ತುಮಕೂರು ‘ಕ್ಲೀನ್ ಸಿಟಿ’ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ-ಜ.ಸುಭಾಷ್ ಬಿ. ಆದಿ ಎಚ್ಚರಿಕೆ

ತುಮಕೂರು: ತುಮಕೂರು ಪಾಲಿಕೆ ಆಯುಕ್ತರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು ಎಲ್ಲರೂ ಮೊದಲಿಗೆ ಪರಿಸರ ನಿಯಮಗಳನ್ನು ಓದಿ ತಿಳಿದುಕೊಳ್ಳಬೇಕು. ತ್ಯಾಜ್ಯ ವಿಲೇವಾರಿಗೆ ಕೋಟ್ಯಾಂತರ ರೂ.ಗಳನ್ನು ವ್ಯಯಿಸಲಾಗುತ್ತಿದೆ. ಆದುದರಿಂದ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಅಧ್ಯಕ್ಷರೂ ಆದಂತಹ ಜಸ್ಟೀಸ್ ಸುಭಾಷ್ ಬಿ. ಆದಿ ಅವರು ಎಚ್ಚರಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಶೇ. 100ರಷ್ಟು ಕ್ರೋಢೀಕರಿಸಿ, ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ಸಂಸ್ಕರಿಸಬೇಕು. ಒಣ ಹಾಗೂ ಹಸಿ ಕಸ ವಿಂಗಡಣೆ ಕುರಿತು ಜನಸಾಮಾನ್ಯರಿಗೆ ಐಇಸಿ ಚಟುವಟಿಕೆಗಳ ಮೂಲಕ ವ್ಯಾಪಕ ಅರಿವು ಮೂಡಿಸಬೇಕು. ಗ್ರಾಮ ಪಂಚಾಯತಿ ಸದಸ್ಯರುಗಳಿಗೆ ತರಬೇತಿ ನೀಡಿ ವಾರ್ಡ್‍ವಾರು ಜವಾಬ್ದಾರಿಯನ್ನು ನೀಡಬೇಕು. ಸ್ವ-ಸಹಾಯ ಸಂಘಗಳು ಮತ್ತು ಸರ್ಕಾರೇತರ ಸ್ಥಳೀಯ ಸಂಘಗಳನ್ನು ಈ ನಿಟ್ಟಿನಲ್ಲಿ ಪ್ರೇರೇಪಿಸಿ ತ್ಯಾಜ್ಯ ನಿರ್ವಹಣೆ ಕುರಿತು ಅರಿವು ಮೂಡಿಸಬೇಕು. ಸಾಧ್ಯವಾದಲ್ಲಿ ಸ್ವಚ್ಛತೆ ಕಾಪಿಟ್ಟುಕೊಳ್ಳುವಂತಹ ಸ್ಥಳೀಯ ಸಂಸ್ಥೆಗಳನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಬೆಂಗಳೂರಿಗೆ ಸಮೀಪವಿರುವ ಸ್ಮಾರ್ಟ್ ಸಿಟಿ ತುಮಕೂರು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಾಗಿದ್ದು, ಸ್ಮಾರ್ಟ್ ಸಿಟಿ ಗರಿಯ ಜೊತೆಗೆ ‘ಸ್ವಚ್ಛ ತುಮಕೂರು’ ಎಂಬ ಹೆಗ್ಗಳಿಕೆ ಪಡೆಯುವಂತಾಗಬೇಕು. ಜಿಲ್ಲೆಯ ನಗರ ಪ್ರದೇಶ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು. ಕಣ್ಣೋಟಕ್ಕೆ ಸ್ವಚ್ಛತೆ ಎಲ್ಲೆಲ್ಲೂ ಕಾಣುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರು ಪಾಲಿಕೆ ಆಯುಕ್ತರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು ಎಲ್ಲರೂ ಮೊದಲಿಗೆ ಪರಿಸರ ನಿಯಮಗಳನ್ನು ಓದಿ ತಿಳಿದುಕೊಳ್ಳಬೇಕು. ತ್ಯಾಜ್ಯ ವಿಲೇವಾರಿಗೆ ಕೋಟ್ಯಾಂತರ ರೂ.ಗಳನ್ನು ವ್ಯಯಿಸಲಾಗುತ್ತಿದೆ. ಆದುದರಿಂದ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. 

ತುಮಕೂರು ಜಿಲ್ಲೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಬೇಕಾದರೆ ಮೊದಲಿಗೆ ಸ್ವಚ್ಛ ಭಾರತ ಅಭಿಯಾನವನ್ನು ಅಳವಡಿಸಿಕೊಂಡು ಕ್ಲೀನ್ ಸಿಟಿ ಎಂಬ ಹೆಸರು ಪಡೆಯಬೇಕು.  ಈ ನಿಟ್ಟಿನಲ್ಲಿ ಮೊದಲಿಗೆ ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು.  ಸಾರ್ವಜನಿಕರು ಎಲ್ಲೆಂದರಲ್ಲಿ  ಅಳವಡಿಸುವ ಬ್ಯಾನರ್, ಪೋಸ್ಟರ್, ಹೋರ್ಡಿಂಗ್ಸ್‍ಗಳಿಗೆ ಕಡಿವಾಣ ಹಾಕಬೇಕು. ಪಾಲಿಕೆ ವತಿಯಿಂದ ಆಯ್ದ ಜಾಗಗಳಲ್ಲಿ ಎಲೆಕ್ಟ್ರಾನಿಕ್ ಡಿಸ್‍ಪ್ಲೇ ಜಾಹೀರಾತು ಫಲಕಗಳನ್ನು ಅಳವಡಿಸಿ, ಇದರ ಮೂಲಕ ವಾಣಿಜ್ಯ ಬಳಕೆದಾರರು ಮತ್ತು ಸಾರ್ವಜನಿಕರು ತಮ್ಮ ಜಾಹೀರಾತುಗಳನ್ನು ಪ್ರದರ್ಶಿಸುವ ವ್ಯವಸ್ಥೆಯಾಗಬೇಕು.  ಇದರಿಂದ ಸಾರ್ವಜನಿಕ ಸ್ಥಳಗಳ ಅಂದಗೆಡುವುದಿಲ್ಲ.  ಅಂತೆಯೇ ಅಕ್ರಮವಾಗಿ ನಿರ್ಮಿಸುವ ಕಟೌಟ್ ಹಾಗೂ ಪ್ರತಿಮೆಗಳಿಗೂ ಸಹ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್ ಸರಬರಾಜು ಮಾಡುವವರು ಮತ್ತು ಪ್ಲಾಸ್ಟಿಕ್ ಮಾರುವವರಿಗೂ ಸಹ ದುಪ್ಪಟ್ಟು ದಂಡ ವಿಧಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು. 

ಕೇವಲ ಎಸ್‍ಟಿಪಿ ಮತ್ತು ಯುಜಿಡಿಗಳನ್ನು ನಿರ್ಮಾಣ ಮಾಡಿದರಷ್ಟೇ ಸಾಲದು. ಅವುಗಳಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು.  ಇದು ಅತ್ಯಂತ ಪ್ರಮುಖ ಅಂಶವಾಗಿದೆ. ಕೊಳಚೆ ನೀರು ನಿರ್ವಹಣೆಯೂ ಸಹ ಬಹಳ ಪ್ರಮುಖ ವಿಷಯವಾಗಿದ್ದು, ಜಿಲ್ಲೆಯಲ್ಲಿ ಉತ್ಪತ್ತಿಯಾಗುವಂತಹ ಕೊಳಚೆ ನೀರನ್ನು ಸಂಸ್ಕರಿಸಿ ಸಂಸ್ಕರಿಸಿದ ನೀರನ್ನು ಕೈಗಾರಿಕಾ, ಕೃಷಿ ಮತ್ತು ನಿರ್ಮಾಣ ಕೆಲಸಗಳಿಗೆ ಮರು ಬಳಕೆ ಮಾಡುವ ಕೆಲಸವೂ ಸಹ ಆಗಬೇಕು ಎಂದರು. 

ಜಿಲ್ಲೆಯಲ್ಲಿ ನಿರ್ಮಾಣವಾಗಿರುವಂತಹ ಸಾರ್ವಜನಿಕ ಶೌಚಾಲಯಗಳು ಸ್ವಚ್ಛವಾಗಿರಬೇಕು ಮತ್ತು ಸಾರ್ವಜನಿಕರು ಬಳಸಲು ಇಚ್ಛಿಸುವ ರೀತಿ ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಆಕರ್ಷಣೀಯವಾಗಿರಬೇಕು. ಅಂತೆಯೇ ಸಾರ್ವಜನಿಕ ಬಸ್‍ನಿಲ್ದಾಣಗಳು ಸ್ವಚ್ಛವಾಗಿರಬೇಕು ಮತ್ತು ಬಸ್‍ನಿಲ್ದಾಣಗಳಲ್ಲಿ ಒಣ, ಹಸಿ ಕಸ ವಿಂಗಡಣೆಗೆ ಕಸದ ಬುಟ್ಟಿಗಳನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಬೇಕು ಎಂದರು.

ಪಾದಚಾರಿ ರಸ್ತೆಗಳು ಅತಿಕ್ರಮಣವಾಗದಂತೆ ಪಾಲಿಕೆ ಅಧಿಕಾರಿಗಳು ಕ್ರಮವಹಿಸಬೇಕು. ಪಾದಚಾರಿ ರಸ್ತೆಗಳು ಪಾದಚಾರಿಗಳಿಗೆ ಮುಕ್ತವಾಗಿರಬೇಕು. ರಸ್ತೆಬದಿಯ ಪ್ರತಿಯೊಬ್ಬ ವ್ಯಾಪಾರಿಯೂ ಸಹ ಎರಡು ಒಣ ಹಾಗೂ ಹಸಿ ಕಸ ವಿಂಗಡಣೆಗೆ ಕಸದ ಬುಟ್ಟಿಗಳನ್ನು ಇಡುವಂತೆ ಅಧಿಕಾರಿಗಳು ಸೂಚಿಸಬೇಕು ಎಂದು ತಿಳಿಸಿದರು.

ಕಟ್ಟಡ ತ್ಯಾಜ್ಯವನ್ನು ರಸ್ತೆಯ ಮೇಲೆ ಎಲ್ಲೆಂದರಲ್ಲಿ ಚೆಲ್ಲುವ ಹಾಗಿಲ್ಲ. ನಿಗಧಿತ ಸ್ಥಳಕ್ಕೆ ತೆರಳಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕು. ರಸ್ತೆಯ ಮೇಲೆ ಹಾಗೂ ಎಲ್ಲೆಂದರಲ್ಲಿ ಸಾರ್ವಜನಿಕರು ಕಸವನ್ನು ಎಸೆಯುವ ಹಾಗಿಲ್ಲ. ಇದೂ ಸಹ ದಂಡನೀಯ ಅಪರಾಧವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಮಾತನಾಡಿ, ಜಿಲ್ಲೆಯ ಅಧಿಕಾರಿಗಳಿಗೆ ಪರಿಸರ ಹಾಗೂ ತ್ಯಾಜ್ಯ ವಿಲೇವಾರಿ ಕಾಯ್ದೆ ಹಾಗೂ ನಿಯಮಗಳ ಕುರಿತು ಕಾರ್ಯಾಗಾರ ಅಗತ್ಯವಿದ್ದು, ಶೀಘ್ರದಲ್ಲಿಯೇ ಕಾರ್ಯಾಗಾರ ಏರ್ಪಡಿಸುವುದಾಗಿ ಈ ಸಂದರ್ಭ ತಿಳಿಸಿದರು.

ಮುಂದುವರೆದು, ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಇತರೆ ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ಇನ್ನು 15 ದಿನಗಳೊಳಗಾಗಿ ಕಡ್ಡಾಯವಾಗಿ ತ್ಯಾಜ್ಯ ಸಂಸ್ಕರಣೆಗೆ ಕಂಪೋಸ್ಟ್‍ಪಿಟ್ ತೆರೆಯುವಂತೆ ಕಡ್ಡಾಯ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ 304 ಗ್ರಾಮಪಂಚಾಯತಿಗಳಲ್ಲಿ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ, ಸಂಸ್ಕರಣೆ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕ್ಲಸ್ಟರ್ ಮಟ್ಟದಲ್ಲಿ ತ್ಯಾಜ್ಯ ಕ್ರೋಢೀಕರಣ ಹಾಗೂ ಸಂಸ್ಕರಣೆ ಮಾಡಲಾಗುವುದು ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ.ನಾಯಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *