ತುಮಕೂರು : ಜಿಲ್ಲೆಯ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮ ಹಾಗೂ ವಾರ್ಡ್ಗಳ ಸ್ಥಿತಿಗತಿ ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಪ್ರದೇಶಗಳ ಕುರಿತು ಅಗತ್ಯ ಮುನ್ನೆಚ್ಚರಿಕೆ ಹಾಗೂ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಮೂಲಗಳ ಪರೀಕ್ಷೆ, ಸ್ವಚ್ಛತೆ ಮತ್ತು ಕ್ಲೋರಿನೇಷನ್ ಪ್ರಗತಿ, 2026ನೇ ಸಾಲಿನ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದ ಉಂಟಾದ ಹಾನಿ ಮತ್ತು ಪರಿಹಾರ ವಿತರಣೆಯ ವಿವರಗಳನ್ನು ಪರಿಶೀಲಿಸಿದ ಅವರು, ಮುಂಗಾರು ಹಂಗಾಮಿನಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕೈಗೊಂಡಿರುವ ಪೂರ್ವಸಿದ್ಧತಾ ಕ್ರಮಗಳ ಕುರಿತು ಚರ್ಚಿಸಿದರು.
ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ವತಿಯಿಂದ ಬಿತ್ತನೆ ಪ್ರಗತಿ, ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲಾಯಿತು. ಹೋಬಳಿವಾರು ಮೇವು ಲಭ್ಯತೆ, ಜಿಲ್ಲಾ ವಿಪತ್ತು ಉಪಶಮನ ನಿಧಿ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ, ಜಿಲ್ಲೆಯ ಹವಾಮಾನ ಮತ್ತು ಮಳೆ ಮಾಪನ ಕೇಂದ್ರಗಳ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ಹೋಬಳಿ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಮತ್ತು ವಾರ್ಡ್ಗಳಿಗೆ ನೀಡಿರುವ ಭೇಟಿ ವಿವರಗಳು, ತಾಲ್ಲೂಕು ಟಾಸ್ಕ್ ಫೆÇೀರ್ಸ್ ಸಮಿತಿ ಸಭೆಗಳ ಪ್ರಗತಿ ಹಾಗೂ ತಹಶೀಲ್ದಾರರ ಪಿಡಿ ಖಾತೆಗಳಲ್ಲಿ ಲಭ್ಯವಿರುವ ಅನುದಾನ ಮತ್ತು ಹೆಚ್ಚುವರಿ ಅನುದಾನದ ಬೇಡಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಪ್ರಸ್ತುತಪಡಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ದೇವಾಲಯ ಆಸ್ತಿ ದಾಖಲೀಕರಣ ಪ್ರಗತಿ ಪರಿಶೀಲನೆ:
ಜಿಲ್ಲೆಯ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ, ಸರ್ವೆ ಕಾರ್ಯಗಳ ಪ್ರಗತಿ ಹಾಗೂ ಒತ್ತುವರಿ ತೆರವು ಕಾರ್ಯಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಅಫೆಕ್ಸ್ ಸಮಿತಿಯ ಅಧ್ಯಕ್ಷರಾದ ಶುಭ ಕಲ್ಯಾಣ್ ಅವರು ಸಮಗ್ರ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಅಫೆಕ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು ಇರುವ ಕೆರೆಗಳು, ಸರ್ವೆ ಮಾಡಿರುವ ಹಾಗೂ ಸರ್ವೆಗೆ ಬಾಕಿ ಇರುವ ಕೆರೆಗಳ ವಿವರ, ಒತ್ತುವರಿಯಾಗಿರುವ ಕೆರೆಗಳು ಮತ್ತು ಒತ್ತುವರಿ ತೆರವುಗೊಳಿಸಿರುವ ಕೆರೆಗಳ ಸ್ಥಿತಿಗತಿಯನ್ನು ಅವಲೋಕಿಸಿದರು.
ಅಲ್ಲದೆ, ಮಲೀನಗೊಂಡ ಮತ್ತು ಕಲುಷಿತಗೊಂಡ ಕೆರೆಗಳ ಮಾಹಿತಿ, ಕುಡಿಯುವ ನೀರಿಗೆ ಯೋಗ್ಯವಾಗಿರುವ ಕೆರೆಗಳ ಸ್ಥಿತಿ, ಪುನರುಜ್ಜೀವನಗೊಳಿಸಿರುವ ಕೆರೆಗಳ ಸಂಖ್ಯೆ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ-2014ರ ಅನ್ವಯ ಕೈಗೊಂಡಿರುವ ಕ್ರಮಗಳು ಹಾಗೂ ಕೆರೆಗಳ ಸಂರಕ್ಷಣೆಗೆ ಜಿಲ್ಲಾಡಳಿತ ಕೈಗೊಂಡಿರುವ ವಿಶೇಷ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಾಲಯಗಳು ಹಾಗೂ ಧಾರ್ಮಿಕ ದತ್ತಿ ಸಂಸ್ಥೆಗಳ ಆಸ್ತಿ ಮತ್ತು ಜಮೀನುಗಳ ದಾಖಲೀಕರಣ, ಸರ್ವೆ ಕಾರ್ಯಗಳ ಪ್ರಗತಿ ಮತ್ತು ಬಾಕಿ ಇರುವ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿದರು.
ಕೆರೆಗಳ ಸಂರಕ್ಷಣೆ, ಒತ್ತುವರಿ ತಡೆ ಹಾಗೂ ದೇವಾಲಯ ಆಸ್ತಿಗಳ ಸಮಗ್ರ ದಾಖಲೀಕರಣ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಪ್ರಸ್ತುತಪಡಿಸಿದರು.
ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಜಿಲ್ಲೆಯಲ್ಲಿ ಇದೇ ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲಾ ಪಲ್ಸ್ ಪೋಲಿಯೋ ಚಾಲನಾ ಸಮಿತಿ ಸಭೆಯು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು. ಲಸಿಕಾ ಕೇಂದ್ರಗಳ ಸ್ಥಾಪನೆ, ಲಸಿಕೆಗಳ ಸುರಕ್ಷಿತ ಸಂಗ್ರಹಣೆ ಮತ್ತು ವಿತರಣೆ, ಸಾರಿಗೆ ವ್ಯವಸ್ಥೆ, ಜಾಗೃತಿ ಅಭಿಯಾನಗಳು ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯ ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ನಿರ್ದೇಶಿಸಿದರು.
ಮನೆ-ಮನೆ ಭೇಟಿ ತಂಡಗಳು, ಸಂಚಾರ ಲಸಿಕಾ ತಂಡಗಳು ಹಾಗೂ ವಿಶೇಷ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ತಂಡಗಳ ಮೂಲಕ ಶೇ.100ರಷ್ಟು ಲಸಿಕಾ ವ್ಯಾಪ್ತಿಯನ್ನು ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಸಭೆಯಲ್ಲಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಚಾಲನಾ ಸಮಿತಿಯ ಇತರ ಸದಸ್ಯರು ಭಾಗವಹಿಸಿದ್ದರು.