ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತ ಹಾಗೂ ನಿರ್ಭೀತಿ ಪರೀಕ್ಷೆಗೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ

ತುಮಕೂರು : ಜಿಲ್ಲೆಯಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಮುಕ್ತ ಹಾಗೂ ನಿರ್ಭೀತಿ ವ್ಯವಸ್ಥೆಯಲ್ಲಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆ ಕುರಿತು ವಿವರ ನೀಡಿದ ಅವರು, ಪ್ರಸಕ್ತ ಸಾಲಿನಲ್ಲಿ 24753 ವಿದ್ಯಾರ್ಥಿಗಳು ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸಲು ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. 

ವಿದ್ಯಾರ್ಥಿಗಳು ನಿರ್ಭಿಡೆಯಿಂದ ಪರೀಕ್ಷೆ ಬರೆಯಲು ಮಧುರ ವಾತಾವರಣವನ್ನು ನಿರ್ಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಸೂಕ್ತ ಭದ್ರತೆಯಲ್ಲಿ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಭದ್ರತೆ ಒದಗಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯತ್ ಕಚೇರಿಗಳಲ್ಲಿ ವಾರ್ ರೂಂಗಳನ್ನು ತೆರೆಯಲಾಗಿದೆ. ಜಿಲ್ಲೆಯ ಎಲ್ಲಾ 41 ಪರೀಕ್ಷಾ ಕೇಂದ್ರಗಳ ವೀಕ್ಷಣೆಯನ್ನು ಮಾಡಬಹುದಾಗಿದೆ. ಇದಕ್ಕಾಗಿ ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕಕ್ಕೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳು ತಮ್ಮ ಊರುಗಳಿಂದ ಸಕಾಲಕ್ಕೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸುಗಮ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ತುಮಕೂರು ಜಿಲ್ಲೆಯ 2 ಶೈಕ್ಷಣಿಕ ಜಿಲ್ಲೆಗಳ ಪೈಕಿ ತುಮಕೂರಿನ 30 ಕೇಂದ್ರಗಳು ಹಾಗೂ ಮಧುಗಿರಿಯ 11 ಕೇಂದ್ರಗಳು ಸೇರಿ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ಹೊಸದಾಗಿ 22851 ವಿದ್ಯಾರ್ಥಿಗಳು, ಖಾಸಗಿಯಾಗಿ 285 ವಿದ್ಯಾರ್ಥಿಗಳು, 1606 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 11 ಫಲಿತಾಂಶ ಸುಧಾರಣೆ ವಿದ್ಯಾರ್ಥಿಗಳು ಸೇರಿ ಒಟ್ಟು 24753 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದ ಅವರು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ವರ್ಷವಿಡೀ ವ್ಯಾಸಂಗ ಮಾಡಿರುವ ಜ್ಞಾನವನ್ನು ಅಂದಿನ ಪರೀಕ್ಷೆಯಲ್ಲಿ ಯಾವುದೇ ಆತಂಕವಿಲ್ಲದೆ ನಿರ್ಭಿಡೆಯಿಂದ ಪರೀಕ್ಷೆ ಬರೆಯುವಂತೆ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಭಾಶಯ ಕೋರಿದರು. ಈ ಪರೀಕ್ಷೆಯ ನಂತರವೂ ಅನುತ್ತೀರ್ಣರಾದಲ್ಲಿ ಇನ್ನೂ 2 ಅವಕಾಶಗಳು ಪರೀಕ್ಷೆ ಬರೆಯಲು ಇದ್ದು, ಅಂತಹ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದರು. ಯಾವುದಾದರೂ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಆತಂಕ ಅಥವಾ ಸಮಸ್ಯೆಗಳಿದ್ದಲ್ಲಿ ಕಂಟ್ರೋಲ್ ರೂಮ್ ನಂಬರ್ 1098ಗೆ ಕರೆ ಮಾಡಿ ಮಾತನಾಡಬಹುದು ಎಂದು ಅವರು ತಿಳಿಸಿದರು.

ಅಲ್ಲದೆ, ಪೋಷಕರು ಪರೀಕ್ಷಾ ಸಂದರ್ಭದಲ್ಲಿ ತಮ್ಮ ಮಕ್ಕಳ ಮೇಲೆ ಒತ್ತಡವೇರದೆ ಅಥವಾ ಮಕ್ಕಳಿಗೆ ಖುಷಿ ಕೊಡುವ ಆಹಾರ ಕೊಡುವ ಮೂಲಕ, ಉತ್ತೇಜನದ ಮಾತುಗಳನ್ನಾಡಿ ಪ್ರೋತ್ಸಾಹಿಸುವ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಬೇಕಾಗಿದೆ ಎಂದು ಅವರು ಮನವಿಯನ್ನೂ ಮಾಡಿದರು.

ಪರೀಕ್ಷಾ ಕೇಂದ್ರದ 200 ಮೀಟರ್ ಪರಿದಿಯಲ್ಲಿ ಯಾವುದೇ ಜೆರಾಕ್ಸ್ ಅಂಗಡಿಗಳು ಅಥವಾ ಸೈಬರ್ ಕೆಫೆಗಳು ಕಾರ್ಯನಿರ್ವಹಿಸದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ನಿಷೇಧಾಜ್ಞೆ ವಿಧಿಸಲಾಗಿರುತ್ತದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ನಿಗಧಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯಲು ಮಾರ್ಗಾಧಿಕಾರಿಗಳ ತಂಡವನ್ನು ನೇಮಿಸಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಯಾವುದೇ ಸಮಸ್ಯೆ ಅಥವಾ ಗೊಂದಲಗಳು ಆಗದಂತೆ ಜವಾಬ್ದಾರಿವಹಿಸಲಾಗಿದೆ ಎಂದರು.

ಪ್ರಸ್ತುತ ತುಮಕೂರು ಜಿಲ್ಲೆ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ 4ನೇ ಸ್ಥಾನದಲ್ಲಿದ್ದು, ಗುಣಮಟ್ಟದ ಪರೀಕ್ಷೆ ಮೂಲಕ ಇನ್ನೂ ಉತ್ತಮ ಸ್ಥಾನಕ್ಕೆ ಏರುವ ಎಲ್ಲಾ ವಿಶ್ವಾಸವಿದೆ. ಕಾನೂನು ಬಾಹಿರ ಚಟುಟಿಕೆಗಳಿಗೆ ಆಸ್ಪದವಿಲ್ಲ ಎಂದ ಅವರು, ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ತುಮಕೂರು ಉಪವಿಭಾಗಾಧಿಕಾರಿ ನಾಹಿದಾ ಜûಮ್ ಜûಮ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *