ತುಮಕೂರು: ಎಸ್.ಎಸ್.ಎಲ್.ಸಿ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಶೇ.30ಕ್ಕಿಂತ ಕಡಿಮೆ ಫಲಿತಾಂಶದ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಯ ಎರಡೂ ಜಿಲ್ಲೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ಮಾರ್ಚ್ 18ರಿಂದ ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆ ಬಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಸಿ ಮಾತನಾಡಿದ ಅವರು, ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕನಿಷ್ಠ ಫಲಿತಾಂಶ ನೀಡದ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಕುಸಿದರೆ ಡಿಡಿಪಿಐ ಹಾಗೂ ಬಿಇಒ ಗಳೆ ಹೊಣೆಯಾಗಿರುವುದಾಗಿ ಪ್ರಗತಿ ಪರಿಶೀಲನಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದಾಗ್ಯೂ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳದ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇತ್ತೀಚಿಗೆ ನಡೆದ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ನೀಡಿದ ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡುವಂತೆ ಸೂಚಿಸಿದರು.
ಇದೇ 23ರಿಂದ ಮೂರನೇ ಪೂರ್ವ ಸಿದ್ಧತಾ ಪರೀಕ್ಷೆ ಇರುವುದರಿಂದ ಮುಖ್ಯ ಪರೀಕ್ಷೆವರೆಗೆ ಪ್ರತಿ ದಿನವೂ ಬೆಳಗ್ಗೆ 6ಗಂಟೆಯಿಂದ ವಿಶೇಷ ತರಗತಿ ನಡೆಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ ವರ್ಷದ ಫಲಿತಾಂಶಕ್ಕಿಂತ ಉತ್ತಮ ಫಲಿತಾಂಶದ ನಿರೀಕ್ಷೆ ಇದ್ದು ಶೇ.100ಫಲಿತಾಂಶದ ಗುರಿ ಇರಬೇಕು. ಅದಕ್ಕೆ ಪೂರಕವಾದ ತಯಾರಿಯನ್ನು ಮಕ್ಕಳಿಗೆ ನೀಡಬೇಕು ಎಂದರು.
ಪರೀಕ್ಷಾ ಪದ್ಧತಿ ಅತ್ಯಂತ ಸುಲಭ ಇದೆ. ಈಗಲೂ ಮಕ್ಕಳನ್ನು ಪಾಸು ಮಾಡಿಸಲು ಆಗಲಿಲ್ಲ ಎಂದರೆ ತಾವು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತುಮಕೂರು ನಗರ ಸೇರಿದಂತೆ ನಗರ ಪಟ್ಟಣ ಪ್ರದೇಶದಲ್ಲಿ ಶೂನ್ಯ ಫಲಿತಾಂಶದ ಶಾಲಾ ಮುಖ್ಯ ಶಿಕ್ಷಕರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇಂದಿನಿಂದ ಗುಣಮಟ್ಟದ ಫಲಿತಾಂಶಕ್ಕೆ ಚಟುವಟಿಕೆಗಳು ಆರಂಭವಾಗಬೇಕು ಎಂದ ಅವರು, ತಾವೂ ಅಚ್ಚರಿ ಭೇಟಿ ನೀಡಲಿದ್ದು ತಮ್ಮ ಕಾರ್ಯ ಚಟುವಟಿಕೆ ಪರಿಶೀಲಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಶೇ.50ಕ್ಕಿಂತ ಕಡಿಮೆ ಫಲಿತಾಂಶದ ಶಾಲಾ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎರಡೂ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.