ತುಮಕೂರು ಜಿಲ್ಲೆಗೆ ಕುಡಿಯುವ ನೀರಿನ ಉದ್ದೇಶಕ್ಕೆ ಮೀಸಲಾಗಿರುವ ಹೇಮಾವತಿ ನೀರಿನ ನಮ್ಮ ಪಾಲನ್ನು ಮೀಸಲಿರಿಸಬೇಕು. ರೈತರ ಹಾಗೂ ಸಾರ್ವಜನಿಕರ ಹಿತ ಕಾಪಾಡುವುದು ಹಾಗೂ ಜಿಲ್ಲೆಯ ಕುಡಿಯುವ ನೀರಿಗೆ ಮಾರಕವಾಗಿರುವ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಸ್ಥಗಿತಗೊಳಿಸಬೇಕು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಸ್ಥಗಿತಗೊಳಿಸಬೇಕು ಎಂದು ಬಹು ದಿನಗಳಿಂದ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸರ್ಕಾರ ಜಿಲ್ಲೆಯ ಜನರಪರವಾಗಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಈ ಯೋಜನೆಯಿಂದ ತುಮಕೂರು ಜಿಲ್ಲೆಗೆ ಮೀಸಲಿರುವ ಹೇಮಾವತಿ ನೀರಿನ ಪಾಲು ನ್ಯಾಯ ಸಮ್ಮತವಾಗಿ ನಮಗೆ ದೊರೆಯುವುದಿಲ್ಲ ಎಂಬ ಅಂತಕ ನಮ್ಮದಾಗಿದೆ. ಈ ಯೋಜನೆಯು ಜಾರಿಗೊಂಡರೆ ಜಿಲ್ಲೆಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ಮರಣ ಶಾಸನವಾಗಲಿದೆ ಎಂದು ಹೇಳಿದರು.
ಹೇಮಾವತಿ ನಾಲಾ ವಲಯಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲಾ ಅಧುನೀಕರಣ ಕಾಮಗಾರಿಯು ಚಾಲ್ತಿಯಲ್ಲಿದ್ದು ಮುಗಿಯುವ ಹಂತದಲ್ಲಿದೆ. ಆದರೆ ಏಕಾಏಕಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಅನುಷ್ಟಾನಕ್ಕೆ ತಂದಿರುವುದರಿಂದ ಸಾವಿರಾರು ಕೋಟಿ ಹಣ ಪೋಲಾಗುವುದರ ಜೊತೆಗೆ ಜಿಲ್ಲೆಯ ಜನರಿಗೆ ಅನ್ಯಾವಾಗಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ, ತುಮಕೂರು ನಗರ ದಿನದಿಂದ ದಿನಕ್ಕೆ ವೇಗವಾಗಿ ಬೆಳವಣಿಗೆಯಾಗಿ, ಜನಸಂಖ್ಯೆ ಹೆಚ್ಚಾಗುತ್ತಿದೆ. ಕುಡಿಯುವ ನೀರಿನ ಬೇಡಿಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಜಿಲ್ಲೆಯ ಪಾಲಿನ ಹೇಮಾವತಿ ನೀರನ್ನು ನಮಗೆ ಮೀಸಲಿಡಬೇಕು. ಜಿಲ್ಲೆಗೆ ಕುಡಿಯುವ ನೀರಿನ ಉದ್ದೇಶಕ್ಕೆ ಮೀಸಲಿರುವ ಹೇಮಾವತಿ ನೀರಿನ ನಮ್ಮ ಪಾಲನ್ನು ಮೀಸಲಿರಿಸಿ, ರೈತರ ಹಾಗೂ ಸಾರ್ವಜನಿಕರ ಹಿತ ಕಾಪಾಡುವುದು ಹಾಗೂ ಜಿಲ್ಲೆಗೆ ಮಾರಕವಿರುವ ಎಕ್ಸ್ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.
ಈ ಹಿಂದೆ ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಆಗಿನ ಮುಖ್ಯಮಂತ್ರಿಯವರಾದ ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ನವರು ಕೆನಾಲ್ ಅಭಿವೃದ್ಧಿಗೆ 500 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಪ್ರಸ್ತುತ ಶೇ.80 ರಷ್ಟು ಕೆಲಸ ಪೂರ್ಣಗೊಂಡಿದ್ದು, ಹೇಮಾವತಿ ನೀರು ಬುಗುಡನಹಳ್ಳಿ ಕೆರೆಗೆ ಸರಾಗವಾಗಿ ಬರುತ್ತಿದೆ ಎಂದು ಶಾಸಕರು ತಿಳಿಸಿದ್ದಾರೆ.
ತುಮಕೂರು ನಗರದ ಜನಸಂಖ್ಯೆ 5 ಲಕ್ಷ ದಾಟಿದ್ದು, ಕುಡಿಯುವ ನೀರಿಗಾಗಿ ಹೇಮಾವತಿಯನ್ನು ನಗರದ ಜನತೆ ಅವಲಂಭಿಸಿದ್ದಾರೆ. ಈ ಒಂದು ಎಕ್ಸ್ಪ್ರೆಸ್ ಕೆನಾಲ್ ಯೋಜನೆಯು ತುಮಕೂರು ನಗರದ ಜನತೆಗೆ ಮರಣ ಶಾಸನವಾಗಲಿದೆ. ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಆದ್ದರಿಂದ ಈ ಯೋಜನೆಯನ್ನು ರಾಜ್ಯ ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ಶಾಸಕರು ಆಗ್ರಹಿಸಿದ್ದಾರೆ.
ಈ ಹಿಂದೆ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಯೋಜನೆಯನ್ನು ಕೈಬಿಡಬೇಕೆಂದು ಹೋರಾಟ ನಡೆಸಿದಾಗ ಪಾಲ್ದೊಂಡಿದ್ದ ರೈತರ ಮೇಲೆ, ರೈತ ಪರ ಸಂಘಟನೆಗಳ ಮುಖಂಡರ ಮೇಲೆ, ಸಾರ್ವಜನಿಕರ ಮೇಲೆ ಹಾಗೂ ಜನಪ್ರತಿನಿಧಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈಗಲೂ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಯೋಜನೆಯನ್ನ ಕೈಬಿಡದಿದ್ದರೆ, ರೈತ ಸಂಘಗಳು, ಕನ್ನಡಪರ ಸಂಘಟನೆಗಳು ಹಾಗೂ ಇನ್ನಿತರ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿರನ್ನೊಳಗೊಂಡಂತೆ ಹೋರಾಟವನ್ನು ಮುಂದುವರೆಸಲಾಗುವುದು ಎಂದು ತುಮಕೂರು ನಗರ ಶಾಸಕರು ತಿಳಿಸಿದ್ದಾರೆ.