ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಡಿ.ಸಿ. ಸೂಚನೆ

ತುಮಕೂರು : ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿಂದ ಸಂಭವಿಸಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗವಾಗಿರುವ ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುನ್ನೆಚ್ಚರಿಕೆ ಹಾಗೂ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳವಾರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಬರ ಪರಿವೀಕ್ಷಣೆ ಮತ್ತು ಮುಂಗಾರು ಹಂಗಾಮಿನ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ನೆರೆ ರಾಜ್ಯವಾಗಿರುವ ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿದ್ದು, ಆಂಧ್ರಪ್ರದೇಶದ ಗಡಿ ಜಿಲ್ಲೆಯಾಗಿರುವ ತುಮಕೂರಿನ ಪಾವಗಡ ತಾಲ್ಲೂಕು ಭಾಗದಲ್ಲಿ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ತಾಲ್ಲೂಕು ಆಡಳಿತದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಪ್ರಸ್ತುತ ಮುಂಗಾರು ಹಂಗಾಮಿನ ಮಳೆಯ ಸ್ಥಿತಿ, ಬಿತ್ತನೆ ಪ್ರಗತಿ, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ ಕುರಿತು ಸಮಗ್ರವಾಗಿ ಪರಿಶೀಲಿಸಿದ ಅವರು, ಮಳೆಯಿಂದ ಉಂಟಾದ ಹಾನಿಗಳಿಗೆ ಪರಿಹಾರ ಪಾವತಿಯ ಪ್ರಗತಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನ ಸ್ಥಿತಿ, ಜಾನುವಾರುಗಳಿಗೆ ಮೇವು ಲಭ್ಯತೆ, ಕೆರೆಗಳ ಒತ್ತುವರಿ ತೆರವು ಹಾಗೂ ಸಂರಕ್ಷಣೆ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪರಿಶೀಲಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಬಿ.ಎಂ. ಚಂದ್ರಶೇಖರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ್ ಕಳ್ಳೆಣ್ಣವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ್, ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *