ತುಮಕೂರು : “Heart Safe Tumkur – A People’s CPR Movement” ಅಭಿಯಾನದ ಅಂಗವಾಗಿ ತುಮಕೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸೋಮವಾರ CPR (Cardiopulmonary Resuscitation) ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ತುರ್ತು ಸಂದರ್ಭಗಳಲ್ಲಿ ಹೃದ್ರೋಗಿಗಳಿಗೆ ಸಕಾಲದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲೆಯಲ್ಲಿ CPR ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಅಂಗನವಾಡಿ ಮೇಲ್ವಿಚಾರಕರಿಗೂ ಇಂತಹ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ನೆರವು ದೊರೆಯುವ ಮುನ್ನವೇ CPR ನೀಡುವುದು ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ವೈದ್ಯ ಡಾ|| ತಮೀಮ್ ಹಾಗೂ ತರಬೇತುದಾರರು ವಿದ್ಯಾರ್ಥಿಗಳಿಗೆ CPR ಮೂಲಭೂತ ವಿಧಾನ, ಹೃದಯಾಘಾತ ಅಥವಾ ಹೃದಯ ಸ್ತಂಭನದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳು ಹಾಗೂ ಜೀವ ಉಳಿಸುವ ಕೌಶಲ್ಯಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪ್ರಾಂಶುಪಾಲರು, ಅಧಿಕಾರಿಗಳು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತರಬೇತಿಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, CPR ವಿಧಾನವನ್ನು ಪ್ರಾಯೋಗಿಕವಾಗಿ ಕಲಿತುಕೊಂಡರು. ತುರ್ತು ಪರಿಸ್ಥಿತಿಯಲ್ಲಿ ಆತ್ಮವಿಶ್ವಾಸದಿಂದ ಹಾಗೂ ಸಮಯಪ್ರಜ್ಞೆಯಿಂದ ರೋಗಿಗಳಿಗೆ ನೆರವಾಗುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು. “Simple Skills. Real Impact. Safer Communities” ಎಂಬ ಆಶಯದೊಂದಿಗೆ ಯುವಜನರಲ್ಲಿ ಅPಖ ಅರಿವು ಮೂಡಿಸುವ ಮೂಲಕ ತುಮಕೂರನ್ನು “Heart Safe District” ಆಗಿ ರೂಪಿಸುವ ಅಭಿಯಾನಕ್ಕೆ ಮತ್ತಷ್ಟು ಬಲ ನೀಡಲಾಯಿತು.
ಮುಂದಿನ ತಿಂಗಳು ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. CPR ಕುರಿತು ಜ್ಞಾನ ಮತ್ತು ತರಬೇತಿ ಪ್ರತಿಯೊಬ್ಬರಿಗೂ ತಲುಪುವ ಮೂಲಕ ಸುರಕ್ಷಿತ ಹಾಗೂ ಜೀವ ರಕ್ಷಕ ಸಮುದಾಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.