ತುಮಕೂರು : ನವಜಾತ ಶಿಶುಗಳ ತೀವ್ರ ಆರೈಕೆ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯಿಲ್ಲದೆ ಮಕ್ಕಳ ಆರೈಕೆ ಮತ್ತು ರೋಗಿಗಳಿಗೆ ಪೌಷ್ಠಿಕ ಆಹಾರ ನೀಡುವಲ್ಲಿ ವಿಫಲತೆ ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆ ಇರುವ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ತುಮಕೂರು ಜಿಲ್ಲಾಸ್ಪತ್ರೆಗೆ ಆಯೋಗದ ಸದಸ್ಯ ಡಾ: ಕೆ.ಟಿ. ತಿಪ್ಪೇಸ್ವಾಮಿ ಅವರೊಂದಿಗೆ ಭೇಟಿ ನೀಡಿದ್ದ ಅವರು, ಮಕ್ಕಳ ವಿಭಾಗದ ಶಿಶು ಆರೈಕೆ ಘಟಕ ಮತ್ತು ಇತ್ಯಾದಿ ಕಡೆಗಳಲ್ಲಿ ಪರಿಶೀಲಿಸಿ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಸಂಬಂಧಿಸಿದ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಭೇಟಿ ನೀಡಿದ ಸಂದರ್ಭದಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯೇ ಕೆಟ್ಟುಹೋಗಿದ್ದು, ಒಂದೇ ವಾರ್ಡಿನಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡುವುದರಿಂದ ಒಂದು ಮಗುವಿಗೆ ಇರುವ ರೋಗ ಮತ್ತೊಂದು ಮಗುವಿಗೆ ಹರಡುವ ಸಾಧ್ಯತೆಯಿರುತ್ತದೆ. ಆದರೆ ಈ ಬಗ್ಗೆ ಆಸ್ಪತ್ರೆ ವೈದ್ಯರು ನಿಗಾವಹಿಸುತ್ತಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು.
ಅಲ್ಲದೆ, ಶಿಶುಗಳ ಕಳವಿನ ಪ್ರಕರಣಗಳು ರಾಜ್ಯದ ವಿವಿಧೆಡೆ ಅಲ್ಲಲ್ಲಿ ದಾಖಲಾಗುತ್ತಿದ್ದು, ಶಿಶುಗಳ ಆರೈಕೆ ಕೇಂದ್ರದಲ್ಲಿ ಸರಿಯಾದ ದಾಖಲೆಗಳನ್ನು ಹಾಗೂ ಸಿಸಿ ಟಿವಿ ಸೇರಿದಂತೆ ಭದ್ರತೆ ವ್ಯವಸ್ಥೆ ಒದಗಿಸಬೇಕಿದೆ. ಜಿಲ್ಲಾಸ್ಪತ್ರೆಯಲ್ಲಿ ಈ ವಿಚಾರದಲ್ಲೂ ಕೊರತೆಯನ್ನು ಗಮನಿಸಲಾಯಿತು.
ನಂತರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಕುರಿತು ಫಲಕಗಳನ್ನು ಅಳವಡಿಸದಿರುವ ಬಗ್ಗೆ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳು, ಪೋಕ್ಸೋ ಕಾಯ್ದೆ ಸೇರಿದಂತೆ ಈಗಾಗಲೇ ಪೊಲೀಸ್ ಇಲಾಖೆಗೆ ತರಬೇತಿ ನೀಡಿದ ನಂತರವೂ ಪೊಲೀಸ್ ಠಾಣೆಯಲ್ಲಿ ಫಲಕಗಳನ್ನು ಹಾಕದಿರುವ ಬಗ್ಗೆ ಅವರು ಅಸಮಧಾನ ವ್ಯಕ್ತಪಡಿಸಿದರು.
ತುಮಕೂರಿನ ಗುರುಸ್ಪರ್ಶ ಸ್ಕ್ಯಾನಿಂಗ್ ಸೆಂಟರ್ಗೆ ಭೇಟಿ ನೀಡಿದ ನಿಯೋಗವು ಪ್ರಸವಪೂರ್ವ ಗರ್ಭ ಪರೀಕ್ಷಾ ತಪಾಸಣೆ ಬಗ್ಗೆ ಸರಿಯಾದ ದಾಖಲೆಗಳನ್ನು ಸಾದರಪಡಿಸದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಪ್ರಸ್ತುತ ದಿನಗಳಲ್ಲಿ ಗರ್ಭ ತಪಾಸಣೆಯಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೂ. ನಿಯಮಾನುಸಾರ ದಾಖಲೆಗಳನ್ನು ಇಟ್ಟಿಲ್ಲ ಎಂಬ ಕಾರಣಕ್ಕೆ ಇದನ್ನು ಸರಿಯಾಗಿ ನಿಗಾವಹಿಸುತ್ತಿಲ್ಲ ಎಂಬ ಕಾರಣಕ್ಕೆ ಸಂಬಂಧಿಸಿದ ಅಧಿಕಾರಿಗೆ ನೋಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದರು.
ನಂತರ ತುಮಕೂರು ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಪದವಿಪೂರ್ವ ಕಾಲೇಜು, ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆಯಿಂದ ಸೂಕ್ತ ತಪಾಸಣೆ ನಡೆಯುತ್ತಿದೆಯೇ? ಪೌಷ್ಠಿಕ ಆಹಾರ ಸರಿಯಾಗಿ ನೀಡಲಾಗುತ್ತಿದೆಯೇ ಎಂಬ ಇತ್ಯಾದಿ ವಿವರಗಳನ್ನು ವಿದ್ಯಾರ್ಥಿಗಳಿಂದ ಪಡೆದರು. ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿ ಅಸಮಧಾನ ವ್ಯಕ್ತಪಡಿಸಿದ ನಿಯೋಗವು ಸಂಬಂಧಿಸಿದ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸೂಚಿಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪವಿತ್ರ ಆರ್.ಜಿ., ಜಿಲ್ಲಾ ಶಸ್ತ್ರ ಚಿಕಿತ್ಸಕ ಅಸ್ಗರ್ ಬೇಗ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್ ಮತ್ತಿತರರು ಉಪಸ್ಥಿತರಿದ್ದರು.