ತುಮಕೂರು: ಮಾಜಿ ಶಾಸಕರುಗಳಾದ ಚಿಕ್ಕನಾಯಕನಹಳ್ಳಿಯ ಕೆ.ಎಸ್.ಕಿರಣ್ಕುಮಾರ್ ಹಾಗೂ ತುಮಾಕೂರು ಗ್ರಾಮಾಂತರದ ಹೆಚ್.ನಿಂಗಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಬೆನ್ನಲ್ಲೇ ಮತ್ತೊಬ್ಬ ಗುಬ್ಬಿ ಶಾಸಕರಾದ ಎಸ್.ಆರ್.ಶ್ರೀನಿವಾಸ್(ವಾಸಣ್ಣ) ಅವರು ಮುಂದಿನ ವಾರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಆರ್ಎಸ್ಎಸ್ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಂಡಿದ್ದ ಚಿಕ್ಕನಾಯಕನಹಳ್ಳಿಯ ಬಿಜೆಪಿಯ ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್, ಮತ್ತು ಜೆಡಿಎಸ್ನ ಮಾಜಿ ಶಾಸಕ ಹೆಚ್.ನಿಂಗಪ್ಪ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಹಮಂತ್ರಿ ಸಿದ್ದರಾಮಯ್ಯ ಕಿರಣ್ಕುಮಾರ್ ಮತ್ತು ಹೆಚ್.ನಿಂಗಪ್ಪ ಅವರುಗಳು ಪಕ್ಷದ ತತ್ವ ಸಿದ್ಧಾಂತಕ್ಕೆ ಒಪ್ಪಿ ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ ಎಂದು ಹೇಳಿದರು.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ ಕೆ.ಎಸ್.ಕಿರಣ್ಕುಮಾರ್ ಅವರಂತಹ ಕಟ್ಟಾ ಆರ್ಎಸ್ಎಸ್ನ ಅನುಯಾಯಿಗಳೇ ಬಿಜೆಪಿ ತೊರೆದು ಬಂದಿದ್ದಾರೆ ಎಂದರೆ ಬಿಜೆಪಿ ಪಕ್ಷದ ಸ್ಥಿತಿ ಏನಾಗಿದೆ ಎಂಬುದು ತಿಳಿಯುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮೈಸೂರಿನ ಸಂದೇಶ್ನಾಗರಾಜು ಸಹ ಕಾಂಗ್ರೆಸ್ ಸೇರ್ಪಡೆಗೊಂಡರು.

ಕೆ.ಎಸ್.ಕಿರಣ್ಕುಮಾರ್ ಮತ್ತು ಹೆಚ್.ನಿಂಗಪ್ಪ ಸೇರ್ಪಡೆಯ ನಂತರ ತುಮಕೂರಿನ ಮಾಜಿ ಶಾಸಕ ಕೆ.ಎನ್.ರಾಜಣ್ಣನವರ ತುಮಕೂರಿನ ಕ್ಯಾತ್ಸಂದ್ರದ ಮನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮಯೂರ ಜಯಕುಮಾರ್ ನೇತೃತ್ವದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣನವರ ಸಮ್ಮುಖದಲ್ಲಿ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಸೇರ್ಪಡೆಗೆ ಮಾತುಕತೆ ನಡೆಯಿತು ಎನ್ನಲಾಗಿದೆ.
ಮಾರ್ಚಿ ಮೊದಲ ವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಎಸ್.ಆರ್.ಶ್ರೀನಿವಾಸ್ ಈ ನಾಯಕರುಗಳಿಗೆ ತಿಳಿದ್ದಾರೆನ್ನಲಾಗಿದೆ. ಇವರ ಜೊತೆಗೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಸಹ ಕಾಂಗ್ರೆಸ್ ಸೇರಲಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜು, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಶಾಸಕ ಡಾ.ರಂಗನಾಥ್, ಮಾಜಿ ಸಂಸದ ಚಂದ್ರಪ್ಪ ಉಪಸ್ಥಿತರಿದ್ದರು.