ಮೋದಿ ಜನ್ಮದಿನ: ಅಭಿಮಾನಿಗಳಿಂದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಸೇವೆ

ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಜೀವನ ಹಾಗೂ ಹುಟ್ಟುಹಬ್ಬದ ಅಂಗವಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಅಭಿಮಾನಿಗಳು ಗುರುವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆ ಹಾಗೂ ಇತರೆ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅಭಿಮಾನಿಗಳು, ವಿವಿಧ ಕಾಲೇಜುಗಳ ಎನ್‍ಸಿಸಿ ಕೆಡೆಟ್‍ಗಳು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಬೆಂಗಳೂರಿನಿಂದ ವಿಶೇಷ ರೈಲಿನಿಲ್ಲಿ ಬಂದಿಳಿದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಮೊದಲು ರೈಲ್ವೆ ನಿಲ್ದಾಣ ಆವರಣದ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೋದಿಯವರ ಜನ್ಮದಿನದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ನಂತರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರ ನೈರ್ಮಲ್ಯದ ಬಗ್ಗೆ ಜನಜಾಗೃತಿ ಮೂಡಿಸಿದರು.

ಈ ವೇಳೆ ಮಾತನಾಡಿದ ಸಚಿವ ವಿ. ಸೋಮಣ್ಣ, ಭಾರತದ ಸಾರ್ವಭೌಮತೆಗೆ ಪ್ರಧಾನಿ ಮೋದಿಯವರು ದೊಡ್ಡ ಕೊಡುಗೆ ನೀಡಿದ್ದಾರೆ. ಪ್ರಧಾನಿ ಮಾತ್ರವಲ್ಲದೆ, ವಿಶ್ವನಾಯಕರಾಗಿ ಭಾರತದ ಘನತೆಯನ್ನು ವಿಶ್ವಮಟ್ಟದಲ್ಲಿ ಎತ್ತಿಹಿಡಿದ್ದಿದ್ದಾರೆ ಎಂದರು.

ಪರಿಸರ ಸ್ವಚ್ಛತೆ ನಮ್ಮ ಆದ್ಯತೆ ಆಗಬೇಕು ಎಂಬುದು ಮೋದಿಯವರ ಆಶಯ. ಮನುಷ್ಯನಿಗೆ ಆರೋಗ್ಯಕ್ಕೆ ಸ್ವಚ್ಛ ಪರಿಸರವೂ ಮುಖ್ಯ. ಸ್ವಚ್ಛತೆ ಪ್ರತಿಯೊಬ್ಬರ ಆದ್ಯತೆ ಆಗಬೇಕು. ಇಂದು ರೈಲು ನಿಲ್ದಾಣದಲ್ಲಿ ಸ್ವಯಂಪ್ರೇರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಇಂತಹ ಸೇವಾ ಕಾರ್ಯಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.

15ನೇ ವಾರ್ಡಿನ ನಗರಪಾಲಿಕೆ ಮಾಜಿ ಸದಸ್ಯೆ ಗಿರಿಜಾ ಧನಿಯಾಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು 25 ವರ್ಷಗಳ ಸಾರ್ವಜನಿಕ ಜೀವನದ ಸಾರ್ಥಕ ಸೇವೆ ಗೌರವಾರ್ಥವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ 17ನೇ ಮದ್ರಾಸ್ ರೆಜಿಮೆಂಟ್ ಭಾರತೀಯ ಸೇನಾಧಿಕಾರಿ ಸುಬೇದಾರ್ ಯೋಗೀಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಹಾಜರಿದ್ದ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ವಿತರಿಸಲಾಯಿತು. ಸರ್ಕಾರಿ ವಿಜ್ಞಾನ, ಕಲಾ ಕಾಲೇಜು, ಸಿದ್ಧಗಂಗಾ ಕಾಲೇಜು, ಸರ್ವೋದಯ ಕಾಲೇಜಿನ ಎನ್‍ಸಿಸಿ ಕೆಡೆಟ್‍ಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಎಂ.ಟಿ. ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಎಂ.ಡಿ. ಲಕ್ಷ್ಮೀನಾರಾಯಣ, ಮಸಾಲ ಜಯರಾಮ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ನಗರಪಾಲಿಕೆ ಮಾಜಿ ಸದಸ್ಯೆ ಗಿರಿಜಾ ಧನಿಯಾಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ವಿ. ಸೋಮಣ್ಣ ಅಭಿಮಾನಿ ಬಳಗದ ಡಾ. ಧನಿಯಾಕುಮಾರ್, ಮಲ್ಲಸಂದ್ರ ಶಿವಣ್ಣ, ಡಿ.ಎಂ. ಸತೀಶ್, ಮುಖಂಡರಾದ ವೈ.ಹೆಚ್. ಹುಚ್ಚಯ್ಯ, ಬ್ಯಾಟರಂಗೇಗೌಡ, ಟಿ.ಆರ್. ಸದಾಶಿವಯ್ಯ, ವಿನಯ್‍ಕುಮಾರ್, ಸಾಗರನಹಳ್ಳಿ ವಿಜಯಕುಮಾರ್, ಡಾ.ದರ್ಶನ್ ಕೆ.ಎಲ್, ನಾಗರಾಜಪ್ಪ, ನಂದಿ ಪ್ರಭಾಕರ್, ಎನ್‍ಸಿಸಿ ಅಧಿಕಾರಿಗಳಾದ ಮೇಜರ್ ಅರುಣ್‍ಕುಮಾರ್, ಕ್ಯಾಪ್ಟನ್ ಪ್ರದೀಪ್‍ಕುಮಾರ್, ಕ್ಯಾಪ್ಟನ್ ರಾಮಲಿಂಗರೆಡ್ಡಿ ಮೊದಲಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *