ಸಂಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ತುಮಕೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ನೇರ ನೇಮಕಾತಿ, ಪದೊನ್ನತ್ತಿ, ಬ್ಯಾಕ್‍ಲಾಗ್, ಕೆಐಎಡಿಬಿ, ಬಿಡಿಎ ಹಾಗೂ ಸರಕಾರಿ ಗುತ್ತಿಗೆ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಇಂದು ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ನಗರದ ಟೌನ್ ಹಾಲ್‍ನಲ್ಲಿ ಸಮಾವೇಶಗೊಂಡ ಸಾವಿರಾರು ಒಳಮೀಸಲಾತಿ ಹೋರಾಟ ಸಮಿತಿಯ ಸದಸ್ಯರುಗಳು,ಬಿ.ಜಿ.ಎಸ್ ವೃತ್ತದಿಂದ ಅಶೋಕ ರಸ್ತೆಯ ಮೂಲಕ ಚರ್ಚ್ ಸರ್ಕಲ್,ಕೋಡಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ, ಜಿಲ್ಲಾಧಿಕಾರಿ ಶುಭಾಕಲ್ಯಾಣ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡಿದ್ದ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ,ಮಾದಿಗ ಸಮುದಾಯ ಕಳೆದ 35 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರಿಂಕೋರ್ಟಿನ 7 ನ್ಯಾಯಾಧೀಶರ ಪೀಠದ ತೀರ್ಪಿನಂತೆ, ರಾಜ್ಯ ಸರಕಾರ ನ್ಯಾ.ನಾಗಮೋಹನ್‍ದಾಸ್ ಅವರ ಸಮಿತಿ ವರದಿಯನ್ನು ಆಧರಿಸಿ ಒಳಮೀಸಲಾತಿಯನ್ನು ಘೋಷಣೆ ಮಾಡಿದೆ. ನಾವು ಯಾರ ಪಾಲನ್ನು ಕೇಳುತ್ತಿಲ್ಲ.ನಮ್ಮ ಪಾಲಿನ ಹಕ್ಕನ್ನು ಎಲ್ಲಾ ರಂಗದಲ್ಲಿಯೂ ನೀಡಿ ಎಂದು ಕೇಳುತಿದ್ದೇವೆ. ಇದು ನಮ್ಮ ನ್ಯಾಯ ಸಮ್ಮತ ಬೇಡಿಕೆಯಾಗಿದೆ. ಮಾದಿಗರು ಮತ್ತು ಹೊಲೆಯರ ಮೇಲೆ ರಾಜ್ಯ ಸರಕಾರ ಪರಸ್ವರ ದೋಷಾರೋಪಣೆ ಮಾಡುವುದರನ್ನು ಬಿಟ್ಟು, ಸುಪ್ರಿಂಕೋರ್ಟಿನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಎಲ್ಲಾ 101 ಜಾತಿಗಳಿಗೂ ಅನ್ಯಾಯವಾಗದ ರೀತಿ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಈ ಬಜೆಟ್ ಅಧಿವೇಶನದಲ್ಲಿ ಸಂಪೂರ್ಣ ಒಳಮೀಸಲಾತಿಗೆ ಜಾರಿ ಘೋಷಿಸಬೇಕು. ನಮ್ಮ ತಾಳ್ಮೆ ಪರೀಕ್ಷೆ ಮಾಡಲು ಸರಕಾರ ಹೋಗಬಾರದು ಎಂಬ ಎಚ್ಚರಿಕೆಯನ್ನು ನೀಡಿದರು.

ಚಿಂತಕ ಕೆ.ದೊರೆರಾಜು ಮಾತನಾಡಿ,ಸುಪ್ರಿಂಕೋರ್ಟಿನ ಆದೇಶದನ್ವಯ ನ್ಯಾ.ನಾಗಮೋಹನ್‍ದಾಸ್ ಸಮಿತಿ ರಚಿಸಿ, ಅದರ ವರದಿಯನ್ನು ಪಡೆದುಕೊಂಡು,ಪರಿಶಿಷ್ಟ ಜಾತಿಗಳನ್ನು ಜನಸಂಖ್ಯೆ ಮತ್ತು ಹಿಂದುಳಿದಿರುವಿಕೆಯ ಆಧಾರದಲ್ಲಿ ಮಾಡಿದ ವರ್ಗೀಕರಣವನ್ನು ಒಪ್ಪಿಕೊಂಡಿರುವ ಸರಕಾರ ಅದನ್ನು ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದೆ. ಬೊಮ್ಮಾಯಿ ಅವರ ಸರಕಾರ ಹೆಚ್ಚು ಮಾಡಿದ ಮೀಸಲಾತಿ ಪ್ರಮಾಣ ಹಾಗೂ ಒಳಮೀಸಲಾತಿಯನ್ನು ಸಂವಿಧಾನದ 9ನೇ ಷಡ್ಯೋಲ್‍ಗೆ ಸೇರಿಸುವುದು. ಶಾಶ್ವತ ಆಯೋಗ ರಚನೆ ಮುಂತಾದ ವಿಚಾರಗಳನ್ನು ಸರಕಾರ ಬಜೆಟ್ ಅಧಿವೇಶನದಲ್ಲಿ ಜಾರಿಗೆ ತರುವ ಭರವಸೆ ನೀಡಬೇಕು.ಒಳಮೀಸಲಾತಿ ವಿಷಯ ಇಟ್ಟುಕೊಂಡು 2028ರ ಚುನಾವಣೆಯ ಗೆಲುವಿನ ಕನಸು ಕಾಣುವುದನ್ನು ಬಿಟ್ಟು, ಸಾಮಾಜಿಕ ನ್ಯಾಯಕ್ಕಾಗಿ ಹಾತೊರೆಯುತ್ತಿರುವ ಸಮುದಾಯಕ್ಕೆ ನ್ಯಾಯ ಒದಗಿಸಿ ಎಂದು ಆಗ್ರಹಿಸಿದರು.

