ಭ್ರಷ್ಟಾಚಾರ, ದುರಾಡಳಿತದ ಜನವಿರೋಧಿ, ಸರ್ಕಾರ: ಬಿಜೆಪಿ ಟೀಕೆ

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಸಂದರ್ಭದಲ್ಲಿ ನಗರದಲ್ಲಿ ಸೇವಾ ಸಮರ್ಪಣಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಯಾವ ಪುರುಷಾರ್ಥಕ್ಕೆ ಈ ಸಮಾವೇಶ ಮಾಡುತ್ತಿದ್ದಾರೆ? ಭ್ರಷ್ಟಾಚಾರ, ದುರಾಡಳಿತವೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನೆ ಎಂದು ಬಿಜೆಪಿ ಶಾಸಕ ಬಿ. ಸುರೇಶ್‍ಗೌಡರು ಟೀಕಿಸಿದರು.

ಸೋಮವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಯಕ್ರಮಗಳನ್ನಾದರೂ ಸರಿಯಾಗಿ ಕೊಡುತ್ತಿದೆ ಎಂದರೆ ಅದೂ ಇಲ್ಲ. ಅವರು ಹೇಳಿದಂತೆ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಹಣ ತಲುಪುತ್ತಿಲ್ಲ. 5 ಸಾವಿರ ಕೋಟಿ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ತಮ್ಮ ಸರ್ಕಾರದ ಲೋಪವನ್ನು ಒಪ್ಪಿಕೊಂಡಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್‍ನವರ ಮೇಲೆ ಗುತ್ತಿಗೆದಾರರು 80 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದಾರೆ. ಈ ಆರೋಪಕ್ಕೆ ಮುಖ್ಯಮಂತ್ರಿಯಾಗಲಿ, ಉಪಮುಖ್ಯಮಂತ್ರಿಯಾಗಲಿ ಪ್ರತಿಕ್ರಿಯೆ ನೀಡಿಲ್ಲ. ಮೌನಂ ಸಮ್ಮತಿ ಲಕ್ಷಣಂ ಎನ್ನುವಂತೆ ಭ್ರಷ್ಟಾಚಾರವನ್ನು ಒಪ್ಪಿಕೊಂಡಿದ್ದಾರೆ. ಸ್ವತ: ಮುಖ್ಯಮಂತ್ರಿಯವರೇ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಮೂಡಾ ನೀವೇಶನ ಪಡೆದ ಪ್ರಕರಣದಲ್ಲಿ 14 ನಿವೇಶನಗಳನ್ನು ವಾಪಸ್ ನೀಡಿರುವುದು ಅಕ್ರಮ ಒಪ್ಪಿಕೊಂಡಂತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿನಿತ್ಯ ಕುರ್ಚಿ ಕಿತ್ತಾಟ ವಿಚಾರಗಳು ಪತ್ರಿಕೆಗಳಲ್ಲಿ ದೊಡ್ಡ ಸುದ್ದಿಯಾಗುತ್ತಿವೆ. ಸರ್ಕಾರದಲ್ಲಿ ಹಲವಾರು ಗುಂಪು, ಬಣಗಳಿದ್ದು ಆಡಳಿತ ದಿಕ್ಕುತಪ್ಪಿದೆ ಎಂದರು.

ಭ್ರಷ್ಟಾಚಾರ, ಗುಂಪುಗಾರಿಗೆ ಹೊರತಾಗಿ ಕಾಂಗ್ರೆಸ್ ಸರ್ಕಾರಕ್ಕೆ ಜನರ ಸಮಸ್ಯೆ ನಿವಾರಣೆ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲ, ಶಾಲಾ ಕಟ್ಟಡಗಳಿಗೆ ಬಣ್ಣ ಬಳಿಯಲು, ರಸ್ತೆ ಗುಂಡಿ ಮುಚ್ಚಲೂ ಸರ್ಕಾರದ ಬಳಿ ಹಣವಿಲ್ಲ, ಅನುದಾನ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದೆ. ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂಬ ಅಪಖ್ಯಾತಿ ಪಡೆದಿದ್ದಾರೆ. ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ 8 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಸಾಲದ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡುತ್ತಾ ಅಭಿವೃದ್ಧಿ ಶೂನ್ಯವಾಗಿದೆ. ಈ ಸರ್ಕಾರ ತೊಲಗಿದರೆ ಸಾಕು ಎಂದು ರಾಜ್ಯದ ಜನ ಕಾಯುತ್ತಿದ್ದಾರೆ ಎಂದು ಸುರೇಶ್‍ಗೌಡರು ಹೇಳಿದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಶೇಕಡ 22ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ಎರಡನೇ ರಾಜ್ಯವಾಗಿದೆ. ಈ ಸರ್ಕಾರಕ್ಕೆ ಅಭಿವೃದ್ಧಿ ಚಿಂತನೆಗಳಿಲ್ಲ, ಗ್ಯಾರಂಟಿ, ತುಷ್ಠೀಕರಣ
ಮೂಲಕ ಚುನಾವಣೆ ಗೆಲ್ಲುವುದೇ ಉದ್ದೇಶವಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಮಾನತೆ ತರಬೇಕು ಎಂದು ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷದ ನಂತರ ಈಗ ಮತ್ತೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬರಲು ಆದೇಶ ಮಾಡಿದೆ. ಇದು ತುಷ್ಠೀಕರಣದ ಮುಸ್ಲೀಂ ವೋಟ್ ಬ್ಯಾಂಕ್ ಮಾಡಿಕೊಳ್ಳುವುದಾಗಿದೆ. ಈ ಮೂಲಕ ಮುಸ್ಲೀಂ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಪ್ರತ್ಯೇಕಗೊಳಿಸುವುದರೊಂದಿಗೆ ಅಸಮಾನತೆ ತಂದು ಶೋಷಣೆ ಮಾಡುವ ಪ್ರಯತ್ನವೂ ಇದೆ ಎಂದು ಸುರೇಶ್‍ಗೌಡರು ಆರೋಪಿಸಿದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಮುಖಂಡ ಎಸ್.ಡಿ. ದಿಲೀಪ್‍ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಹನುಮಂತರಾಜು, ಕಾರ್ಯದರ್ಶಿ ಕೆ. ವೇದಮೂರ್ತಿ, ನಗರ ಅಧ್ಯಕ್ಷ ಧನುಷ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುಮಿತ್ರಾದೇವಿ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎ.ಹೆಚ್. ಆಂಜನಪ್ಪ, ಮುಖಂಡರಾದ ಜೆ. ಜಗದೀಶ್, ಮರಿತಿಮ್ಮಯ್ಯ ಹಾಜರಿದ್ದರು

Leave a Reply

Your email address will not be published. Required fields are marked *