ತುಮಕೂರು: ರಾಜ್ಯಕ್ಕೆ ಅನ್ಯಾಯವಾಗುವ ರೀತಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶವನ್ನು ವಿರೋಧಿಸಿತ್ತಿರುವ ನಾರಾಯಣಗೌಡರ ಬಣದ ಕರ್ನಾಟಕ ರಕ್ಷಣ ವೇದಿಕೆಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬಿಜಿಎಸ್ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ, ರಾಜ್ಯದಲ್ಲಿ ಈ ವರ್ಷದ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಪರಿಣಾಮ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ರೈತರ ಹಿತಾಸಕ್ತಿ ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವುದು ಅತ್ಯಗತ್ಯವಾಗಿದೆ. ಆದರೆ ಕಾವೇರಿ ನೀರು ನಿಯಂತ್ರ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರದ ತೀರ್ಪು ರಾಜ್ಯದ ಪಾಲಿಗೆ ಮರಣಶಾಸನವಾಗಿದೆ ಎಂದರು.
ಪ್ರಸ್ತುತ ಕೃಷ್ಣರಾಜಸಾಗರ ಜಲಾಶಯಕ್ಕೆ ಸುಮಾರು 2,800ರಿಂದ 3,000 ಕ್ಯೂಸೆಕ್ಸ್ ಮಾತ್ರ ಒಳಹರಿವು ಇದ್ದು, ಸುಮಾರು 1,700ರಿಂದ 1,800 ಕ್ಯೂಸೆಕ್ಸ್ ಹೊರಹರಿವು ಇದೆ. ಜಲಾಶಯದ ನೀರಿನ ಮಟ್ಟವೂ ಸುಮಾರು 92 ಅಡಿಗಳμÉ್ಟೀ ಇದ್ದು, ಇದು ಗರಿಷ್ಠ ಮಟ್ಟಕ್ಕಿಂತ ಸಾಕಷ್ಟು ಕಡಿಮೆಯಾಗಿದೆ. ಕೆಆರ್ಎಸ್ ಜಲಾಶಯದ ನೀರು ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರು, ಕೃಷಿ ಮತ್ತು ಕೈಗಾರಿಕಾ ಅಗತ್ಯಗಳಿಗೆ ಅತ್ಯಂತ ಪ್ರಮುಖವಾಗಿದೆ. ಅದೇ ರೀತಿ ಕಬಿನಿ ಜಲಾಶಯಕ್ಕೆ ಸುಮಾರು 12,000-15,000 ಕ್ಯೂಸೆಕ್ಸ್ ಒಳಹರಿವು ಇದ್ದರೂ,10,000-14,000 ಕ್ಯೂಸೆಕ್ಸ್ ಹೊರಹರಿವು ನಡೆಯುತ್ತಿದ್ದು, ಅದರಲ್ಲಿ 8,000-11,000 ಕ್ಯೂಸೆಕ್ಸ್ ನೀರು ಕಾವೇರಿ ಮೂಲಕ ತಮಿಳುನಾಡಿನ ಕಡೆ ಹರಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಜಲಾಶಯಗಳಲ್ಲಿರುವ ನೀರನ್ನು ರಾಜ್ಯದ ಜನರ ಕುಡಿಯುವ ನೀರು, ರೈತರ ಕೃಷಿ ಹಾಗೂ ಭವಿಷ್ಯದ ಅಗತ್ಯಗಳಿಗೆ ಸಂರಕ್ಷಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ರಾಜ್ಯದ ಹಿತಾಸಕ್ತಿಯ ಆಧಾರದ ಮೇಲೆ ಸರ್ಕಾರ ಬಲವಾಗಿ ವಿರೋಧಿಸಬೇಕು. ರಾಜ್ಯದ ಜಲಾಶಯಗಳ ವಾಸ್ತವಿಕ ನೀರಿನ ಸಂಗ್ರಹಣೆ ಹಾಗೂ ಮಳೆಯ ಕೊರತೆಯ ಕುರಿತು ಸಮಗ್ರ ವರದಿಯನ್ನು ಸಲ್ಲಿಸಿ ಕರ್ನಾಟಕದ ಪರವಾಗಿ ದೃಢವಾದ ವಾದ ಮಂಡಿಸಬೇಕು. ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬಾರದು. ಅಗತ್ಯವಿದ್ದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲ ಕಾನೂನು ವೇದಿಕೆಗಳಲ್ಲಿ ಕರ್ನಾಟಕದ ಹಕ್ಕುಗಳನ್ನು ಸಮರ್ಥವಾಗಿ ಪ್ರತಿಪಾದಿಸಬೇಕು. ಒಂದು ವೇಳೆ ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ಹಾಗೂ ಪ್ರಜಾಸತ್ತಾತ್ಮಕ ಹೋರಾಟವನ್ನು ಹಮ್ಮಿಕೊಳ್ಳುತ್ತದೆ ಎಂದು ಅರುಣ್ ಕೃಷ್ಣಯ್ಯ ಹೇಳಿದರು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ಕರವೇ ಜಿಲ್ಲಾ ಗೌರವಾಧ್ಯಕ್ಷ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಅಂಬರೀಷ್, ಉಪಾಧ್ಯಕ್ಷರಾದ ಚನ್ನಬಸವಯ್ಯ, ಆದೇಶ್, ಸಂಘಟನಾ ಕಾರ್ಯದರ್ಶಿ ಮಿಸ್ಬಾ ಬಾರಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ಪವನ್, ಮಹಿಳಾ ಘಟಕದ ರಾಧಾ ಎನ್.ಗೌಡ, ತುಮಕೂರು ತಾಲ್ಲೂಕು ಅಧ್ಯಕ್ಷ ಲಿಂಗರಾಜು, ವಿವಿಧ ತಾಲ್ಲೂಕುಗಳ ಅಧ್ಯಕ್ಷರಾದ ಶಶಿಧರ್, ಶಿವಕುಮಾರ್, ಪ್ರಕಾಶ್, ಉಮೇಶ್ ಮತ್ತಿತರರು ಭಾಗವಹಿಸಿದ್ದರು.