ತುಮಕೂರು : ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಉಪ ಮುಖ್ಯಮಂತ್ರಿ, ಕಂದಾಯ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಬರಪರಿಸ್ಥಿತಿ ಕುರಿತು ವಿಶೇಷ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರಪರಿಸ್ಥಿತಿ ಎದುರಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಹಾಗೂ ತಾವು ವಿಭಾಗಾವಾರು ಪರಿಶೀಲನಾ ಸಭೆ ನಡೆಸಿದ್ದೇವೆ. ಅಂತೆಯೇ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ನೀಡುವಂತೆ ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.
ಬರ ಘೋಷಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮಗಳನ್ನು ಸಡಿಲಗೊಳಿಸುವಂತೆ ಹಾಗೂ ಬರ ನಿರ್ವಹಣೆಗಾಗಿ ಪರಿಹಾರವನ್ನು ನೀಡುವಂತೆ ಮುಖ್ಯಮಂತ್ರಿ ಅವರು ಹಾಗೂ ತಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.
ಕೇಂದ್ರ ಸರ್ಕಾರ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ನಿರ್ವಹಣೆಗಾಗಿ ಮುಂಗಡವಾಗಿ ಪರಿಹಾರವನ್ನು ವಿತರಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೋರಲಾಗಿದೆ. ಆದರೂ ರಾಜ್ಯ ಸರ್ಕಾರ ಸುಮ್ಮನೆ ಕೂರುವುದಿಲ್ಲ. ರಾಜ್ಯದ ಬರಪರಿಸ್ಥಿತಿ ನಿರ್ವಹಣೆಗೆ ಸೂಕ್ತ ಕ್ರಮವಹಿಸುತ್ತಿದೆ. ಈಗಾಗಲೇ ರಾಜ್ಯಾದ್ಯಂತ ವಿಭಾಗ ಮಟ್ಟದ ಸಭೆಗಳನ್ನು ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಕುಡಿಯುವ ನೀರು ಹಾಗೂ ಇತ್ಯಾದಿ ಕ್ರಮಗಳಿಗಾಗಿ ರಾಜ್ಯ ಸರ್ಕಾರ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಕೇವಲ ಶೇ.9.34ರಷ್ಟು ಬಿತ್ತನೆಯಾಗಿದೆ. ಪಾವಗಡ ತಾಲ್ಲೂಕು ಹೊರತುಪಡಿಸಿ ಮಳೆ ಪ್ರಮಾಣ ಕಡಿಮೆಯಾಗಿರುವ ಉಳಿದ ತಾಲ್ಲೂಕುಗಳು ಬರಪೀಡಿತ ತಾಲ್ಲೂಕುಗಳಾಗುವ ಸಾಧ್ಯತೆಯಿದೆ. ಜಾನುವಾರು ಮೇವಿನ ಸಮಸ್ಯೆ, ಕೂಲಿ ಕೆಲಸದ ಸಮಸ್ಯೆಗಳಿಂದ ಜನ-ಜಾನುವಾರುಗಳು ಗುಳೆ ಹೋಗುವ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಜಾನುವಾರುಗಳ ಮೇವಿಗಾಗಿ ರೈತರಿಗೆ ಮೇವಿನ ಕಿಟ್ಗಳನ್ನು ವಿತರಿಸಲಾಗುವುದು. ಜಿಲ್ಲೆಯಲ್ಲಿರುವ ಕೊಳವೆ ಬಾವಿ, ಕೆರೆ-ಕಟ್ಟೆಗಳು ನೀರಿಲ್ಲದೆ ಬತ್ತಿಹೋಗುತ್ತಿರುವುದರಿಂದ ಗಂಭೀರ ಪರಿಸ್ಥಿತಿ ಉಂಟಾಗಿದೆ. ಸರ್ಕಾರದಿಂದ ಕುಡಿಯುವ ನೀರಿನ ಕಾಮಗಾರಿಗಳಿಗೆ ಪ್ರತಿ ಜಿಲ್ಲೆಗೆ 5 ಕೋಟಿ ರೂ. ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ 3.50ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ತುರ್ತು ಪರಿಸ್ಥಿತಿಗಳಲ್ಲಿ ಈ ಅನುದಾನವನ್ನು ಬಳಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ವಾರಕ್ಕೊಮ್ಮೆ ಟಾಸ್ಕ್ಫೋರ್ಸ್ ಸಭೆ ನಡೆಸಿ ಕೈಗೊಂಡ ನಿರ್ಣಯಗಳ ಸಭಾ ನಡಾವಳಿಯನ್ನು ಜಿಲ್ಲಾ ಟಾಸ್ಕ್ಫೋರ್ಸ್ಗೆ ಶಿಫಾರಸ್ಸು ಮಾಡಬೇಕು. ಜಿಲ್ಲಾಧಿಕಾರಿಗಳು ಅದನ್ನು ಪರಿಶೀಲಿಸಿ ಸರ್ಕಾರಕ್ಕೆ ಕಳುಹಿಸುವಂತೆ ಸೂಚಿಸಲಾಗಿದೆ. ಟಾಸ್ಕ್ಫೋರ್ಸ್ನಲ್ಲಿ ಕೈಗೊಂಡ ನಿರ್ಣಯದಂತೆ ಅದರ ಶಿಫಾರಸ್ಸಿನ ಅನ್ವಯ ಸರ್ಕಾರ ಕ್ರಮವಹಿಸಲಿದೆ ಎಂದು ಅವರು ತಿಳಿಸಿದರು.
