ಕಾಂಗ್ರೆಸ್‍ಗೆ ಸರ್ಕಾರಕ್ಕೆ ಕುರ್ಚಿ ರೋಗ ಬಂದಿದೆ : ಮಾಜಿ ಸಿಎಂ ಸದಾನಂದಗೌಡ

ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕುರ್ಚಿ ರೋಗ ಬಂದಿದೆ. ಅವರ ಕುರ್ಚಿ ಕಾದಾಟದಲ್ಲಿ ಆಡಳಿತ ಸಂಪೂಣ ಕುಸಿದಿದೆ. ರೈತರು ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ಇರಬೇಕಾಗಿದ್ದ ರೈತರು ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗೆ ಬಂದಿದ್ದಾರೆ. ಇಷ್ಟಾಗಿಯೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಂಕಷ್ಟ ಕೇಳುವ ಪ್ರಯತ್ನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ವಾಗ್ದಾಳಿ ಮಾಡಿದರು.

ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ, ಅನಾವೃಷ್ಟಿ, ಬೆಳೆಗೆ ರೂಗರುಜಿನ, ಮಾರುಕಟ್ಟೆ ವ್ಯತ್ಯಯಗಳಿಂದ ರೈತರು ಬದುಕು ಚಿಂತಾಜನಕವಾಗಿದೆ. ಸರ್ಕಾರವಂತೂ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಜವಾಬ್ದಾರಿಯುತ ವಿಪಕ್ಷವಾದ ಬಿಜೆಪಿ ರೈತರ ರಕ್ಷಣೆಗೆ ನಿಲ್ಲುತ್ತದೆ. ರೈತರ ಜೊತೆ ಸೇರಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ರೂಪಿಸುತ್ತದೆ. ರೈತರು ಆತಂಕ ಪಡಬೇಡಿ, ರೈತ ವಿರೋಧಿ ಸರ್ಕಾರ ತೊಲಗಿ ಮುಂದೆ ರೈತಪರ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ಮೂಡಿಸುವುದಾಗಿ ಹೇಳಿದರು.

ಈಗ ಮೆಕ್ಕೆಜೋಳ ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಇನ್ನೂ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಲ್ಲ. ಬೆಳೆಹಾನಿಗೆ ಪರಿಹಾರ ಘೋಷಿಸಿ ಒಂದೂವರೆ ತಿಂಗಳಾದರೂ ಪರಿಹಾರ ಕೊಡುವಲ್ಲಿ ರಾಜ್ಯ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ರಾಜ್ಯದ ಎಲ್ಲಾ ಸಮಸ್ಯೆಗಳಿಗೂ ಕೇಂದ್ರ ಸರ್ಕಾರದ ಕಡೆ ಬೆಟ್ಟು ತೋರಿಸುವುದು ಮತ್ತು ಪರಿಹಾರಕ್ಕಾಗಿ ಅವರ ಕಡೆ ಮುಖ ನೋಡುವುದಕ್ಕಷ್ಟೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೀಮಿತವಾಗಿದೆ ಎಂದು ದೂರಿದರು.

ಕೇಂದ್ರ ಸರ್ಕಾರ ರೈತ ಪರವಾದ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ನೀಡುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 51 ಲಕ್ಷ ರೈತರಿಗೆ 6 ಸಾವಿರ ರೂ. ಗಳನ್ನು ವಾರ್ಷಿಕವಾಗಿ ನೀಡುತ್ತಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮೊತ್ತವನ್ನು 3 ಲಕ್ಷದಿಂ 5 ಲಕ್ಷ ರೂ. ಗೆ ಏರಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 1.75 ಲಕ್ಷ ಕೋಟಿ ರೂ. ಹಣವನ್ನು ದೇಶದ ರೈತರಿಗೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯಡಿ 60 ವರ್ಷದ ನಂತರ ಪಿಂಚಣಿ ರೂಪದಲ್ಲಿ ಮಾಸಿಕ 3 ಸಾವಿರ ರೂ. ನೀಡಲಾಗುತ್ತದೆ. ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ ಒಂದು ಲಕ್ಷ ಕೋಟಿ ರೂ. ನೀಡಲಾಗಿದೆ. ಹನಿ ನಿರಾವರಿ ಪ್ರೋತ್ಸಾಹಿಸಲು ಕೃಷಿ ಸಂಚಾ ಯೋಜನೆ ಅಡಿಯಲ್ಲಿ 93 ಸಾವಿರ ಕೋಟಿ ಹಣ ನೀಡಲಾಗಿದೆ. ಹೀಗೆ ಹಲವಾರು ರೈತಪರ ಯೋಜನೆಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಡಿ.ವಿ.ಸದಾನಂದಗೌಡರು ಹೇಳಿದರು.

ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣ ಕಡೆಗಣಿಸಿದೆ. ಹೈನುಗಾರಿಕೆಯಿಂದಲೇ ಜೀವನ ನಡೆಸುತ್ತಿರುವ ರಾಜ್ಯದ 24 ಲಕ್ಷ ಹಾಲು ಉತ್ಪಾದಕ ರೈತ ಕುಟುಂಬಗಳು ಪಶು ಆಹಾರ ಬೆಲೆ ಹೆಚ್ಚಳದಿಂದ ಸಂಕಷ್ಟಕ್ಕೊಳಗಾಗಿವೆ. ಬಾಕಿ ಉಳಿಸಿಕೊಂಡಿರುವ 620 ಕೋಟಿ ರೂ. ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರೈತರು ತಮ್ಮ ನೀರು ಬಳಸಿಕೊಳ್ಳಲು ವಿದ್ಯುತ್ ಸಂಪರ್ಕ ಮತ್ತು ಟ್ರಾನ್ಸ್‍ಫಾರ್ಮರ್ ಅಳವಡಿಕೆಗೆ 2 ಲಕ್ಷ ರೂ. ನಿಗಧಿ ಮಾಡಿ ಸರ್ಕಾರ ರೈತರ ಜೇಬು ಕತ್ತರಿಸುತ್ತಿದೆ. ನೀರಾವರಿ ಯೋಜನೆಗಳು ಸಂಪೂರ್ಣ ನೆನೆಗುದಿಗೆ ಬಿದ್ದಿವೆ. ಸರ್ಕಾರ ರೈತ ವಿರೋಧಿ ಧೋರಣೆ ವಿರುದ್ಧ ಬಿಜೆಪಿ ಎಲ್ಲಾ ತಾಲ್ಲೂಕು ಈ ತಿಂಗಳ 26-27ರಂದು, ಜಿಲ್ಲಾ ಕೇಂದ್ರಗಳಲ್ಲಿ ಡಿಸೆಂಬರ್ 1-2ರಂದು ಹೋರಾಟ ನಡೆಸಲು ನಿಶ್ಚಯ ಮಾಡಿದೆ ಎಂದು ಸದಾನಂದಗೌಡರು ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಬಿದರೆ, ಮುಖಂಡ ದಿಲೀಪ್‍ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್‍ಗೌಡ, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಪ್ರಧಾನ ಕಾರ್ಯದರ್ಶಿ ರವೀಂದ್ರ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಮ್ಮ, ಮಾಧ್ಯಮ ಪ್ರಮುಖರಾದ ಜೆ.ಜಗದೀಶ್, ಮರಿತಿಮ್ಮಯ್ಯ ಹಾಜರಿದ್ದರು.

Leave a Reply

Your email address will not be published. Required fields are marked *