ತುಮಕೂರು : ಈಗಾಗಲೇ ಸಿದ್ದವಿರುವ 10ಸಾವಿರ ನಿವೇಶನಗಳ ಜೊತೆಗೆ, ಮಾರ್ಚ್ 2026ರೊಳಗೆ ಹೆಚ್ಚುವರಿ 10ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಒತ್ತುವರಿಯಾಗಿರುವ ಆಶ್ರಯ ಯೋಜನೆಯ ಜಮೀನುಗಳನ್ನು ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ಸರ್ವೇ ಇಲಾಖೆಯ ಭೂದಾಖಲೆಗಳ ಸಹಾಯಕ ನಿರ್ದೇಶಕರಿಗೆ ಜಮೀನುಗಳಿಗೆ ಗಡಿ ಗುರುತಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ ಅವರು, ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಬಾಕಿ ಇರುವ ಎಲ್ಲಾ ನಕ್ಷೆಗಳನ್ನು ಅನುಮೋದಿಸಿ ಕೊಡಲು ಕಟ್ಟು ನಿಟ್ಟಿನ ಆದೇಶ ನೀಡಿದರು.
ಲಭ್ಯವಿರುವ ಜಮೀನನ್ನು ಅಭಿವೃದ್ಧಿಪಡಿಸಿ ನಿವೇಶನ ವಿಂಗಡಿಸಿ ಗ್ರಾಮ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳು, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್, ಕಾರ್ಯ ನಿರ್ವಾಹಕ ಅಧಿಕಾರಿಗಳು, ವಸತಿ ನೋಡಲ್ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.