ಜಿ.ಪಂ.ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ, ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಮಾದಿಗ ಸಮುದಾಯಕ್ಕೆ ಅನ್ಯಾಯಮಾಡುತ್ತಿದೆ. ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆಯನ್ನು ಇಡೀ ಮಾದಿಗ ಸಮುದಾಯ ಕಳೆದುಕೊಂಡಿದೆ. ಒಂದು ಸಮುದಾಯದ ಮಂತ್ರಿಗಳ ಕೈಗೊಂಬೆಯಾಗಿ ನಮಗೆ ಅನ್ಯಾಯ ಮಾಡುತ್ತಿದೆ .ನ್ಯಾ.ಸದಾಶಿವ ಆಯೋಗದ ವರದಿಯನ್ನು ವಿರೋಧಿಸಿದ ಸಮುದಾಯವೇ, ನ್ಯಾ.ನಾಗಮೋಹನ್‍ದಾಸ್ ಸಮಿತಿಯ ಒಳಮೀಸಲಾತಿಯ ಸಂಪೂರ್ಣ ಜಾರಿಗೆ ಅಡ್ಡಿ ಪಡಿಸುತ್ತಿದೆ ಹಾಗಾಗಿ ಮಾದಿಗ ಸಮುದಾಯದ ಪ್ರತಿಯೊಬ್ಬರು ಈ ಹೋರಾಟದಲ್ಲಿ ಕೈಜೋಡಿಸಿ, ಹೋರಾಟಕ್ಕೆ ತಮ್ಮ ತನು, ಮನ, ಧನದ ಸಹಾಯದ ಮೂಲಕ ಹೋರಾಟವನ್ನು ಉಗ್ರ ಸ್ಪರೂಪಕ್ಕೆ ತೆಗೆದುಕೊಂಡು ಹೋಗಲು ಸಹಕಾರ ನೀಡಬೇಕಾಗಿದೆ ಎಂದರು.

ಕರ್ನಾಟಕ ಮಾದಾರ ಮಹಾಸಭಾದಜಿಲ್ಲಾಧ್ಯಕ್ಷ ಹಾಗೂ ಜಿ.ಪಂ.ಮಾಜಿಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿದರು.

ಮಾಜಿ ಶಾಸಕರಾದ ಗಂಗಹನುಮಯ್ಯ, ಹೋರಾಟಗಾರರಾದ ಡಾ.ಅರುಂಧತಿ,ಪಾವಗಡ ಶ್ರೀರಾಮ ಸೇರಿದಂತೆ ಹಲವರು ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ವಾಲೆಚಂದ್ರಯ್ಯ, ಹನುಮಂತರಾಯಪ್ಪ, ಕೊಟ್ಟಶಂಕರ್, ರಂಗಸ್ವಾಮಯ್ಯ ಸಿದ್ದಾಪುರ,ದೊಡ್ಡೇರಿಕಣಿಮಯ್ಯ,ನರಸೀಯಪ್ಪ, ಕೊಡಿಯಾಲ ಮಹದೇವ್, ಉದ್ಯಮಿ ಡಿ.ಟಿ.ವೆಂಕಟೇಶ್,ಹೊಳಕಲ್ಲು ಅಂಜನಪ್ಪ,ಸಿ.ಗಂಗರಾಜು,ಡಾ.ಲಕ್ಷ್ಮಿಕಾಂತ್,ನವೀನ್ ಪೂಜಾರಹಳ್ಳಿ,ಶಿರಾ ರಾಜಸಿಂಹ, ಕುಣಿಗಲ್ ಶಿವಶಂಕರ್, ಹಂದಿಜೋಗಿ ಜಿಲ್ಲಾ ಸಂಘದ ಅಧ್ಯಕ್ಷರಾದ ಮುಕುಂದ, ಕಾರ್ಯದರ್ಶಿ ಚಂದ್ರಶೇಖರ್, ಉಪಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಸಾವಿರಾರುಜನರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *