ತುಮಕೂರು : ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಹಾಗೂ ಯಾವ ಟೀಕೆಗೂ ಸರ್ಕಾರ ಬಗ್ಗುವುದಿಲ್ಲ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಹೇಳಿದ್ದಾರೆ.
ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಡತನ ನಿರ್ಮೂಲನೆ ಮಾಡಬೇಕು. ಕರ್ನಾಟಕದ ಜನತೆ ವಿದ್ಯಾವಂತರಾಗಬೇಕು. ಹಳ್ಳಿಯ ಹುಡುಗರು ವಿದ್ಯಾವಂತರಾಗಿ, ಉದ್ಯೋಗಸ್ಥರಾಗಿ ಸಮಾಜವನ್ನು ಕಟ್ಟಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಜನಕಲ್ಯಾಣದ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಹಾಗೂ ಈ ಸಂಬಂಧ ಯಾವುದೇ ಟೀಕೆಗೂ ಸರ್ಕಾರ ಬಗ್ಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೇನು ಹೊಸ ವಿಚಾರವಲ್ಲ. ಜನರಿಗೆ ಆರ್ಥಿಕ ಶಕ್ತಿ ನೀಡಬೇಕು. ದುಡಿಯುವ ಕೈಗೆ ಉದ್ಯೋಗ ಸಿಗಬೇಕು. ಜನರು ಹಸಿವಿನಿಂದ ಮುಕ್ತರಾಗಬೇಕೆಂಬ ಸದುದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಯೋಜನೆಗಳಿಂದ ಜನರ ಬದುಕಿನಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಅವರು ಹೇಳಿದರು.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಅವಧಿಯ ಸರ್ಕಾರದಲ್ಲಿ ಹಸಿವು ಮುಕ್ತ ಕರ್ನಾಟಕ ಘೋಷಣೆಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಪರಿಕಲ್ಪನೆಯನ್ನು ರಾಜ್ಯದ ಜನತೆ ಮೆಚ್ಚಿದ್ದರು. ಅದಲ್ಲದೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದು ದೇಶಾದ್ಯಂತ ಹಾಗೂ ವಿಶ್ವದ್ಯಂತ ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದೆ. ಜನರ ಕಷ್ಟ-ಸುಖಗಳನ್ನು ನಮ್ಮ ಸರ್ಕಾರ ಅರ್ಥ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜನರ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯೊಂದರಲ್ಲಿ 3.43 ಲಕ್ಷ ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 20.03 ಕೋಟಿ ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಹೀಗೆ ಲಕ್ಷಾಂತರ ಕೋಟಿ ಹಣವನ್ನು ತುಮಕೂರು ಜಿಲ್ಲೆಯೊಂದರಲ್ಲೇ ಸರ್ಕಾರದಿಂದ ವೆಚ್ಚ ಮಾಡಲಾಗಿದೆ. ಫಲಾನುಭವಿಗೆ ನೇರವಾಗಿ ತಲುಪುವ ಇಂತಹ ಯೋಜನೆಗಳಿಂದ ರಾಜ್ಯದ ಜನರಲ್ಲಿ ಆರ್ಥಿಕ ಸ್ವಾವಲಂಬನೆಯಾಗಿದೆ. ಇದರಿಂದ ಅಭಿವೃದ್ಧಿ ಸಾಧ್ಯವಿದೆ ಎಂಬುದನ್ನು ಹೆಸರಾಂತ ಆರ್ಥಿಕ ತಜ್ಞರು ವಿಶ್ವದೆಲ್ಲೆಡೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯನ್ನು ಬೆಂಗಳೂರಿಗೆ ಸಮಾನವಾಗಿ ಅಭಿವೃದ್ಧಿಪಡಿಸಲಾಗುವುದು ಎಂದೂ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮಾತನಾಡಿ, ಈ ಹಿಂದೆ ದೇಶದಲ್ಲಿ ಗುಜರಾತ್ ಮಾದರಿ ಎಂದೆಲ್ಲಾ ಹೇಳಲಾಗುತ್ತಿತ್ತು. ಆದರೆ ಈಗ ಕರ್ನಾಟಕ ಮಾದರಿ ಎಂಬ ಹೆಸರು ದೇಶಾದ್ಯಂತ ಕೇಳಿ ಬರುತ್ತಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ರಾಜ್ಯವಾಗಿ ಪರಿಗಣಿಸಲ್ಪಟ್ಟಿದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ 1.19ಲಕ್ಷ ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳಿಗೆ ಸಿಗುವಂತೆ ಮಾಡಿದೆ. ಕರ್ನಾಟಕ ಸರ್ಕಾರ ಜನರ ಬದುಕನ್ನು ಅಥೈಸಿಕೊಂಡು ಆಡಳಿತ ನಡೆಸುತ್ತಿದೆ ಎಂದು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಜಾಗೃತ ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಡಾ: ಹೆಚ್.ವಿ. ವಾಸು ಮಾತನಾಡಿ, ಗ್ಯಾರಂಟಿ ಯೋಜನೆ ಅಭಿವೃದ್ಧಿಗೆ ವಿರುದ್ಧವಲ್ಲ. ಜನರ ಜೀವನಮಟ್ಟ ಸುಧಾರಿಸುವುದು ಅಭಿವೃದ್ಧಿಯ ಸಂಕೇತ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಸುಧಾರಿಸಿವೆ ಎಂದರು.
ಗ್ಯಾರಂಟಿ ಯೋಜನೆಗಳು ಬಸವತತ್ವದ ಆಧಾರದಲ್ಲಿ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದನ್ನು ವಿರೋಧಿಸುವವರು ಬಸವ ವಿರೋಧಿಗಳು, ಕನ್ನಡ ದ್ರೋಹಿಗಳು ಎಂದು ಪರಿಗಣಿಸಬೇಕಾಗಿರುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಜನರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ಸ್ವಾಗತಿಸಿದರು. ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ ವಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್, ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಗೌಡ, ಉಪಾಧ್ಯಕ್ಷರಾದ ನರಸೀಯಪ್ಪ, ಶಿವಪ್ರಸಾದ್, ಹನುಮಂತಪ್ಪ, ಪಂಚಾಕ್ಷರಪ್ಪ, ಬಸವರಾಜು, ಅಂಬರೀಷ್ ಹಾಗೂ ವಿವಿಧ ತಾಲ್ಲೂಕುಗಳ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಸಮಾವೇಶದಲ್ಲಿ ವಿವಿಧ ತಾಲ್ಲೂಕುಗಳಿಂದ 4,000ಕ್ಕೂ ಹೆಚ್ಚು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಭಾಗವಹಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯತಿಯಿಂದ ವಿವಿಧ ಇಲಾಖೆಗಳ ಹಾಗೂ ಗ್ಯಾರಂಟಿ ಯೋಜನೆಗಳ ಮಳಿಗೆಗಳನ್ನು ತೆರೆಯಲಾಗಿತ್ತು. ಅಲ್ಲದೆ, ವಿವಿಧ ಗ್ಯಾರಂಟಿ ಯೋಜನೆಗಳ ಕುರಿತು ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಿದ್ದು ವಿಶೇಷವಾಗಿತ್ತು.