ತುಮಕೂರು- ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶವನ್ನು ಆ. 28 ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8ರ ಬಳಿಯ ಶೃಂಗಾರ ಪ್ಯಾಲೇಸ್ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಕೆ.ಸಿ. ನರಸಿಂಹಮೂರ್ತಿ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು.
ಸಂವಿಧಾನದ ಆಶಯಗಳು ಹಾಗೂ ಸವಲತ್ತುಗಳು ಸಮುದಾಯದ ಎಲ್ಲಾ ನೌಕರರಿಗೂ ತಲುಪಬೇಕು ಎಂಬ ಉದ್ದೇಶ ಈ ಸಮಾವೇಶದ್ದಾಗಿದೆ. 15 ಅಂಶಗಳ ಬೇಡಿಕೆಯ ಮನವಿ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಸಮಾವೇಶದಲ್ಲಿ ಸಲ್ಲಿಸಲಾಗುವುದು ಈ ಸಮಾವೇಶಕ್ಕೆ ರಾಜ್ಯಾದ್ಯಂತ ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಎಸ್ಸಿ-ಎಸ್ಟಿ ನೌಕರರು, ಅಧಿಕಾರಿಗಳು ಹಾಗೂ ಹಿತೈಷಿಗಳು ಭಾಗವಹಿಸಲಿದ್ದಾರೆ. ಹಾಗೆಯೇ ತುಮಕೂರು ಜಿಲ್ಲೆಯಿಂದ 1 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.
ಐಕ್ಯತೆ, ವೈಚಾರಿಕತೆ ಹಾಗೂ ಸಮಾನತೆಯ ಆಶಯದೊಂದಿಗೆ 2005ರಲ್ಲಿ ಸ್ಥಾಪನೆಯಾದ ಸಮನ್ವಯ ಸಮಿತಿಯು ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರನ್ನು ಸಂಘಟಿಸಿ, ಅವರ ಹಕ್ಕುಗಳು ಹಾಗೂ ಸೌಲಭ್ಯಗಳಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ರಾಜ್ಯದಲ್ಲಿ ಮಂಜೂರಾಗಿರುವ ಸುಮಾರು 7.75 ಲಕ್ಷ ಸರ್ಕಾರಿ ಹುದ್ದೆಗಳ ಪೈಕಿ ಸುಮಾರು 4 ಲಕ್ಷ ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, ಸುಮಾರು 2,84,724 ಹುದ್ದೆಗಳು ಖಾಲಿ ಇವೆ. ಅದರಲ್ಲಿ ಸುಮಾರು 24 ಸಾವಿರ ಬ್ಯಾಕ್ಲಾಗ್ ಹುದ್ದೆಗಳು ಭರ್ತಿಯಾಗದೆ ಉಳಿದಿವೆ ಎಂದು ಸಮಿತಿ ತಿಳಿಸಿದೆ. ಎಸ್ಸಿ/ಎಸ್ಟಿ ನೌಕರರಿಗೆ ಮೀಸಲಾತಿ, ಬಡ್ತಿ ಹಾಗೂ ಜೇಷ್ಠತೆಯಲ್ಲಿ ಆಗುತ್ತಿರುವ ತಾರತಮ್ಯಗಳನ್ನು ನಿವಾರಿಸುವುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಸೇರಿದಂತೆ ಶಾಸಕರು, ಮಠಾಧೀಶರು, ದಲಿತ ಹಾಗೂ ಹಿಂದುಳಿದ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
?ಸಂವಿಧಾನದ ಆಶಯಗಳು, ಎಸ್ಸಿ/ಎಸ್ಟಿ ನೌಕರರು ಮತ್ತು ಅಧಿಕಾರಿಗಳ ಜವಾಬ್ದಾರಿ? ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಸಂವಿಧಾನದ ಆಶಯಗಳ ಅನುಷ್ಠಾನ ಮತ್ತು ರಕ್ಷಣೆ ಕುರಿತು ಅರಿವು ಮೂಡಿಸುವುದು, ಒಗ್ಗಟ್ಟು ಹಾಗೂ ಭಾವೈಕ್ಯತೆ ಬೆಳೆಸುವುದು ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮೀಸಲಾತಿ ಹಾಗೂ ಸಂವಿಧಾನಿಕ ಹಕ್ಕುಗಳ ಕುರಿತು ಮೂಡುತ್ತಿರುವ ಅಪಪ್ರಚಾರ ಮತ್ತು ಗೊಂದಲಗಳನ್ನು ದೂರಗೊಳಿಸಿ, ಶೋಷಿತ ಹಾಗೂ ದಮನಿತ ವರ್ಗಗಳಿಗೆ ಕಾನೂನುಬದ್ಧ ಹಕ್ಕುಗಳು ಮತ್ತು ಸೌಲಭ್ಯಗಳು ತಲುಪುವಂತೆ ಜಾಗೃತಿ ಮೂಡಿಸುವ ಉದ್ದೇಶವೂ ಸಮಾವೇಶಕ್ಕಿದೆ ಎಂದರು.
ಬಸವ, ಬುದ್ಧ ಹಾಗೂ ಅಂಬೇಡ್ಕರ್ ಅವರ ಸಿದ್ಧಾಂತಗಳಲ್ಲಿ ನಂಬಿಕೆ ಹೊಂದಿರುವ ಎಲ್ಲಾ ಸರ್ಕಾರಿ ನೌಕರರು, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಸಿ. ನರಸಿಂಹಮೂರ್ತಿ, ಗೌರವಾಧ್ಯಕ್ಷ ಬಿ.ಆರ್. ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಹೆಚ್. ನಾಗರಾಜು, ಖಜಾಂಚಿ ಹೆಚ್.ಎನ್. ಸುರೇಶ್, ಉಪಾಧ್ಯಕ್ಷ ಡಾ. ಹೆಚ್.ಎನ್. ಚಂದ್ರಕುಮಾರ್, ಲಕ್ಷ್ಮೀನರಸಯ್ಯ, ಗೋಪಿನಾಥ್, ಹನುಮಂತರಾಜು, ಕೋಟೆಕಲ್ಲಯ್ಯ ಮತ್ತಿತರರು ಉಪಸ್ಥಿತರಿದ್ದರು.