‘ವಿಬಿ ಜಿ ರಾಮ್ ಜಿʼ ಯೋಜನೆಯಡಿ ಉದ್ಯೋಗ ನೀಡಿ : ಜನರು ಗುಳೆ ಹೋಗುವುದನ್ನು ತಪ್ಪಿಸಿ

ತುಮಕೂರು : ಜಿಲ್ಲೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಿ, ವಲಸೆ ಹೋಗುವುದನ್ನು ತಪ್ಪಿಸಬೇಕು. ಕೂಲಿ ಮಾಡಿದವರಿಗೆ ತ್ವರಿತಗತಿಯಲ್ಲಿ ಏಳು ದಿನದ ಒಳಗಾಗಿ ಹಣ ಪಾವತಿಸಬೇಕು. ಕೂಲಿ ಹಣ ಪಾವತಿಸಲು ವಿಳಂಬವಾದರೆ ಉದ್ಯೋಗ ನೀಡಿಯೂ ಉಪಯೋಗವಿಲ್ಲದಂತಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ: ಜಿ.ಪರಮೇಶ್ವರ ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಕುಣಿಗಲ್ ತಹಶೀಲ್ದಾರ್ ಅವರ ಕಚೇರಿಯಿಂದ ಭಾಗವಹಿಸಿ ಮಾತನಾಡಿದ ಅವರು ಬಡವರು ಉದ್ಯೋಗಕ್ಕಾಗಿ ಎಲ್ಲಿಗೆ ಹೋಗುತ್ತಾರೆ? ಉತ್ತರ ಕರ್ನಾಟಕ ಭಾಗದಲ್ಲಿ ಜನ ಗುಳೆ ಹೋಗುತ್ತಿದ್ದಾರೆ. ಕೇಂದ್ರದಿಂದ ‘ವಿಬಿ ಜಿ ರಾಮ್ ಜಿ’ ಯೋಜನೆಯ ಹಣ ಬರುತ್ತಿಲ್ಲ. ಸದ್ಯದ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹಣ ಭರಿಸುತ್ತಿದೆ. ಉದ್ಯೋಗ ನೀಡಿದರೆ ಜನರು ಊರು ಬಿಡುವುದನ್ನು ತಪ್ಪಿಸಬಹುದು. ಜನರಿಗೆ ನಾವೇ ಕೆಲಸ ಕೊಟ್ಟು ಊರಿನಲ್ಲಿ ಉಳಿಸಿಕೊಳ್ಳಬೇಕು ಎಂದು ಹೇಳಿದರು.

ಬರದಿಂದ ಹಾನಿಗೊಳಗಾದ ಬೆಳೆ, ಕುಡಿಯುವ ನೀರಿನ ಪರಿಸ್ಥಿತಿಯ ಪರಿಶೀಲನೆ ಕುರಿತು ಜಿಲ್ಲಾ ಪ್ರವಾಸ ಕೈಗೊಂಡಿರುವುದರಿಂದ ಸಂವಾದದಲ್ಲಿ ನೇರವಾಗಿ ಭಾಗಿಯಾಗಲು ಸಾಧ್ಯವಾಗಿಲ್ಲ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ನಂತರ ಸರ್ಕಾರವನ್ನು ಜನರ ಹತ್ತಿರ ತೆಗೆದುಕೊಂಡು ಹೋಗಿ ಕೆಲಸ ಮಾಡುವುದಕ್ಕೆ ಆದ್ಯತೆ ನೀಡಿದ್ದಾರೆ. ಎಲ್ಲ ಜನಪ್ರತಿನಿಧಿಗಳು ಜನರ ಅಹವಾಲುಗಳನ್ನು ಕೇಳಬೇಕಿದೆ. ಅಧಿಕಾರಿಗಳು ಜನರಿಗೆ ಸ್ಪಂದಿಸುತ್ತಿಲ್ಲ ಎಂಬ ವಿಚಾರಗಳು ಕೇಳಿ ಬಂದ ಹಿನ್ನೆಲೆ ಪ್ರಜಾಸೇವಾ ಇಲಾಖೆಯನ್ನು ಪ್ರಾರಂಭ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿಯೊಂದು ಜಿಲ್ಲಾ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳನ್ನು ನಿಯೋಜಿಸಿ, ಜನರು ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳುವ ಉದ್ದೇಶದಿಂದ ಪ್ರಜಾಸೇವಾ ಇಲಾಖೆಯನ್ನು ಆರಂಭಿಸಲಾಗಿದೆ. ಜನರು ಗ್ರಾಮೀಣ ಭಾಗದಲ್ಲಿ ಅನೇಕ ಸಮಸ್ಯೆ ಎದುರಿಸುತ್ತಿದ್ದು, ಈಗಲೂ ಸಾಕಷ್ಟು ಜನರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಸವಲತ್ತುಗಳು ನೇರವಾಗಿ ಜನರಿಗೆ ತಲುಪಿಸುವುದು ಪೂರ್ಣಪ್ರಮಾಣದಲ್ಲಿ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಯಾರ ಹತ್ತಿರ ಹೋಗಬೇಕು ಎಂಬ ಜನರ ಪ್ರಶ್ನೆಗೆ ಪ್ರಜಾಸೇವಾ ಇಲಾಖೆ ಉತ್ತರವಾಗಲಿದೆ ಎಂದರು.

