ಪ್ರಜಾಸೇವೆ ಆಂದೋಲನ ಅರ್ಜಿಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಪರಿಶೀಲಿಸಿದರು.

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ವಸತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಕಾರ್ಮಿಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶುಸಂಗೋಪನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಗೃಹ ಇಲಾಖೆ, ಸಹಕಾರ, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪ್ರಜಾ ಸೇವಾ ಇಲಾಖೆ, ಲೋಕೋಪಯೋಗಿಮತ್ತು ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಬರುವ 789 ಅರ್ಜಿಗಳು ಬಾಕಿ ಇದ್ದು, ಇಲಾಖಾವಾರು ಪರಿಶೀಲನೆ ಕೈಗೊಳ್ಳಲಾಯಿತು.

 ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಅಹವಾಲುಗಳ ಸ್ಥಿತಿ, ಕೈಗೊಂಡ ಕ್ರಮಗಳು ಹಾಗೂ ಬಾಕಿ ಇರುವ ಅರ್ಜಿಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಆಡಳಿತದ ಪ್ರಮುಖ ಕರ್ತವ್ಯವಾಗಿದ್ದು, ಯಾವುದೇ ಅಹವಾಲು ಅನಗತ್ಯವಾಗಿ ಬಾಕಿ ಉಳಿಯದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

 ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಪ್ರಕರಣಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಜಾಸೇವೆ ಆಂದೋಲನದಡಿ ಸ್ವೀಕರಿಸಲಾದ ಎಲ್ಲಾ ಅಹವಾಲುಗಳ ವಿಲೇವಾರಿಯನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *