ಕೊಳಗೇರಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ- ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಶಿರಾ ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಗಮನಕ್ಕೆ ಬಂದಿತ್ತು. ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಸಮಸ್ಯೆಯ ಮೂಲವನ್ನು ಪರಿಶೀಲಿಸಿದಾಗ, ಗ್ರಾಮವು ಇನ್ನೂ ಕಂದಾಯ ಗ್ರಾಮವಾಗಿ ಘೋಷಣೆಯಾಗದಿರುವುದೇ ಅಭಿವೃದ್ಧಿ ಕಾರ್ಯಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಲು ಪ್ರಮುಖ ಕಾರಣವೆಂದು ತಿಳಿದು ಬಂದಿತ್ತು.

ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ: ಜಿ. ಪರಮೇಶ್ವರ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳ ರಚನೆಗೆ ವಿಶೇಷ ಆಂದೋಲನ ಕೈಗೊಳ್ಳಲಾಗಿದೆ. ಈ ಅಭಿಯಾನದಡಿ ಇದುವರೆಗೆ 22,000ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಅವರಿಗೆ ಕಾನೂನುಬದ್ಧ ಹಕ್ಕು ಮತ್ತು ಭದ್ರತೆ ಕಲ್ಪಿಸಲಾಗಿದ್ದು, ಅಲೆಮಾರಿ ಕುಟುಂಬಗಳಿಗೆ ಹಾಗೂ ಹಕ್ಕಿಪಿಕ್ಕಿ ಕಾಲೋನಿಯ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿತ್ತು.


ಪ್ರಸ್ತುತ ನಾಲ್ಕನೇ ಹಂತವಾಗಿ ಖಾಸಗಿ ಒಡೆತನದ ಜಮೀನುಗಳಲ್ಲಿ ನಿರ್ಮಿತ ಕೊಳಗೇರಿಗಳಲ್ಲಿ ವಾಸಿಸುತ್ತಿರುವ 2,617 ಕುಟುಂಬಗಳಿಗೆ ಕರ್ನಾಟಕ ಭೂ ಸುಧಾರಣಾ ಕಾಯ್ದೆ-1971ರ ಕಲಂ 38(A)  ಅನ್ವಯ ಖಾಸಗಿ ಕೊಳಗೇರಿ ಪ್ರದೇಶಗಳಲ್ಲಿ ಸರ್ವೆ ಕಾರ್ಯ ಕೈಗೊಂಡು ಸೂಕ್ತ ಕ್ರಮವಹಿಸಲಾಗುತ್ತಿದೆ. ಅಲ್ಲದೆ, ಸರ್ಕಾರಿ ಜಾಗಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ 349 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.


ತುಮಕೂರು ನಗರದ ಎಳ್ಳಾರ ಬಂಡೆ, ಅರಳೀಮರದ ಪಾಳ್ಯ, ಎಸ್.ಎನ್. ಪಾಳ್ಯ, ಭಾರತಿ ನಗರ, ಬಿದಿರುಮೆಳೆ ತೋಟ, ಎನ್.ಆರ್. ಕಾಲೋನಿ ಹಾಗೂ ಎಸ್.ಎಲ್.ಎನ್. ನಗರ ಬಡಾವಣೆಗಳಲ್ಲಿರುವ ಸರ್ಕಾರಿ ಜಮೀನಿನಲ್ಲಿ ಮನೆಯನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ 349 ಕುಟುಂಬಗಳನ್ನು ಹಕ್ಕುಪತ್ರ ವಿತರಣೆಯ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ.


ಖಾಸಗಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಕುಟುಂಬಗಳ ಸಮಸ್ಯೆಗೂ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಂಬಂಧಪಟ್ಟ ಜಮೀನನ್ನು ಸರ್ಕಾರಕ್ಕೆ ಸ್ವಾಧೀನಪಡಿಸಿಕೊಳ್ಳುವ ಅಥವಾ ಸರ್ಕಾರದ ವಶಕ್ಕೆ ಪಡೆಯುವ ಪ್ರಕ್ರಿಯೆಯನ್ನು ನಿಯಮಾನುಸಾರ ಪೂರ್ಣಗೊಳಿಸಿ, ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ಮೂಲಕ 30 ರಿಂದ 40 ವರ್ಷಗಳಿಂದ ಸ್ವಂತ ಜಮೀನಿನ ಹಕ್ಕಿಗಾಗಿ ಕಾಯುತ್ತಿರುವ ಕುಟುಂಬಗಳಿಗೆ ಕಾನೂನುಬದ್ಧ ಮಾಲೀಕತ್ವ ಮತ್ತು ಭದ್ರತೆ ಒದಗಿಸುವ ಗುರಿ ಹೊಂದಲಾಗಿದೆ.


ತುಮಕೂರು ಮಹಾನಗರ ಪಾಲಿಕೆ ಹಾಗೂ ಭೂ ದಾಖಲೆಗಳ ಇಲಾಖೆಯ ಸಹಯೋಗದಲ್ಲಿ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ. ಇದರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಎನ್.ಆರ್. ಕಾಲೋನಿಗೆ ಭೇಟಿ ನೀಡಿ, ಸರ್ವೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸುವುದರ ಜೊತೆಗೆ ಫಲಾನುಭವಿಗಳಿಂದ ಅವರ ಸಮಸ್ಯೆಗಳು ಹಾಗೂ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.


ಸರ್ವೆ ಕಾರ್ಯ   ಪೂರ್ಣಗೊಂಡ ನಂತರ ನಿಯಮಾನುಸಾರ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, 3000 ಕೊಳಗೇರಿ ಕುಟುಂಬಗಳ 14000 ಜನರಿಗೆ ಇದರಿಂದ ಅನುಕೂಲವಾಗುತ್ತದೆ. ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಜಿಲ್ಲಾಡಳಿತವು ಐತಿಹಾಸಿಕ ಹೆಜ್ಜೆಯಿಟ್ಟಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಶುಭ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *