ತುಮಕೂರು : ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸುವ ಮೂಲಕ ತುಮಕೂರಿನ ಕಲೆ, ಸಂಸ್ಕøತಿ ಹಾಗೂ ಪ್ರತಿಭೆಯನ್ನು ರಾಜ್ಯದ ಗಮನ ಸೆಳೆಯುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2026ರ ದಸರಾ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಉತ್ಸವವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಉತ್ಸವದಲ್ಲಿ ಹೊಸತನವನ್ನು ಪರಿಚಯಿಸುವ ಮೂಲಕ ತುಮಕೂರನ್ನು ಎಲ್ಲರೂ ಗುರುತಿಸುವಂತಹ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.
ದಸರಾ ಉತ್ಸವವು ಕೇವಲ ಮನರಂಜನಾ ಕಾರ್ಯಕ್ರಮವಾಗದೆ ಮಕ್ಕಳಿಗೆ, ಯುವಕರಿಗೆ ಹಾಗೂ ಸ್ಥಳೀಯ ಕಲಾವಿದರಿಗೆ ಉತ್ತಮ ವೇದಿಕೆಯಾಗಬೇಕು. ಯುವ ಕಲಾವಿದರು, ನೃತ್ಯ ತಂಡಗಳು ಸೇರಿದಂತೆ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಮೂಲಕ ಅವರ ಪ್ರತಿಭೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.
ಅಮಾನಿಕೆರೆ ಪ್ರಮುಖ ಆಕರ್ಷಣೆಯಾಗಲಿ
ತುಮಕೂರು ನಗರದ ಅಮಾನಿಕೆರೆಯನ್ನು ದಸರಾ ಸಂದರ್ಭದಲ್ಲಿ ಆಕರ್ಷಕವಾಗಿ ಅಲಂಕರಿಸಿ, ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಲರ್ಫುಲ್ ಆಗಿ ರೂಪಿಸಬೇಕು. ಅಮಾನಿಕೆರೆಯನ್ನು ದಸರಾ ಉತ್ಸವದ ಪ್ರಮುಖ ಆಕರ್ಷಣೆಯನ್ನಾಗಿ ಮಾಡುವ ಮೂಲಕ ಸಾರ್ವಜನಿಕರನ್ನು ಸೆಳೆಯುವಂತಹ ವಾತಾವರಣ ನಿರ್ಮಿಸಬೇಕು ಎಂದು ಅವರು ಸೂಚಿಸಿದರು.
ನಗರದ ಪ್ರಮುಖ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಉತ್ಸವದ ಸಂದರ್ಭದಲ್ಲಿ ಇಡೀ ನಗರ ಹಬ್ಬದ ವಾತಾವರಣದಿಂದ ಕಂಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ತುಮಕೂರು ದಸರಾ ಉತ್ಸವವು “ಊರ ಹಬ್ಬ”ದ ರೀತಿಯಲ್ಲಿ ಎಲ್ಲರನ್ನೂ ಒಳಗೊಂಡು ಉತ್ತಮವಾಗಿ ನಡೆಯಬೇಕು. ಉತ್ಸವದ ಮೂಲಕ ತುಮಕೂರಿನ ಕಲೆ, ಸಂಸ್ಕøತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಉತ್ತೇಜನ ದೊರೆಯುವುದರ ಜೊತೆಗೆ ತುಮಕೂರಿನ ಹೆಸರು ಮತ್ತಷ್ಟು ಪ್ರಸಿದ್ಧಿಯಾಗುವಂತಾಗಬೇಕು ಎಂದು ಹೇಳಿದರು.
ತುಮಕೂರು ದಸರಾ ಉತ್ಸವವನ್ನು ಅಕ್ಟೋಬರ್ 11 ರಿಂದ 21ರವರೆಗೆ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ನಹೀದಾ ಜಮ್ ಜಮ್, ಮುರಳೀಧರ ಹಾಲಪ್ಪ, ಲಕ್ಷ್ಮಣ್ ದಾಸ್ ಹಾಗೂ ವಿವಿಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.