ನೆರೆಯ ಆಂಧ್ರಪ್ರದೇಶ ರಾಜ್ಯ ಅನಂತಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಈಗಾಗಲೇ ಇಬ್ಬರು ಮೃತಪಟ್ಟಿರುವ ವರದಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಗಡಿ ಭಾಗಗಳಲ್ಲಿ ಜಿಲ್ಲೆಗೆ ಪ್ರವೇಶಿಸದಂತೆ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಕೋವಿಡ್ ಪ್ರಕರಣಗಳು ವರದಿಯಾದರೆ ಸೋಂಕಿತರನ್ನು ಕ್ವಾರಂಟೈನ್ ಮಾಡಲು ಈಗಾಗಲೇ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಬರಪರಿಸ್ಥಿತಿಯ ನೆರವಿಗಾಗಿ ರೈತರಿಗೆ ಸಹಾಯಧನ ನೀಡುವುದು ಸೇರಿದಂತೆ ಜಿಲ್ಲೆಯ ಶಾಸಕರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಬರನಿರ್ವಹಣೆ ಕುರಿತು ಬೆಳಗಾವಿ ವಿಭಾಗದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ಪರಿಶೀಲನಾ ಸಭೆ ನಡೆಸಿದ್ದು, ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ಜುಲೈ 25ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮೈಸೂರಿನಲ್ಲಿ ಪರಿಶೀಲನಾ ಸಭೆ ನಡೆಸುವರು ಎಂದರು.
ಇದಕ್ಕೂ ಮುನ್ನ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಎದುರಾಗಿರುವ ಬರಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫೆಸಿಫಿಕ್ ಮೇಲ್ಮೈ ಉಷ್ಣತೆಯಲ್ಲಿ ವ್ಯತ್ಯಾಸ, ಸೂಪರ್ ಎಲ್ನಿನೋ ಪರಿಣಾಮದಿಂದ ಪ್ರಕೃತಿ ವಿಕೋಪ ಉಂಟಾಗಿ ಭಾರತದಲ್ಲಿ ಭೀಕರ ಪರಿಸ್ಥಿತಿ ಎದುರಾಗಿದೆಯಲ್ಲದೆ, ಮಳೆ ಪ್ರಮಾಣ ಕಡಿಮೆಯಾಗಿದೆ. 150 ವರ್ಷಗಳ ಹಿಂದೆ 1876ರಲ್ಲಿ ಪ್ರಕೃತಿ ವಿಕೋಪ ಎಲ್ನಿನೋ ಉಂಟಾಗಿತ್ತು. ಈ ಪರಿಸ್ಥಿತಿಯನ್ನು ಪರಾಮರ್ಶೆ ನಡೆಸಿರುವ ಅಂತಾರಾಷ್ಟ್ರೀಯ ಮಟ್ಟದ ತಜ್ಞರು ಇದನ್ನು ಸೂಪರ್ ಎಲ್ನಿನೋ ಎಂದು ಹೇಳಿದ್ದಾರೆ. ಪ್ರಕೃತಿ ವಿಕೋಪದಿಂದ ಇಡೀ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದರು.
ಮಳೆಯ ಕೊರತೆಯಿಂದ ರಾಜ್ಯದ ಎಲ್ಲ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕರಾವಳಿ ಪ್ರದೇಶದಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ರಾಜ್ಯದ ಕೆಲವು ಜಲಾಶಯಗಳಿಗೆ ನೀರು ಸಂಗ್ರಹವಾಗಿದ್ದರೂ ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸರ್ಕಾರವು ಬರ ಪರಿಸ್ಥಿತಿಯನ್ನು ಅವಲೋಕಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲು ರಾಜ್ಯದಾದ್ಯಂತ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಳೆ ಮಾಪನ ಕೇಂದ್ರಗಳ ದುರಸ್ತಿಗೆ ನಿರ್ದೇಶನ :
ಜಿಲ್ಲೆಯಲ್ಲಿರುವ ಒಟ್ಟು 341 ಮಳೆ ಮಾಪನ ಕೇಂದ್ರಗಳ ಪೈಕಿ 110 ಕೇಂದ್ರಗಳು ಕೆಟ್ಟು ಹೋಗಿವೆ. ದುರಸ್ತಿಯಲ್ಲಿರುವ ಮಳೆ ಮಾಪನ ಕೇಂದ್ರಗಳ ದತ್ತಾಂಶವನ್ನು ನಂಬಲಾಗದು. ಈ ನಿಟ್ಟಿನಲ್ಲಿ ಕೆಟ್ಟು ಹೋಗಿರುವ ಮಳೆ ಮಾಪನ ಕೇಂದ್ರಗಳನ್ನು ಮೊದಲು ದುರಸ್ತಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯಾವುದೇ ಅಧಿಕಾರಿಗಳು ಹೊಸದಾಗಿ ಜಿಲ್ಲೆಗೆ ಬಂದಾಗ ಕಡ್ಡಾಯವಾಗಿ ಜಿಲ್ಲೆಯ ಎಲ್ಲ ಪ್ರತಿನಿಧಿಗಳನ್ನು ಸಂಪರ್ಕಿಸಿ ಪರಿಚಯ ಮಾಡಿಕೊಳ್ಳಬೇಕು. ತಾಲೂಕುಗಳ ಅಧಿಕಾರಿಗಳು ಆಯಾ ತಾಲೂಕು ಶಾಸಕರನ್ನು ಭೇಟಿ ಮಾಡಿ ಪರಿಚಯಿಸಿಕೊಳ್ಳುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮೇವಿನ ಬೀಜಗಳ ವಿತರಣೆಗೆ ಸಲಹೆ :
