ತುಮಕೂರು : ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಶೂನ್ಯ ಶೇಕಡಾ ಫಲಿತಾಂಶ ದಾಖಲಾಗಿರುವ ಹಿನ್ನೆಲೆಯಲ್ಲಿ ಮೌಲಾನಾ ಆಜಾದ್ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾತುಗಳ ಮೂಲಕ ಮುಂದಿನ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಉತ್ತೇಜನ ನೀಡಿದರು.
ಶಾಲೆಯಲ್ಲಿ 42 ವಿದ್ಯಾರ್ಥಿಗಳು ಹಾಜರಾತಿ ವಹಿಯಲ್ಲಿ ನೋಂದಾಯಿತರಾಗಿದ್ದರೂ, ಪ್ರತಿದಿನ ಸರಾಸರಿ 28 ವಿದ್ಯಾರ್ಥಿಗಳು ಮಾತ್ರ ತರಗತಿಗಳಿಗೆ ಹಾಜರಾಗುತ್ತಿರುವುದು ಗಮನಿಸಿದ ಅವರು, 14 ವಿದ್ಯಾರ್ಥಿಗಳು ಕಳೆದ 2–3 ವರ್ಷಗಳಿಂದ ಶಾಲೆಗೆ ಹಾಜರಾಗುತ್ತಿಲ್ಲ ಎಂಬ ಮಾಹಿತಿ ತಿಳಿದ ಹಿನ್ನೆಲೆಯಲ್ಲಿ, ಹಾಜರಾಗದ ವಿದ್ಯಾರ್ಥಿಗಳ ಹೆಸರುಗಳನ್ನು ಇನ್ನೂ ಹಾಜರಾತಿ ವಹಿಯಲ್ಲಿ ಉಳಿಸಿರುವುದಕ್ಕೆ ಶಾಲೆಯ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡು, ದಾಖಲೆಗಳನ್ನು ತಕ್ಷಣ ತಿದ್ದುಪಡಿ ಮಾಡುವಂತೆ ಸೂಚಿಸಿದರು.
ಮಾರ್ಚ್ನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಶಿಕ್ಷಕರು ಮತ್ತು ಆಡಳಿತವು ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
ಶಾಲೆಯ ಶೈಕ್ಷಣಿಕ ಮಟ್ಟವನ್ನು ಸುಧಾರಿಸಲು ಸಮಗ್ರ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಶಬ್ಬೀರ್ ಅಹ್ಮದ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ, ಮೌಲಾನಾ ಆಜಾದ್ ಶಾಲೆ ಮುಖ್ಯೋಪಾಧ್ಯಾಯ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.