
ತುಮಕೂರು: ಜಿಲ್ಲೆಯ 11 ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚನೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.05ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, 12 ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಅಂದು ಸಂಜೆ 4.30ಕ್ಕೆ ಆಗಮಿಸುವ ಪ್ರಧಾನಿ ಅವರು 6 ಗಂಟೆಯವರೆಗೆ ತುಮಕೂರು ನಗರದಲ್ಲಿ ಇರಲಿದ್ದು, ಬಿಜೆಪಿ ಅಭ್ಯರ್ಥಿಗಳ ಮತಯಾಚನೆ ಮಾಡಲಿದ್ದು, ಮಧ್ಯಾಹ್ನ 2 ಗಂಟೆಯಿಂದಲೇ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪ ಡಿಸಲಾಗಿದೆ ಎಂದರು.
ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಮೋದಿ ಅವರು ಆಗಮಿಸುವ 2 ಗಂಟೆ ಮೊದಲೇ ಕಾರ್ಯಕ್ರಮದ ಸ್ಥಳದಲ್ಲಿ ಹಾಜರಾಗಬೇಕು, ಸುರಕ್ಷತಾ ದೃಷ್ಠಿಯಿಂದ ಸಾರ್ವಜನಿಕರು ನೀರಿನ ಬಾಟಲಿ ಮತ್ತು ಬ್ಯಾಗ್ ತರದಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ 11 ಅಭ್ಯರ್ಥಿಗಳು ಹಾಗೂ ಸಂಸದರು ಭಾಗವಹಿಸಲಿದ್ದಾರೆ ಎಂದ ಅವರು ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಟಿ.ಆರ್.ಸದಾಶಿವಯ್ಯ, ಜಗದೀಶ್, ರುದ್ರೇಶ್, ಗಣೇಶ್ ಸೇರಿದಂತೆ ಇತರರಿದ್ದರು.