
ತುಮಕೂರು- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 4 ತಿಂಗಳಾಗಿದೆ. ಆದರೆ ಬಿಜೆಪಿಯವರಿಗೆ ಇನ್ನೂ ವಿಧಾನಸಭೆ ಮತ್ತು ವಿಧಾನ ಪರಿಷತ್ಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟೀಕಿಸಿದರು.
ಬಿಜೆಪಿ ಪಕ್ಷದಲ್ಲಿ ಆಂತರಿಕ ಕಚ್ಚಾಟ, ಬಿಕ್ಕಟ್ಟು, ಜಗಳ ನಡೆಯುತ್ತಿರುವುದರಿಂದ ಬಿಜೆಪಿ ನಾಯಕರು ಆಂತಕದಲ್ಲಿದ್ದಾರೆ. ಅಲ್ಲದೆ ಕರ್ನಾಟಕದ ಬಿಜೆಪಿ ಗೊಂದಲದ ಗೂಡಾಗಿದೆ ಎಂದು ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ದಿನಗಳಾದರೂ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ಇದು ವಿಧಾನ ಮಂಡಲಕ್ಕೆ ಮಾಡಿದ ಅಪಮಾನವಾಗಿದೆ. ಇಂತಹ ಹೀನಾಯ ಸ್ಥಿತಿಗೆ ಬಿಜೆಪಿ ಬರಲು ಆ ಪಕ್ಷದಲ್ಲಿ ಆಂತರಿಕ ಗೊಂದಲ, ಬಿಕ್ಕಟ್ಟು ಕಾರಣ ಎಂದು ಛೇಡಿಸಿದರು.
ಮೈತ್ರಿ ವಿಚಾರ ಗೊತ್ತಿಲ್ಲ.
ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ವಿಚಾರ ನನಗೆ ನಿಖರವಾಗಿ ಗೊತ್ತಿಲ್ಲ. ಆದರೆ ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳು ಆಂತಕದಲ್ಲಿವೆ ಎಂದರು.
ಕೇಂದ್ರದಲ್ಲಿ 9 ವರ್ಷಗಳಿಂದ ಬಡಜನರ ಕಲ್ಯಾಣ ಕಾರ್ಯಕ್ರಮಗಳು ಜಾರಿಗೆ ಬಂದಿಲ್ಲ. ಪ್ರತಿ ವರ್ಷ ಕೋಟ್ಯಂತರ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿ, ಕೋಟ್ಯಂತರ ಉದ್ಯೋಗ ಕಡಿತ ಮಾಡಲಾಗಿದೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೀವನವನ್ನು ದುಸ್ತರಗೊಳಿಸಲಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಶ್ರೀಮಂತರನ್ನು ಮತ್ತಷ್ಟು ಶ್ರೀಮಂತರನ್ನಾಗ ಮಾಡುತ್ತಿದೆ. ಬಡವರ ಪರ ಕಾರ್ಯಕ್ರಮ ರೂಪಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್ನತ್ತ ಜನ ಒಲವು ತೋರುತ್ತಿದ್ದಾರೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ನವರು ಎಲ್ಲಾ ಉಲ್ಟಾ ಆಗುತ್ತದೆ ಎಂದು ಅನುಕೂಲ ಸಿಂಧು ಮೈತ್ರಿ ಮಾಡಿಕೊಂಡರೆ ನಮಗೇನು ತೊಂದರೆಯಿಲ್ಲ. ನಮ್ಮ ಪರವಾಗಿ ಜನ ಇದ್ದಾರೆ ಎಂದ ಅವರು,
ಬಡ ಜನರ ಆಶೋತ್ತರಗಳನ್ನು ಈಡೇರಿಸುವುದು ಬಿಜೆಪಿಯರಿಗೆ ಬೇಕಾಗಿಲ್ಲ ಎಂದರು.
ಕರ್ನಾಟಕದಲ್ಲಿ ಬಡವರ ಕಲ್ಯಾಣಕ್ಕಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಬಿಜೆಪಿಗೆ ಬಡವರ ಪರ ಕಾಳಜಿ ಇಲ್ಲ ಎಂದು ಅವರು ಹೇಳಿದರು.
ಜನಪರ ಆಡಳಿತ
ಕಂದಾಯ ಇಲಾಖೆಯಲ್ಲಿ ಒಳ್ಳೆಯ ಆಡಳಿತ ಕೊಡಬೇಕು. ಇಲಾಖೆಯಲ್ಲಿ ಕಾಲಾನು ಕಾಲದಿಂದ ಸಮಸ್ಯೆಗಳು ಬಗೆಹರಿಯದೆ ಹಾಗೆಯೇ ಉಳಿದುಕೊಂಡಿವೆ. ಹಾಗಾಗಿ ಅಂತಹ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುತ್ತೇನೆ. ಇಲಾಖೆಯ ಕಾರ್ಯಕ್ರಮ, ಕೆಲಸಗಳನ್ನು ಬೇಗ ಮುಗಿಸಿ ಜನಪರ ಆಡಳಿತ ನೀಡುವುದು ನಮ್ಮ ಉದ್ದೇಶ ಎಂದು ಅವರು ತಿಳಿಸಿದರು.
ಕಂದಾಯ ಇಲಾಖೆಯಲ್ಲಿ ಇರುವ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಬೇಕು ಎಂಬ ಉದ್ದೇಶದಿಂದ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಹಾಗಾಗಿ ಪ್ರತಿ ಜಿಲ್ಲೆಗೂ ಭೇಟಿ ನೀಡಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸುತ್ತಿದ್ದೇನೆ ಎಂದರು.
ಗುಬ್ಬಿ ತಾಲ್ಲೂಕಿನ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಅಧಿಕಾರಿಗಳ ಮೇಲೆ ಕೇಸು ದಾಖಲಾಗಿದೆ. ಲೋಕಾಯುಕ್ತದಿಂದ ವರದಿ ಬಂದ ನಂತರ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಆಡಳಿತ ಯಂತ್ರ ಚುರುಕಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ ಪ್ರತಿ ಜಿಲ್ಲೆಯಲ್ಲೂ ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ ನೀಡುವ ಸಲುವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.