ತುಮಕೂರು : ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಿಂದ ಪಂಚಾಯತಿಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.
ತುಮಕೂರು ನಗರದ ಹೊರವಲಯ ಸಿದ್ಧಾರ್ಥನಗರದ ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮ ಪಂಚಾಯತಿಗಳನ್ನು ಮತ್ತಷ್ಟು ಬಲಪಡಿಸಲು ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ತೆರಿಗೆ ವಸೂಲಾತಿ, ಸ್ವಚ್ಛತೆ, ಮಹಿಳಾ ಸಬಲೀಕರಣ, ನಿವೇಶನ/ಮನೆ ಹಂಚಿಕೆ, ಆರ್ಥಿಕ ಶಿಸ್ತಿನ ನಿರ್ವಹಣೆ ಬಗ್ಗೆ ಈ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಭಾರತದಲ್ಲಿರುವ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇತರೆ ಯಾವುದೇ ದೇಶದಲ್ಲಿ ಕಾಣ ಸಿಗಲು ಸಾಧ್ಯವಿಲ್ಲ. ಇಡೀ ವಿಶ್ವದಲ್ಲಿಯೇ ಭಾರತದ ಆಡಳಿತ ವಿಕೇಂದ್ರೀಕರಣ ವ್ಯವಸ್ಥೆ ಮಾದರಿಯಾಗಿದೆ. ಎರಡನೇ ಅತೀ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಅಮೆರಿಕಾದಂತಹ ಮುಂದುವರೆದಿರುವ ರಾಷ್ಟ್ರದಲ್ಲಿಯೂ ಸ್ಥಳೀಯ ಸಂಸ್ಥೆಗಳ ಆಡಳಿತವು ವ್ಯವಸ್ಥಿತವಾಗಿಲ್ಲ. ಆದರೆ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ಬಹಳ ಯಶಸ್ಸನ್ನು ಕಂಡಿದೆ ಎಂದು ಅಭಿಪ್ರಾಯಪಟ್ಟರು.
ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯು ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಾಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ರಾಜಧಾನಿಗಳಲ್ಲಿ ಯೋಜನೆಗಳನ್ನು ರೂಪಿಸುವುದರಿಂದ ಗ್ರಾಮಗಳು ಅಭಿವೃದ್ಧಿಯಾಗುವುದಿಲ್ಲವೆಂದು ಮನಗಂಡ ಸರ್ಕಾರವು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೆ ತಂದಿತು. ಈ ವ್ಯವಸ್ಥೆಯಿಂದ ದೇಶದಲ್ಲಿ ಲಕ್ಷಾಂತರ ಮಹಿಳೆಯರು ಸ್ಥಳೀಯ ಆಡಳಿತದ ಅಧಿಕಾರದ ಚುಕ್ಕಾಣಿ ಹಿಡಿದು ಯಶಸ್ಸು ಕಂಡಿದ್ದಾರೆ. ಗ್ರಾಮ ಪಂಚಾಯುತಿ ಅಧ್ಯಕ್ಷ, ಉಪಾಧ್ಯಕ್ಷರಾಗಲು ಯಾವುದೇ ರಾಜಕೀಯ, ಶೈಕ್ಷಣಿಕ ಹಿನ್ನೆಲೆ ಹೊಂದಿರಬೇಕಾಗಿಲ್ಲ. ಉತ್ತಮ ಪ್ರಜಾ ಸೇವಾ ಮನೋಭಾವ ಹೊಂದಿರುವ ಯಾವುದೇ ಅಭ್ಯರ್ಥಿ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಅಧ್ಯಕ್ಷ/ಉಪಾಧ್ಯಕ್ಷರ ಅಧಿಕಾರ ಹೊಂದಬಹುದು ಎಂದು ತಿಳಿಸಿದರು.
1973ರ ಸಂವಿಧಾನದ ತಿದ್ದುಪಡಿಯನ್ವಯ ಸಮಾಜದಲ್ಲಿ ಎಲ್ಲರನ್ನೂ ಸಶಕ್ತರನ್ನಾಗಿ ಮಾಡಬೇಕು. ಮಹಿಳೆಯರು, ಶೋಷಿತರು, ಹಿಂದುಳಿದವರು, ಪರಿಶಿಷ್ಟ ಜಾತಿ/ಪಂಗಡದವರಿಗೆ ಮೀಸಲಾತಿ ಕಲ್ಪಿಸಬೇಕೆಂಬ ದೃಷ್ಟಿಯಿಂದ ಪೊಲೀಸ್, ಕಂದಾಯ, ಆರ್ಥಿಕ ಇಲಾಖೆ ಹೊರತುಪಡಿಸಿ ಉಳಿದ 29 ಇಲಾಖೆಗಳ ಅಧಿಕಾರವನ್ನು ಪಂಚಾಯತಿ ವ್ಯಾಪ್ತಿಗೆ ನೀಡಲಾಗಿದೆ. ಗ್ರಾಮ ಪಂಚಾಯತಿ ಅಧ್ಯಕ್ಷ/ಉಪಾಧ್ಯಕ್ಷರು ತಮಗೆ ಸಿಕ್ಕ ಅಧಿಕಾರವನ್ನು ಜನಸೇವೆಗೆ ವಿನಿಯೋಗಿಸುವ ಮೂಲಕ ತಮ್ಮ ಪಂಚಾಯತಿಗಳನ್ನು ಮಾದರಿ ಪಂಚಾಯತಿಗಳನ್ನಾಗಿ ರೂಪಿಸಬೇಕೆಂದರು.
ಜನರ ಆರೋಗ್ಯ ಹಿತದೃಷ್ಟಿಯಿಂದ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ತಲಾ 55 ಲೀ. ಶುದ್ಧ ನೀರೊದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ-ಮನೆಗೂ ನಳ ಸಂಪರ್ಕ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 2500 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆಯ ಕಾಮಗಾರಿಗಳು ಇನ್ನೂ ಶೇ.40ರಷ್ಟು ಅನುಷ್ಠಾನವಾಗಬೇಕಾಗಿದೆ ಎಂದು ತಿಳಿಸಿದರು.
ಶಾಸಕ ಸುರೇಶ್ ಗೌಡ ಮಾತನಾಡಿ, ಗ್ರಾಮ ಪಂಚಾಯತಿಗಳನ್ನು ಸ್ಥಳೀಯ ಜನಪ್ರತಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿ ಅಭಿವೃದ್ಧಿಪಡಿಸಬೇಕು. ಪಂಚಾಯತಿ ಅಧ್ಯಕ್ಷರು/ಉಪಾಧ್ಯಕ್ಷರು ಪಂಚಾಯತಿ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು. ಇದರಿಂದ ಪಿಡಿಓಗಳಿಂದ ಕೆಲಸ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಜನಪರ ಕೆಲಸಗಳಿಂದ ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಬೇಕು. ಚರಂಡಿ ನಿರ್ಮಾಣ, ಕಸವಿಲೇವಾರಿ, ಸ್ವಚ್ಛತೆ ಕಾಪಾಡುವುದು, ಜನರ ಆರೋಗ್ಯ, ಗಿಡ-ಮರ ಬೆಳೆಸುವುದು, ಮತ್ತಿತರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕು. ಇಂತಹ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಸಿದರಲ್ಲದೆ, ಅಲೆಮಾರಿ ಜನಾಂಗಗಳಿಗೆ ವಸತಿ ಸೌಕರ್ಯ ಕಲ್ಪಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಪಿಡಿಓಗಳು ರೈತರನ್ನು ಕಚೇರಿಗೆ ಅಲೆದಾಡಿಸದೇ ಅವರ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿಕೊಡಬೇಕು. ಈ ಕಾರ್ಯಾಗಾರವು ಪಂಚಾಯತಿ ಅಧಿಕಾರಿಗಳಿಗೆ ಸ್ಫೂರ್ತಿ, ಹೊಸ ಶಕ್ತಿ ತುಂಬಲಿದ್ದು, ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಯಕಲ್ಪ ಪುಸ್ತಕ ಬಿಡುಗಡೆ ಮಾಡಲಾಯಿತು. ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ತೀರ್ಥಪುರ, ಗುಬ್ಬಿ ತಾಲ್ಲೂಕು ಶಿವಪುರ, ಕೊರಟಗೆರೆ ತಾಲ್ಲೂಕು ತುಂಬಾಡಿ, ಕುಣಿಗಲ್ ತಾಲ್ಲೂಕು ನಿಡಸಾಲೆ, ಮಧುಗಿರಿ ತಾಲ್ಲೂಕು ರಂಟವಳಲು, ಪಾವಗಡ ತಾಲ್ಲೂಕು ಕೋಟಗುಡ್ಡ, ಶಿರಾ ತಾಲ್ಲೂಕು ತಡಕಲೂರು, ತಿಪಟೂರು ತಾಲ್ಲೂಕು ಸಾರ್ಥವಳ್ಳಿ, ತುಮಕೂರು ತಾಲ್ಲೂಕು ಸಿರಿವರ ಹಾಗೂ ತುರುವೇಕೆರೆ ತಾಲ್ಲೂಕು ಗೋಣಿತುಮಕೂರು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದಕ್ಕೂ ಮುನ್ನ ಸಚಿವರು ಜಿಲ್ಲಾ ಪಂಚಾಯತಿ ವತಿಯಿಂದ ತೆರೆಯಲಾಗಿದ್ದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು ಹಾಗೂ ಕಾರ್ಮಿಕ ಇಲಾಖೆಯ ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತುಮುಲ್ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಶೋಕ್ ಕೆ.ವಿ. ಹಾಗೂ ವಿವಿಧ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓಗಳು ಹಾಜರಿದ್ದರು.