ಈ ವರ್ಷ ಬರದ ಪರಿಸ್ಥಿತಿ ಗಂಭೀರವಾಗಿದೆ. ಸೋಮವಾರ ಪಾವಗಡ, ಶಿರಾ, ಮಧುಗಿರಿ, ಕೊರಟಗೆರೆ ತಾಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ. ರೈತರು ಒಂದು ಎಕರೆ ಶೇಂಗಾ ಬಿತ್ತನೆಗೆ 40 ಸಾವಿರ ರೂ. ಖರ್ಚು ಮಾಡಿದ್ದಾರೆ. ಅವರಿಗೆ ಒಂದು ರೂ. ವಾಪಸ್ ಬರುವ ಸಾಧ್ಯತೆ ಇಲ್ಲ. ಫಲವತ್ತಾದ ಮಣ್ಣಿನಲ್ಲಿ ಬೆಳೆದ ಅಡಿಕೆ ಬೆಳೆ ನೀರಿನ ಕೊರತೆಯಿಂದ ಸಂಪೂರ್ಣವಾಗಿ ಒಣಗುತ್ತಿವೆ. ಹೀಗಾಗಿ ರೈತರ ಸಂಕಷ್ಟದ ಸಂದರ್ಭದಲ್ಲಿ ಅವರ ನೆರವಿಗೆ ನಿಲ್ಲುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.

ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿರುವ ಬೋರ್‍ವೆಲ್‍ಗಳು ಬತ್ತಿ ಹೋಗುತ್ತಿವೆ. ಸಾವಿರ ಅಡಿ ಕೊರೆಸಿದರೂ ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿಲ್ಲ. ಈ ಎಲ್ಲ ಸಮಸ್ಯೆಯನ್ನು ಪ್ರತ್ಯಕ್ಷವಾಗಿ ನೋಡಿದ್ದೇನೆ. ಸರ್ಕಾರ ನಿಮ್ಮ ಜೊತೆಗಿದೆ ಎಂದು ಜನರಿಗೆ ಭರವಸೆ ನೀಡಿದ್ದೇನೆ. ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುತ್ತಿದೆ. ತುಮಕೂರು ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಜಿಲ್ಲೆಯಾದ್ಯಂತ ರೈತರಿಗೆ ಒಂದು ಲಕ್ಷ ಕ್ವಿಂಟಾಲ್ ಮೇವಿನ ಬೀಜ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನೀರಿನ ಸೌಲಭ್ಯ ಇರುವ ರೈತರು ಮೇವು ಬೆಳೆಯುತ್ತಾರೆ. ಹೆಚ್ಚು ಮೇವು ಬೆಳೆದ ರೈತರಿಂದ ಖರೀದಿಸಲಾಗುವುದು. ಪಶು ಸಂಗೋಪನಾ ಇಲಾಖೆಯಿಂದ ಮೇವಿನ ಬೀಜ ವಿತರಿಸಲು ಈವರೆಗೂ ಟೆಂಡರ್ ಕರೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಶೀಘ್ರದಲ್ಲಿ ಕ್ರಮ ವಹಿಸಬೇಕು ಎಂದು ಸಿಎಸ್ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ರೈತರಿಗೆ ವಿಮಾ ಹಣ ನೀಡುತ್ತಿಲ್ಲ. ಹಣ ಕಟ್ಟಿಸಿಕೊಳ್ಳುವಾಗ ತೋರಿಸುವ ಆಸಕ್ತಿ, ಬೆಳೆ ನಷ್ಟದ ಸಂರ್ಭದಲ್ಲಿ ಹಣ ಬಿಡುಗಡೆ ಮಾಡಲು ಆಸಕ್ತಿ ತೋರಿಸುತ್ತಿಲ್ಲ. ಈ ಕುರಿತಂತೆ ವಿಮಾ ಕಂಪನಿಯವರೊಂದಿಗೆ ಸಭೆ ನಡೆಸಬೇಕಾಗುತ್ತದೆ. ಶಿರಾ ತಾಲೂಕಿನಲ್ಲಿ ಬೇಸಿಗೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ದಾಳಿಂಬೆ ಬೆಳೆ ಸಂಪೂರ್ಣ ನಾಶವಾಗಿತ್ತು. ಈವರೆಗೂ ದಾಳಿಂಬೆ ಬೆಳೆ ನಷ್ಟಕ್ಕೆ ಇನ್ಶೂರೆನ್ಸ್ ಕ್ಲಿಯರ್ ಆಗಿಲ್ಲ. ಇದು ರಾಜ್ಯದ್ಯಾಂತ ಇರುವ ಸಮಸ್ಯೆ. ಈ ಬಗ್ಗೆ ಇನ್ಶೂರೆನ್ಸ್ ಕಂಪನಿಯವರೊಂದಿಗೆ ವಿಶೇಷ ಸಭೆ ನಡೆಸುವ ಅಗತ್ಯತೆ ಇದೆ ಎಂದು ಈ ವೇಳೆ ಮುಖ್ಯಮಂತ್ರಿಯವರಿಗೆ ತಿಳಿಸಿದರು.

ರಾಜ್ಯದಲ್ಲಿ ಐದು ಸಾವಿರಕ್ಕು ಹೆಚ್ಚು ಮಳೆ ಮಾಪನ ಕೇಂದ್ರಗಳಿವೆ. ಅದರಲ್ಲಿ 2,500 ಮಳೆ ಮಾಪನ ಕೇಂದ್ರಗಳು ಕಾರ್ಯನಿರ್ವಹಣೆಯಲ್ಲಿವೆ. ಸರಿ ಇಲ್ಲದ್ದು ಕೂಡಲೇ ದುರಸ್ಥಿಗೊಳಿಸಬೇಕು. ಅಗತ್ಯ ಇರುವ ಕಡೆ ಹೊಸದಾಗಿ ಮಳೆ ಮಾಪನ ಕೇಂದ್ರಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಸೆಪ್ಟೆಂಬರ್‍ನಲ್ಲಿ ಬರ ಪರಿಸ್ಥಿತಿ ಮತ್ತಷ್ಟು ತೀವ್ರವಾಗುತ್ತದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಎಲ್ಲ ಅಧಿಕಾರಿಗಳು ಎಮೆರ್ಜೆನ್ಸಿ ಎಂದು ಪರಿಗಣಿಸಿ ಕೆಲಸ ಮಾಡಬೇಕಾಗುತ್ತದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ನಿಮ್ಮ ಜೊತೆ ನಾವಿದ್ದೇವೆ ಎಂಬ ಭರವಸೆಯನ್ನು ನೀಡುವ ಮೂಲಕ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕೆಲಸ ಮಾಡಬೇಕು. ಈ ಬಗ್ಗೆ ಪರಿಶೀಲಿಸಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅವರು ಸರ್ಕಾರಕ್ಕೆ ವರದಿ ನೀಡಬೇಕು ಎಂದರು.

ಭಾರತ್ ಜೋಡೋ ಸಂಘ ಕಾರ್ಯಕ್ರಮ ಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಕೂಸಿನ ಯೋಜನೆ. ಧರ್ಮ, ಜಾತಿ ಆಧಾರದ ಮೇಲೆ ವಿಂಗಡಣೆಯಾಗುತ್ತಿರುವ ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿಯೊಂದು ಪಂಚಾಯಿತಿಯಲ್ಲಿ ನಾಲ್ಕು ಸಾವಿರ ಜನಸಂಖ್ಯೆ ಇರುವ ಕಡೆ ಒಂದು ಸಂಘ ರಚಿಸಬೇಕು. ಸಂಘದಲ್ಲಿ ಎಲ್ಲ ವರ್ಗದ ಜನರು ಪಾಲ್ಗೊಳ್ಳಬೇಕು. ಸಮಾಜದ ಶೋಷಿತ, ಹಿಂದುಳಿದ ವರ್ಗಗಳನ್ನು ಸಂಘದಿಂದ ಕೈಬಿಡಬಾರದು ಎಂಬ ನಿಟ್ಟಿನಲ್ಲಿ ಸಂಘದ ಸದಸ್ಯತ್ವಕ್ಕೆ ಮೀಸಲಾತಿ ಕಲ್ಪಿಸಲಾಗಿದೆ. ಪಂಚಾಯಿತಿ ಅಧಿಕಾರಿಗಳು ಭಾರತ್ ಜೋಡೋ ಸಂಘಗಳ ಕಾರ್ಯಚಟುವಟಿಕೆಗಳ ಮೇಲೆ ನಿಗಾವಹಿಸಬೇಕು. ರಾಷ್ಟ್ರೀಯ ಹಬ್ಬಗಳನ್ನು ಬಹಳ ವಿಜೃಂಭಣೆಯಿಂದ ಆಚರಿಸಬೇಕು. ಯಾವುದೇ ರೀತಿಯ ವ್ಯತ್ಯಾಸಗಳು ಆಗದಂತೆ ನೋಡಲ್ ಅಧಿಕಾರಿಗಳು ನೋಡಬೇಕು ಎಂದರು.

ಸಂಘದ ಕಾರ್ಯಚಟುವಟಿಕೆ ನಡೆಸಲು ಶಾಲಾ-ಕಾಲೇಜು, ಪಂಚಾಯಿತಿಗೆ ಸಂಬಂಧಿಸಿದ ಕಟ್ಟಡಗಳನ್ನು ಬಳಸಿಕೊಳ್ಳಬೇಕು. ಇದು ಸರ್ಕಾರಕ್ಕೆ ಫ್ಲ್ಯಾಗ್‍ಶಿಪ್ ಕಾರ್ಯಕ್ರಮ. ಈ ಯೋಜನೆಗೆ 1000 ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ ಎಂದರೆ ಸಾಮಾನ್ಯ ಕಾರ್ಯಕ್ರಮವಲ್ಲ. ಸಮಾಜದ ನ್ಯೂನತೆಗಳನ್ನು ಸರಿಪಡಿಸಲು ಯುವಕರಿಗೆ ಅವಕಾಶ ಸಿಗುತ್ತದೆ. 10 ಸಾವಿರ ಸಂಘಗಳನ್ನು ಮಾಡುವ ಕೆಲಸ ಯಾವ ರಾಜ್ಯಗಳು ಮಾಡಿಲ್ಲ. ಆಗಸ್ಟ್ ತಿಂಗಳ ಕೊನೆ ವೇಳೆ ಸಂಘದ ನೋಂದಣಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ನೋಂದಣಿ ಪೂರ್ಣಗೊಳಿಸಿದ ಬಳಿಕ ಸಿಎಂ ಅವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಗುಬ್ಬಿ ತಾಲ್ಲೂಕಿಗೆ ಭೇಟಿ :
ಇದಕ್ಕೂ ಮುನ್ನ ಗುಬ್ಬಿ ತಾಲೂಕು ಸಿ.ಎಸ್.ಪುರ ಹೋಬಳಿ ಯಡುವನಹಳ್ಳಿಗೆ ಭೇಟಿ ನೀಡಿದ ಪರಮೇಶ್ವರ, ತುರ್ತು ಕ್ರಿಯಾ ಯೋಜನೆ(ಅಂP) ಅನುದಾನದಡಿ ಕೊರೆಸಲಾದ ಕುಡಿಯುವ ನೀರಿನ ಕೊಳವೆಬಾವಿಯನ್ನು ಪರಿಶೀಲಿಸಿದರು.
ಸಿಎಪಿ ಅನುದಾನದಡಿ ಕೊರೆದಿರುವ ಕುಡಿಯುವ ನೀರಿನ ಕೊಳವೆಬಾವಿಯನ್ನು ವೀಕ್ಷಿಸಿ, ಬೋರ್‍ವೆಲ್‍ನ ನೀರಿನ ಲಭ್ಯತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ಕೈಗೊಂಡಿರುವ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಜನರಿಗೆ ಅಗತ್ಯ ಪ್ರಮಾಣದಲ್ಲಿ ಕುಡಿಯುವ ನೀರು ಲಭ್ಯವಾಗುವಂತೆ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಅವರು ಸೂಚಿಸಿದರು.

