೀತಾರಾಮ್, ಅಧ್ಯಕ್ಷರು, ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ಮಾಡುವರು, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು, ಪ್ರಭಾರ ಕುಲಸಚಿವರಾದ ಪ್ರೊ. ಎಂ. ಕೊಟ್ರೇಶ್, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಸತೀಶ್ ಗೌಡ ಎನ್. ಉಪಸ್ಥಿತರಿರುವರು ಎಂದು ತಿಳಿಸಿದರು.
ಈ ಬಾರಿಯ ಘಟಿಕೋತ್ಸವದಲ್ಲಿ 2 ಅಭ್ಯರ್ಥಿಗಳು ಡಿ.ಲಿಟ್ ಪದವಿ, 59 ಅಭ್ಯರ್ಥಿಗಳು ಪಿಎಚ್.ಡಿ. ಪದವಿ, 1911 ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ 9,438 ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು 11,349 ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ್ಯಾಂಕುಗಳನ್ನು, ಬಿಎ/ಬಿಎಸ್ಡಬ್ಲ್ಯೂ/ಬಿಎಸ್ಸಿ/ಬಿಕಾಂ/ಬಿಬಿಎಂ/ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ್ಯಾಂಕುಗಳನ್ನು, ಬಿಎಫ್ಎ, ಬಿವಿಎ ಹಾಗೂ ಬಿಎ ಇಂಟಗ್ರೇಟೆಡ್ ಕನ್ನಡ ಪಂಡಿತ್ಗೆ ತಲಾ ಒಂದು ರ್ಯಾಂಕು ಘೋಷಿಸಿದೆ. ಒಟ್ಟು 76 ವಿದ್ಯಾರ್ಥಿಗಳಿಗೆ 106 ಚಿನ್ನದ ಪದಕಗಳನ್ನು, ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ಆರು ನಗದು ಬಹುಮಾನಗಳನ್ನು ವಿಶ್ವವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ ಎಂದು ತಿಳಿಸಿದರು.
ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮೂರು ಜನರಿಗೆ ಡಾಕ್ಟರೇಟ್ ನೀಡಲಾಗಿದೆ. ಉದ್ಯಮ ಮತ್ತು ಸಮಾಜ ಸೇವೆಗಾಗಿ ದಿಲೀಪ್ ಜಿ. ಸುರಾನ, ಸಾಹಿತ್ಯ ಕ್ಷೇತ್ರಕ್ಕಾಗಿ ಲೇಖಕರು, ಸಾಹಿತಿಗಳಾದ ಹಂ.ಪ.ನಾಗರಾಜಯ್ಯ, ಮತ್ತು ಪತ್ರಿಕೋದ್ಯಮ ಮತ್ತು ಸಾರ್ವಜನಿಕ ಸೇವೆಗಾಗಿ ಪತ್ರಕರ್ತರಾದ ಎಸ್.ನಾಗಣ್ಣನವರು ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ಕುಲಪತಿಗಳು ತಿಳಿಸಿದರು.