ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ(ST)ದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

ತುಮಕೂರು : ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ (ST) ದ ಪಟ್ಟಿಗೆ ಸೇರ್ಪಡೆಗೊಳಿಸಲು ಭಾರತದ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದಾರೆ.

 ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳುವ ಕುರಿತು ಸೋಮಣ್ಣ ಅವರು ಇದೇ ಮಾರ್ಚ್ 25ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಕೇಂದ್ರ ಗೃಹ ಇಲಾಖೆಯು ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿ (ORGI)ಗೆ ವರ್ಗಾಯಿಸಿತ್ತು. ಇದೀಗ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತು ಪರಿಶೀಲಿಸಲು ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿಯು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ರವಾನಿಸಿದೆ.

 ಈ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಅವರು ಮತ್ತೊಮ್ಮೆ ಮನವಿ ಮಾಡುವುದರ ಮೂಲಕ ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆ ಮಾಡುವುದರಿಂದ ಅತ್ಯಂತ ಹಿಂದುಳಿದಿರುವ ಈ ಸಮುದಾಯಯಕ್ಕೆ ಸಂವಿಧಾನದ ಆಶಯದಂತೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿ ಸಾಧ್ಯವಾಗಲಿದೆ ಎನ್ನುವುದನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರ ಗಮನಕ್ಕೆ ತಂದಿದ್ದಾರೆ.

Leave a Reply

Your email address will not be published. Required fields are marked *