ಈ ವೇಳೆ ಗ್ರಾಮಸ್ಥರು, ಕಸ ವಿಲೇವಾರಿ, ಆಸ್ಪತ್ರೆ ಸಮಸ್ಯೆ ಕುರಿತು ಹಾಗೂ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಕೋರಿ ಡಿಸಿಎಂ ಅವರಿಗೆ ಮನವಿ ಸಲ್ಲಿಸಿದರು. ಶೀಘ್ರವಾಗಿ ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು.

ಕುಣಿಗಲ್ ಬರಪೀಡಿತ ಪ್ರದೇಶಕ್ಕೆ ಡಿಸಿಎಂ ಜಿ.ಪರಮೇಶ್ವರ ಭೇಟಿ :

ಕುಣಿಗಲ್ ತಾಲೂಕಿನ ನಾಗನಹಳ್ಳಿ, ಮಂಡನಪಾಳ್ಯ ಗ್ರಾಮದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಅಡಿಕೆ ತೋಟಗಳಿಗೆ ಭೇಟಿ ನೀಡಿದ ಅವರು, ಫಲವತ್ತಾದ ಮಣ್ಣಿನಲ್ಲಿ ಬೆಳೆದಿದ್ದ ಅಡಿಕೆ ಬೆಳೆ, ನೀರಿನ ಕೊರತೆಯಿಂದ ಒಣಗುತ್ತಿರುವುದನ್ನು ಖುದ್ದು ವೀಕ್ಷಿಸಿದರು. ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ರೈತರು ಬರ ಪರಿಹಾರ ಒದಗಿಸುವಂತೆ ಹಾಗೂ ಹೇಮಾವತಿ ಎಕ್ಸ್‍ಪ್ರೆಸ್ ಲಿಂಕ್ ಕೆನಾಲ್ ಮೂಲಕ ಕುಣಿಗಲ್ ತಾಲೂಕಿಗೆ ನೀರು ಹರಿಸುವಂತೆ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಹೇಮಾವತಿ ಎಕ್ಸ್‍ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸರ್ಕಾರ ಈಗಾಗಲೇ 1,000 ಕೋಟಿ ರೂ. ಅನುದಾನ ಮೀಸಲಿಟ್ಟು ಕಾಮಗಾರಿಗೆ ಅನುಮೋದನೆ ನೀಡಿದೆ. ಈ ಪೈಕಿ 450 ಕೋಟಿ ರೂ. ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರಲ್ಲದೆ, ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ಭಾಗದ ರೈತರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ. ಈ ವಿಚಾರವನ್ನು ಮಾತುಕತೆಯ ಮೂಲಕ ಬಗೆಹರಿಸಲಾಗುವುದು ಎಂದು ಡಾ. ಜಿ.ಪರಮೇಶ್ವರ ಅವರು ರೈತರಿಗೆ ಭರವಸೆ ನೀಡಿದರು.

ಕುಣಿಗಲ್ ತಾಲೂಕಿನ ಹಾಲುಗೋನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿನ ಕುಡಿಯುವ ನೀರಿನ ಮೂಲವಾಗಿರುವ ಕೊಳವೆ ಬಾವಿಯನ್ನು ಪರಿಶೀಲಿಸಿದರು. ನೀರಿನ ಲಭ್ಯತೆ, ನೀರಿನ ಮಟ್ಟ ಹಾಗೂ ಗ್ರಾಮಸ್ಥರಿಗೆ ನೀರು ಪೂರೈಕೆ ಮಾಡುತ್ತಿರುವ ವ್ಯವಸ್ಥೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ರೈತರಿಗೆ ಮೇವಿನ ಬೀಜದ ಕಿಟ್‍ಗಳನ್ನು ವಿತರಿಸಿ, ರೈತರಿಂದ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ಟಿ.ಕೃಷ್ಣಪ್ಪ, ಡಾ: ಹೆಚ್.ಡಿ. ರಂಗನಾಥ್, ಸಿ.ಬಿ. ಸುರೇಶ್ ಬಾಬು, ಕೆ.ಷಡಾಕ್ಷರಿ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಎಂ. ಸೇರಿದಂತೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *