ಮಹಿಳಾ ಫಲಾನುಭವಿಗಳಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

ತುಮಕೂರು:ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸ್ವಾಭಿಮಾನಿ ಬದುಕು ಕಟ್ಟಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ನಗರ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕರೆ ನೀಡಿದರು.

ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಶಾಸಕ ಕಚೇರಿ ಮುಂಭಾಗದಲ್ಲಿ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ಬಡ ಹಿಂದುಳಿದ ವರ್ಗಗಳ ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 19 ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಗುತ್ತಿದೆ. ಇದರ ಸೌಲಭ್ಯ ಪಡೆಯುತ್ತಿರುವ ಮಹಿಳಾ ಫಲಾನುಭವಿಗಳು ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮುಖೇನ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಮಹಿಳೆಯರು ಸ್ವಾವಲಂಬಿಯಾಗಿ ಜೀವನ ರೂಪಿಸಿಕೊಂಡು ಮನೆಯಲ್ಲಿ ಉದ್ಯೋಗ ಮಾಡಲಿ ಎಂಬ ಉದ್ದೇಶದಿಂದ ಸರ್ಕಾರ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ ಎಂದು ಅವರು ಹೇಳಿದರು.

ಮಹಿಳೆಯರು ಮನೆಯಲ್ಲಿ ಸ್ವಉದ್ಯೋಗ ಕೈಗೊಂಡು ಆರ್ಥಿಕವಾಗಿ ಸದೃಢವಾಗಬೇಕು. ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದ ಅವರು, ಈ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಹಾಗಾಗಿ ದೇವರಾಜ ಅರಸು ನಿಗಮದ ಉದ್ದೇಶ ಈಡೇರಲಿ ಎಂದರು.

ದೇಶದ ಹೆಸರಾಂತ ಉದ್ಯಮಿಗಳಾದ ಟಾಟಾ ಬಿರ್ಲಾ ಅವರು ಕೂಡಾ ಸಣ್ಣ ಸಣ್ಣ ಕೆಲಸ ಆರಂಭಿಸಿ ಇಂದು ಬೃಹದಾಕಾರವಾಗಿ ಬೆಳೆದಿದ್ದಾರೆ. ಹಾಗಾಗಿ ನೀವು ಸಹ ಸರ್ಕಾರದ ವತಿಯಿಂದ ಕೊಡುಗೆಯಾಗಿ ನೀಡಿರುವ ಹೊಲಿಗೆ ಯಂತ್ರಗಳನ್ನು ಬಳಸಿಕೊಂಡು ಮುಂದೆ ಗಾರ್ಮೆಂಟ್ಸ್ ತೆರೆದು ನೂರಾರು ಜನರಿಗೆ ಉದ್ಯೋಗ ಕೊಡುವಂತಾಗಬೇಕು ಎಂದು ಆಶಿಸಿದರು.

ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವೆಂಕಟರಾಜು ಮಾತನಾಡಿ, ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ಸರ್ಕಾರದ ವಿವಿಧ ನಿಗಮಗಳಿಂದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಮಹಿಳೆಯರು ಸೇರಿದಂತೆ ಯುವಕರು, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 1 ಲಕ್ಷದ ವರೆಗೂ ನಮ್ಮ ನಿಗಮದ ವತಿಯಿಂದ ಸಾಲ ಸೌಲಭ್ಯ ನೀಡಲಾಗುವುದು. ಇದರಲ್ಲಿ 20 ಸಾವಿರ ರೂ. ಸಬ್ಸಿಡಿ ಸೌಲಭ್ಯ ಸಹ ಇರುತ್ತದೆ. ಇದರ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.

ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೂ ನಿಗಮದ ವತಿಯಿಂದ ಸಾಲ ಸೌಲಭ್ಯ ನೀಡಲಾಗುತ್ತಿದೆ. ಹಾಗೆಯೇ ವಿದೇಶದಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೂ ಸಹ ಬಡ್ಡಿ ರಹಿತವಾಗಿ 50 ಲಕ್ಷ ರೂಪಾಯಿ ವರೆಗೆ ಸಾಲ ನೀಡಲು ನಮ್ಮ ನಿಗಮದಲ್ಲಿ ಅವಕಾಶ ಇದೆ. ಈ ಎಲ್ಲಾ ಸೌಲಭ್ಯಗಳನ್ನು ಅರ್ಹರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

2025-26ನೇ ಸಾಲಿನ 19 ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ. ಹಾಗೆಯೇ 2026-27ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ ಎಂದರು.

ಸ್ವಯಂ ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ 1 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು. ಇದನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 19 ಅರ್ಹ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಸಂದರ್ಭದಲ್ಲಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಕಲ್ಪನಾ ಬಾಯಿ ಹಾಗೂ ಮಹಿಳಾ ಫಲಾನುಭವಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *