ಬಜೆಟ್‍ನಲ್ಲಿ ಮಧುಗಿರಿ ಜಿಲ್ಲೆ ಘೋಷಣೆಗೆ ಒತ್ತಾಯ

ತುಮಕೂರು: 2023-24ನೇ ಸಾಲಿನ ಬಜೆಟ್‍ನಲ್ಲಿ ಜಿಲ್ಲೆಯ ಮಧುಗಿರಿ ತಾಲ್ಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಒತ್ತಾಯಿಸಿದ್ದಾರೆ.

ತುಮಕೂರು ಗ್ರಾಮಾಂತರದ ನಾಗವಲ್ಲಿ ಸಮೀಪದ ಬಿದರೆಕಟ್ಟೆಯಲ್ಲಿ ಕುಂಟುತ್ತಾ ಸಾಗಿರುವ ಸುಸಜ್ಜಿತ ನೂತನ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ಅನುಕೂಲ ಕಲ್ಪಿಸಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಮಂದಗತಿಯಲ್ಲಿ ಸಾಗುತ್ತಿರುವ ಎತ್ತಿನ ಹೊಳೆ ಯೋಜನೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು, ಜಿಲ್ಲೆಯಲ್ಲಿ ತೆಂಗಿನ ಮತ್ತು ಟೆಕ್ಸ್‍ಟೈಲ್ ಪಾರ್ಕ್ ನಿರ್ಮಾಣ ಮಾಡಬೇಕು, ಹುಣಸೆ, ಮಾವು, ಕಡಲೆಕಾಯಿ, ರಾಗಿ ಬೆಳೆಗಳ ರೈತರ ಹಿತರಕ್ಷಣೆ ಕಾಪಾಡಬೇಕು, ಬೆಳೆಗಳ ಸಂರಕ್ಷಣೆಗೆ ಪ್ರತಿ ತಾಲ್ಲೂಕಿನಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಬೇಕು, ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಬೇಕು, ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್‍ವೇ ನಿರ್ಮಿಸಬೇಕು, ತುಮಕೂರಿನಲ್ಲಿ ಮುಂದಿನ ಹೂಡಿಕೆದಾರರ ಸಮಾವೇಶ ನಡೆಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮುರಳೀಧರ ಹಾಲಪ್ಪ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *