ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ, ದಲಿತ ವಿರೋಧಿ, ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಖಂಡನಾ ನಿರ್ಣಯ ಕೈಗೊಂಡಿತು. ಇದೇ ವೇಳೆ ಸತತ ಮೂರನೇ ಬಾರಿ ಪ್ರಧಾನಿಯಾದ ನರೇಂದ್ರ ಮೋದಿಯವರು, ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ, ಕೇಂದ್ರ ಸಚಿವರಾಗಿರುವ ವಿ.ಸೋಮಣ್ಣ, ಚಿತ್ರದುರ್ಗ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರನ್ನು ಅಭಿನಂದಿಸಿ ಅಭಿನಂದನಾ ನಿರ್ಣಯ ಮಂಡಿಸಿತು.
ಶನಿವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯನ್ನು ಮಾಜಿ ಸಂಸದ ಜಿ.ಎಸ್ ಬಸವರಾಜು ಉದ್ಘಾಟಿಸಿ, ನಮ್ಮ ಜಿಲ್ಲೆ ವ್ಯಾಪ್ತಿಯ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಪಡೆದಿದ್ದು, ಈ ಗೆಲುವಿಗೆ ನಮ್ಮಲ್ಲಿರುವ ಒಗ್ಗಟ್ಟು, ಹೋರಾಟ, ಬದ್ಧತೆ ಕಾರಣ. ಮುಂಬರುವ ಚುನಾವಣೆಗಳಲ್ಲೂ ಇದೇ ಬದ್ಧತೆ ಪ್ರದರ್ಶಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್ಗೌಡ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾ ಉಪಾಧಕ್ಷ ಅನಿಲ್ಕುಮಾರ್, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಶಂಕರಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್ಗೌಡ, ಹಾಲೇಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ ಮೊದಲಾದವರು ಭಾಗವಹಿಸಿದ್ದರು.
ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್ಗೌಡರು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ, ದಲಿತ ವಿರೋಧಿ, ಭ್ರಷ್ಟಾಚಾರ, ಅಭಿವೃದ್ಧಿ ಆಡಳಿತದ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದರು.
ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಪೈಪ್ಲೈನ್ ಮೂಲಕ ಅವೈಜ್ಞಾನಿಕವಾಗಿ ಮಾಗಡಿ ತಾಲ್ಲೂಕಿಗೆ ತೆಗೆದುಕೊಂಡು ಹೋಗುವ, ಜಿಲ್ಲೆಯ ಜನರಿಗೆ ಅನ್ಯಾಯ ಮಾಡುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿದರು.
ಮುಂಡರಾದ ಸಾಗರನಹಳ್ಳಿ ವಿಜಯಕುಮಾರ್ ಹಾಗೂ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಖಂಡನಾ ನಿರ್ಣಯವನ್ನು ಅನುಮೋದನೆ ಮಾಡಿದರು.
ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಅವರು ಅಭಿನಂದನಾ ನಿರ್ಣಯ ಮಂಡನೆ ಮಾಡಿ, ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ವಿ.ಸೋಮಣ್ಣ ಅವರು ಸ್ಪರ್ಧೆ ಮಾಡಿ, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಎಂಟು ವಿಆಧನಸಭಾ ಕ್ಷೇತ್ರಗಳಲ್ಲಿ ಗಮನಾರ್ಹ ಮತಗಳ ಮುನ್ನಡೆ ಸಾಧಿಸಿ ದಾಖಲೆಯ 1.75 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ನರೇಂದ್ರ ಮೋದಿಯವರು ಸತತ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಿರುವುದು, ತುಮಕೂರು ಕ್ಷೇತ್ರದಿಂದ ಸಂಸದರಾದ ವಿ.ಸೋಮಣ್ಣ ಅವರು ಕೇಂದ್ರ ಸಚಿವರಾಗಿರುವುದು ಹಾಗೂ ಸಚಿವ ಸೋಮಣ್ಣ ಅವರು ಕೊಬ್ಬರಿ ಖರಿದಿ ಪ್ರಮಾಣ ಹೆಚ್ಚಳ, ರೈಲ್ವೆ ಮೇಲುಸೇತುವೆಗಳ ನಿರ್ಮಾಣಕ್ಕೆ 350 ಕೊಟಿ ರೂ. ಅನುಮೋದನೆ ದೊರೆಯಲು ಕಾರಣರಾಗಿದ್ದಕ್ಕೆ ಅಭಿನಂದನಾ ನಿರ್ಣಯ ಮಂಡಿಸಿದರು.
ಮುಖಂಡರಾದ ಹೆಚ್.ಟಿ.ಭೈರಪ್ಪ ಹಾಗೂ ಶಂಕರಪ್ಪ ಅನುಮೋದನೆ ಮಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಮಾತನಾಡಿದರು. ಜಿಲ್ಲೆಯ ಬಿಜೆಪಿ ವಿವಿಧ ಮೋರ್ಚಾ, ಮಂಡಲಗಳ ಅದ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮತ್ತಿತರ ಮುಖಂಡರು ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ್ದರು.