ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಹಾಗೂ ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀಮತಿ ಶುಭ ಕಲ್ಯಾಣ್ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೆಎಸ್‌ಡಬ್ಲ್ಯೂಎಎನ್ (ಏSWಂಓ) ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಬರ ಪರಿವೀಕ್ಷಣೆ, ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಚಟುವಟಿಕೆಗಳು, ಮುಂಗಾರು ಹಂಗಾಮು, ಕೋವಿಡ್ ಮುನ್ನೆಚ್ಚರಿಕೆ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ಮಳೆಯ ಸ್ಥಿತಿ, ಕುಡಿಯುವ ನೀರಿನ ಲಭ್ಯತೆ ಹಾಗೂ ವಿವಿಧ ಇಲಾಖೆಗಳ ಸಿದ್ಧತೆ ಕುರಿತು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ತುರ್ತು ಕುಡಿಯುವ ನೀರಿನ ಕ್ರಿಯಾ ಯೋಜನೆ (ಅಂP) ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಕೊಳವೆಬಾವಿ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಧಿಕಾರಿಗಳು ವಿವರವಾಗಿ ಪರಿಶೀಲಿಸಿದರು. ಜಿಲ್ಲೆಯಲ್ಲಿ ಒಟ್ಟು 202 ಕೊಳವೆಬಾವಿಗಳಿಗೆ ಅನುಮೋದನೆ ದೊರೆತಿದ್ದು, ಇದುವರೆಗೆ 189 ಕೊಳವೆಬಾವಿಗಳನ್ನು ಕೊರೆದಿದ್ದು, ಅವುಗಳಲ್ಲಿ 130 ಯಶಸ್ವಿಯಾಗಿ ನೀರು ದೊರೆತಿವೆ ಹಾಗೂ 59 ವಿಫಲವಾಗಿವೆ. ಇನ್ನೂ 13 ಕೊಳವೆಬಾವಿಗಳ ಕೊರೆಯುವುದು ಬಾಕಿಯಿದ್ದು, 118 ಕೊಳವೆಬಾವಿಗಳನ್ನು ಸಾರ್ವಜನಿಕ ಬಳಕೆಗೆ ಸಿದ್ಧಗೊಳಿಸಲಾಗಿದೆ. ಕೊಳವೆಬಾವಿ ಕೊರೆದ ಎಲ್ಲಾ ಸ್ಥಳಗಳನ್ನು ಹೋಬಳಿ ನೋಡಲ್ ಅಧಿಕಾರಿಗಳು, ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಜಿಪಿಎಸ್ ಫೋಟೋ ಹಾಗೂ ವಿಡಿಯೊ ಸಮೇತ ನಾಲ್ಕು ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಚರ್ಚಿಸಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿಗಳು ಮಾತನಾಡಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಹಾಗೂ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಮುಂಗಾರು ಹಂಗಾಮಿನ ಋತುಮಾನ ಪರಿಸ್ಥಿತಿ, ಬಿತ್ತನೆ ಪ್ರಗತಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ ಕುರಿತು ಪರಿಶೀಲನೆ ನಡೆಸಿ, ರೈತರಿಗೆ ಅಗತ್ಯ ಕೃಷಿ ಪರಿಕರಗಳು ಸಕಾಲದಲ್ಲಿ ದೊರೆಯುವಂತೆ ಕ್ರಮವಹಿಸಲು ನಿರ್ದೇಶಿಸಿದರು. ಬೆಳೆ ಸಮೀಕ್ಷೆ ಮೇಲ್ವಿಚಾರಣೆಯ ಬಾಕಿ ಇರುವ ಪ್ರಕರಣಗಳನ್ನು ಒಂದು ವಾರದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಸೂಚಿಸಲಾಯಿತು.

ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಉಪನಿರ್ದೇಶಕರು, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ತುಮಕೂರು ಹಾಲು ಒಕ್ಕೂಟದ ಅಧಿಕಾರಿಗಳೊಂದಿಗೆ ಮೇವಿನ ಬೀಜದ ಮಿನಿಕಿಟ್ಸ್ ಗಳ ಪೂರೈಕೆ ಕುರಿತು ಚರ್ಚಿಸಿ, ಎರಡು ದಿನಗಳೊಳಗೆ ಮೇವಿನ ಬೀಜದ ಮಿನಿಕಿಟ್ಸ್ ಗಳ ಸರಬರಾಜು ಮಾಡುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಹೀದಾ ಝಮ್ ಝಮ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಅಭಿವೃದ್ಧಿ),ಸಂಜೀವಪ್ಪ ಕೆ.ಪಿ. ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *