ತುಮಕೂರು : ತುಮಕೂರು ಜಿಲ್ಲೆ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು-ದ್ವಿತೀಯ ದರ್ಜೆ ಸಹಾಯಕರ ವೃಂದದ ನೌಕರರಿಗೆ ಪ್ರಥಮ ದರ್ಜೆ ಸಹಾಯಕರು-ಪ್ರಥಮ ದರ್ಜೆ ರಾಜಸ್ವ ನಿರೀಕ್ಷಕರ ವೃಂದದ ಹುದ್ದೆಗೆ ಮುಂಬಡ್ತಿ-ಪದೋನ್ನತಿ ನೀಡಲು 2026ರ ಜನವರಿ 1ನಂತೆ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ದ್ವಿತಿಯ ದರ್ಜೆ ಸಹಾಯಕರ ವೃಂದದ ನೌಕರರ ಕರಡು ಸಂಯುಕ್ತ ಜೇಷ್ಠತಾ ಪಟ್ಟಿಯನ್ನು ಮೇ 9ರಂದು ಹೊರಡಿಸಲಾಗಿದ್ದು, ಸದರಿ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಕರಡು ಜೇಷ್ಠತಾ ಪಟ್ಟಿ ಪ್ರಕಟವಾದ ದಿನಾಂಕದಿಂದ 15 ದಿನಗಳೊಳಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಮುಖ್ಯಸ್ಥರ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಸರ್ಕಾರದ ಅಧಿಸೂಚನೆಯನ್ವಯ ಕರ್ನಾಟಕ ರಾಜ್ಯ ಕಂದಾಯ ಸೇವೆಗಳು(ವೃಂದ ಮತ್ತು ನೇಮಕಾತಿ) ನಿಯಮಗಳು 2026ನ್ನು ರಚಿಸಿ ರಾಜ್ಯ ಪತ್ರದಲ್ಲಿ ಪ್ರಕಟವಾಗಿರುತ್ತದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು, ದ್ವಿತಿಯ ದರ್ಜೆ ಸಹಾಯಕರು, ಪ್ರ.ದ.ಸ-ರಾಜಸ್ವ ನಿರೀಕ್ಷಕರು ಸೇರಿದಂತೆ ವಿವಿಧ ವೃಂದದ ಅರ್ಹ ನೌಕರರಿಗೆ ಮುಂಬಡ್ತಿ ನೀಡುವ ಕುರಿತು ಕೂಡಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಭೆ ನಡೆಸಿ ಈ ಮೇಲಿನಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮತ್ತು ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.