ನೀರು ಲಭ್ಯವಿರುವ ರೈತರು ಮೇವು ಬೆಳೆದು ಕೊಡುವುದಾದರೆ ಅವರಿಗೆ ಮೇವಿನ ಬೀಜ ವಿತರಿಸಬೇಕು ಎಂದು ಅವರು ಸಲಹೆ ನೀಡಿದರಲ್ಲದೆ, ಕುಡಿಯುವ ನೀರಿನ ಸಮಸ್ಯೆಯನ್ನು ನಿರ್ವಹಿಸಲು ಈಗಾಗಲೇ ಎಲ್ಲ ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ವಿಪತ್ತು ನಿರ್ವಹಣೆಗೆ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಅಧಿಕಾರಿಗಳು ಖರ್ಚು ಮಾಡಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಕೊರೆಯುವ ಕೊಳವೆ ಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ನೀಡಬೇಕು. ಆದ್ಯತೆ ಮೇಲೆ ಕೊಳವೆ ಬಾವಿಗಳನ್ನು ಕೊರೆಯಲು ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಅನುದಾನದ ಸದ್ಬಳಕೆ ಮಾಡಿಕೊಂಡು ಅಗತ್ಯ ಇರುವೆಡೆ ಕೊಳವೆ ಬಾವಿಗಳನ್ನು ಕೊರೆದು ಸಾರ್ವಜನಿಕರಿಗೆ ಕುಡಿಯುವ ನೀರಿನ ಬವಣೆ ಉಂಟಾಗದಂತೆ ನಿಗಾವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಅಷ್ಟಾಗಿ ತಲೆದೋರಿಲ್ಲವಾದರೂ ಕೊಳವೆ ಬಾವಿಗಳನ್ನು ಕೊರೆಯುವ ಅಗತ್ಯತೆಯಿದ್ದಲ್ಲಿ ಸೂಕ್ತ ಕ್ರಮವಹಿಸಬೇಕು. ಕುಡಿಯುವ ನೀರಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ಕಾಮಗಾರಿಗಳಿಗೆ ಮಾತ್ರ ಬಳಸಬೇಕು ಎಂದರಲ್ಲದೆ, ಆಗಸ್ಟ್ ತಿಂಗಳಲ್ಲಿ ಮಳೆ ಬಂದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ 1857 ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು. ಘಟಕಗಳಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣ ಬಗೆಹರಿಸಬೇಕು. ಖಾಸಗಿ ನಿರ್ವಹಣೆ ಇರುವೆಡೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ತಾಕೀತು ಮಾಡಿದರು.
ಡೆಂಗಿ ಪ್ರಕರಣಗಳ ವರದಿ-ಫೀವರ್ ಕ್ಲಿನಿಕ್ ತೆರೆಯಲು ಸೂಚನೆ :
ಜಿಲ್ಲೆಯ ಪಾವಗಡ ಹಾಗೂ ಮಧುಗಿರಿ ತಾಲ್ಲೂಕುಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ 3 ಲ್ಯಾಬ್ಗಳನ್ನು ಸಜ್ಜುಗೊಳಿಸಿ, ಫೀವರ್ ಕ್ಲಿನಿಕ್ಗಳನ್ನು ತೆರೆಯಲು ಕ್ರಮಕೈಗೊಳ್ಳಬೇಕು. ಕಲುಷಿತ ನೀರಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಜನರ ಆರೋಗ್ಯದ ದೃಷ್ಟಿಯಿಂದ ಓವರ್ ಹೆಡ್ ಟ್ಯಾಂಕ್ಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಶಾಸಕರಾದ ಸುರೇಶ್ ಬಾಬು, ರಮೇಶ್ ಬಾಬು, ಡಿ.ಟಿ. ಶ್ರೀನಿವಾಸ್, ಡಾ: ರಂಗನಾಥ್, ಬಿಎಂಟಿಸಿ ಉಪಾಧ್ಯಕ್ಷ ನಿಖೇತ್ ರಾಜ್ ಎಂ, ಗ್ಯಾರಂಟಿ ಸಮಿತಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.