ಶೇ‌.50 ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅನುಮೋದಿಸಬೇಕು: ಡಾ.ಜಿ.ಪರಮೇಶ್ವರ

ತುಮಕೂರು : ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ರಾಜೀವಗಾಂಧಿ ಅವರು ಪ್ರಧಾನಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ಸ್ಥಾನಮಾನಗಳನ್ನು ಕೊಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಅವಕಾಶಗಳನ್ಮು ನೀಡಲಾಯಿತು‌. ಅದರಿಂದ ಇದೀಗ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿ ಪ್ರಾಧಾನ್ಯತೆ ಸಿಕ್ಕೆದೆ ಎಂದರು.


ನಂತರ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಇದ್ದಾಗ ಸಂಸತ್ತಿನಲ್ಲೂ ಶೇ.50 ಅವಕಾಶ ಕಲ್ಪಿಸುವ ಮಹಿಳಾ ಮಸೂದೆಯನ್ನು ಮಂಡಿಸಲಾಯಿತು. ಆ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅದು ಅನುಮೋದನೆ ಆಗಲಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಈ ಮಸೂದೆಯನ್ನು ಅನುಮೋದಿಸಿ ಮಹಿಳೆಗೆ  ಶಕ್ತಿ ನೀಡಬೇಕು ಎಂದರು.

ಇಡೀ ವಿಶ್ವದಲ್ಲಿ ಭಾರತದಲ್ಲಿಯೇ ಮಹಿಳೆಯರಿಗೆ ಹೆಚ್ಚು  ಅವಕಾಶಗಳನ್ನು ಕಲ್ಪಿಸಿ ಸಬಲೀಕರಣಗೊಳಿಸಲಾಗಿದೆ. ಇಂದು ಮಹಿಳೆ ಎಲ್ಲ ಕ್ಷೇತ್ರದಲ್ಲೂ ಪುರುಷರನ್ನು ಹಿಂದಿಕ್ಕಿ ಸಾಧನೆ ಮಾಡುತ್ತಿದ್ದಾರೆ ಎಂದರು. ನಮ್ಮ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿಯೇ ಘೋಷಿಸಿದಂತೆ ಮಹಿಳೆಯರ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಯಾರೂ ಅವಕಾಶಗಳನ್ನು ಕಾದು ಕೂರುವುದು ಸರಿಯಲ್ಲ. ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದರು.


ವಿಶೇಷವಾಗಿ ಮಹಿಳೆಯವರು ಅತಿದೊಡ್ಡ ಜವಾಬ್ದಾರಿ ಹೊಂದಿರುತ್ತಾರೆ. ಮನೆಯ ಒಳಗೆ ಮತ್ತು ಹೊರಗೆ ದುಡಿಯಬೇಕಾಗುತ್ತದೆ. ಈ ನಡುವೆ ತಮ್ಮ ಆರೋಗ್ಯವನ್ನೂ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ 2ವರ್ಷಗಳು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ಮು ಮಾಡಿದ್ದು, ಜಿಲ್ಲೆಯಲ್ಲಿ 1160 ಕಂದಾಯ ಗ್ರಾಮಗಳನ್ನು ಗುರುತಿಸಿದ್ದು, ಸದ್ಯದಲ್ಲೇ 22ಸಾವಿರ ಹಕ್ಕುಪತ್ರಗಳನ್ನು ನೀಡಲಿದ್ದೇವೆ. ಇದನ್ನು ನಾವು ಸೃಷ್ಟಿಕೊಂಡಿದ್ದೇವೆ ಎಂದರು.


ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ನೂರುನ್ನಿಸಾ ಮಾತನಾಡಿ, ಮಹಿಳೆ ಪುರುಷರಿಗೆ ಸ್ಪರ್ಧಿಯಾಗುವುದು ಬೇಡ, ಮಹಿಳೆಯೇ ತಮ್ಮ ಆತ್ಮ ಸಂತೋಷಕ್ಕಾಗಿ ಕೆಲವು ಜವಾಬ್ದಾರಿಗಳನ್ನು ನಿಭಾಯಿಸಬೇಕಿದೆ ಎಂದರು. ಇಂದಿನ ದಿನಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿದ್ದಾರೆ, ಆದರೆ ಆರ್ಥಿಕ ಸ್ವಾಲಂಭನೆಯನ್ನು ಅನುಭವಿಸುವ ಹಕ್ಕನ್ನು ಜಯಿಸಿಕೊಳ್ಳಬೇಕಿದೆ ಎಂದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಸಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೆಶಕಿ ಸೌಮ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.


ತುಮಕೂರು ಜಿಲ್ಲೆಯ ಎಲ್ಲ ಮಹಿಳಾ ಅಧಿಕಾರಗಳು ಹಾಗೂ ಮಹಿಳಾ ಸಾಧಕಿಯರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

Leave a Reply

Your email address will not be published. Required fields are marked *