ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ಬುಧವಾರ ನಗರದ ವಿಶ್ವವಿದ್ಯಾಲಯ ಬಳಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಾಸಕ ಬಿ.ಸುರೇಶ್ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ನಗರ ಅಧ್ಯಕ್ಷ ಟಿ.ಕೆ.ಧನುಷ್ ಮೊದಲಾದ ಮುಖಂಡರು ರಕ್ತದಾನ ಮಾಡಿ ಮೋದಿಯವರ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು, ಸಮಾಜ ಸೇವಾಕಾರ್ಯಗಳನ್ನು ಮಾಡುವ ಮೂಲಕ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯಾದ್ಯಂತ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ ಆಚರಿಸಲಾಗುತ್ತಿದೆ. ಇಲ್ಲಿ ರಕ್ತದಾನ ಮಾಡಿ ನೆರವಾದ ಎಲ್ಲರೂ ಸಾರ್ಥಕ ಕೆಲಸ ಮಾಡಿರುವುದು ಶ್ಲಾಘನೀಯ. ಮೋದಿಯವರ ಹುಟ್ಟುಹಬ್ಬದ ನೆಪದಲ್ಲಿ ಇಡೀ ದೇಶದಲ್ಲಿ ಸಮಾಜಕ್ಕೆ ಒಳ್ಳೆಯದಾಗುವ ಕಾರ್ಯಕ್ರಮಗಳನ್ನು ಬಿಜೆಪಿ ಹಮ್ಮಿಕೊಂಡಿದೆ. ಪ್ರಧಾನ ಮಂತ್ರಿಯಂತಹ ನಾಯಕರ ಪ್ರತಿ ಹೆಜ್ಜೆಯನ್ನೂ ಜನ ಗಮನಿಸುತ್ತಾರೆ, ಅವರನ್ನು ಅನುಸರಿಸುತ್ತಾರೆ. ಅಂತಹ ನಾಯಕರ ಹುಟ್ಟುಹಬ್ಬ ಆಚರಣೆ ಸಮಾಜಕ್ಕೆ ಸಹಾಯ ಮಾಡುವಂತಾಗಿ ಮಾದರಿಯಾಗಬೇಕು. ಬಿಜೆಪಿ ಅಂತಹ ಮಾದರಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.
ವಿಶ್ವದಲ್ಲಿ ಅನೇಕ ರಾಷ್ಟ್ರಗಳಿಗೆ ಅಭದ್ರತೆ ಕಾಡುತ್ತಿದೆ. ಆದರೆ ಪ್ರಧಾನಿ ಮೋದಿಯವರ ದೂರದೃಷ್ಟಿ, ಆಡಳಿತ ವ್ಯವಸ್ಥೆಯಿಂದಾಗಿ ಭಾರತ ಸುಭದ್ರವಾಗಿದೆ ಹಾಗೂ ಬೆಳವಣಿಗೆಯಾಗುತ್ತಿದೆ. ದೇಶದ ಜಿಡಿಪಿ ಬೆಳವಣಿಗೆಯಾಗುತ್ತಿದ್ದು ಭಾರತವನ್ನು ವಿಶ್ವದಲ್ಲೇ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಮೋದಿಯವರ ಸಂಕಲ್ಪಶಕ್ತಿಗೆ ದೇಶದ 140 ಕೋಟಿ ಜನ ಬಲ ತುಂಬಬೇಕು. ಮೋದಿವರು ಬಲಿಷ್ಠ ಭಾರತ ನಿರ್ಮಾಣಕ್ಕೆ ಉತ್ತಮ ತಳಹದಿ ಹಾಕಿಕೊಟ್ಟಿದ್ದಾರೆ, ಅದು ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಜ್ಯೋತಿಗಣೇಶ್ ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಮೋದಿಯವರ ಜನ್ಮದಿನಾಚರಣೆ ಪ್ರಯುಕ್ತ ಇಂದಿನಿಂದ ಅಕ್ಟೋಬರ 2ರವರೆಗೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸೇವಾ ಪಾಕ್ಷಿಕ್ ಯೋಜನೆಯಾಗಿ ಸಮಾಜ ಸೇವಾ ಕಾರ್ಯಗಳನ್ನು ಆಯೋಜಿಸಲಾಗಿದೆ. ಇಂದು ಎಲ್ಲೆಡೆ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ಗಿಡನೆಡುವ ಕಾರ್ಯಕ್ರಮಗಳು ನಡೆದಿವೆ ಎಂದರು.
ಭಾರತದವನ್ನು ಅಭಿವೃದ್ಧಿ ಪಥದಲ್ಲಿ ನಡೆಸುತ್ತಿರುವ ಪ್ರಧಾನಿ ಮೋದಿಯವರು ದೇಶದ ಜನರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. 80 ಕೋಟಿ ಕುಟುಂಬಗಳಿಗೆ ಉಚಿತ ಪಡಿತರ ವಿತರಣೆ, ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರು ಸಾವಿರ ರೂ. ನೀಡುವ ಯೋಜನೆ ಕೊಟ್ಟು ನೆರವಾಗಿದ್ದಾರೆ. ಜನಸಾಮಾನ್ಯರಿಗೆ ತೆರಿಗೆ ಹೊರೆ ತಗ್ಗಿಸಲು ಜಿಎಸ್ಟಿ ದರ ಪರಿಷ್ಕರಣೆ ಮಾಡಿ ಜಾರಿ ಮಾಡುತ್ತಿದ್ದಾರೆ. ಇಂತಹ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದು ರವಿಶಂಕರ್ ಹೆಬ್ಬಾಕ ತಿಳಿಸಿದರು.
ಇದೇ 20ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ನಗರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿದೆ. 25ರಂದು ಪಂಡಿತ್ ದೀನ್ದಯಾಳ್ ಅವರ ಜನ್ಮದಿನದ ಪ್ರಯುಕ್ತ ಪ್ರತಿ ಬೂತ್ನಲ್ಲಿ ಕಾರ್ಯಕರ್ತರ ಸಭೆ, ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಜಯಂತಿಯಂದು ನಗರದ ಎಲ್ಲಾ ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತುರ್ತು ಪರಿಸ್ಥಿತಿಯಲ್ಲಿ ಸೆರೆವಾಸ ಅನುಭವಿಸಿದ್ದ ಕಿಬ್ಬನಹಳ್ಳಿ ಬಸವಣ್ಣ ಅವರನ್ನು ಜಿಲ್ಲಾ ಬಿಜೆಪಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಂಗರಾಜು, ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ, ನಗರ ಅಧ್ಯಕ್ಷ ಟಿ.ಕೆ.ಧನುಷ್, ನಿಕಟಪೂರ್ವ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಮ್ಮ, ತಿಪಟೂರು ಮುಖಂಡ ಲೋಕೇಶ್, ನಗರಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಮಾಜಿ ಸದಸ್ಯರಾದ ಸಿ.ಎನ್.ರಮೇಶ್, ಮಲ್ಲಿಕಾರ್ಜುನ್, ಪುಟ್ಟರಾಜು, ಮನೋಹರಗೌಡ, ಮಂಜುನಾಥ್, ಮುಖಂಡರಾದ ದಿಲೀಪ್ಕುಮಾರ್, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ಗಣೇಶ್ಪ್ರಸಾದ್, ಗಂಗೇಶ್, ಲತಾಬಾಬು, ಅಕ್ಷಯ್ ಚೌಧರಿ ಸೇರಿದಂತೆ ವಿವಿಧ ಮೋರ್ಚಾ, ಮಂಡಲಗಳ ಮುಖಂಡರು ಭಾಗವಹಿಸಿದ್ದರು.
ಶಿಬಿರದಲ್ಲಿ ದಾನಿಗಳು ನೀಡಿದ 83 ಯೂನಿಟ್ ರಕ್ತ ಸಂಗ್ರಹವಾಯಿತು.