ತುಮಕೂರು : ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲೆಯ ನೋಡಲ್ ಅಧಿಕಾರಿಗಳು ಹಾಗೂ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ. ಏಕರೂಪ್ ಕೌರ್ ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುಮಕೂರು ಮತ್ತು ಕೊರಟಗೆರೆ ತಾಲ್ಲೂಕಿನಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಡಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ತುಮಕೂರು ತಾಲೂಕಿನ ಮಾಕೇನಹಳ್ಳಿ ಬದು ನಿರ್ಮಾಣ ಕಾಮಗಾರಿ, ಕೌ ಮ್ಯಾಟ್, ಚಾಪ್ ಕಟ್ಟರ್, ಊರ್ಡಿಗೆರೆ ಗ್ರಾಮದ ಚೆಕ್ ಡ್ಯಾಮ್ ವೀಕ್ಷಿಸಿದರು.
ನಂತರ ಕೊರಟಗೆರೆ ತಾಲ್ಲೂಕಿನ ಚಿನ್ನೇನನಳ್ಳಿ, ಲಕ್ಕಯ್ಯನಪಾಳ್ಯ, ಪಾತಗನಹಳ್ಳಿಯಲ್ಲಿ ಫಲಾನುಭವಿಗಳನ್ನು ಭೇಟಿ ಮಾಡಿ ಯೋಜನೆಯ ಕುರಿತು ಸಂವಾದ ನಡೆಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ, ಕೃಷಿ ಜಂಟಿ ನಿರ್ದೇಶಕ ಲಕ್ಷ್ಮಣ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ ಸಭೆ : ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಹಭಾಗಿತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಕುರಿತು ಪ್ರಗತಿ ಪರಿಶೀಲನ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಾತನಾಡಿದ ನೋಡಲ್ ಅಧಿಕಾರಿಗಳು ಹಾಗೂ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಡಾ. ಏಕರೂಪ್ ಕೌರ್, ಜಿಲ್ಲೆಯಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಯೂರಿಯಾ ಸೇರಿದಂತೆ ರಸಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಲು ರೈತರಿಗೆ ಶಿಕ್ಷಣ ಮತ್ತು ಮಾಹಿತಿಯನ್ನು ನೀಡಿ ಅವರ ಮನವೊಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ರಾಗಿ ಮತ್ತು ತೆಂಗು ಬೆಳೆಗಾರರು ಹೆಚ್ಚಿದ್ದು ಅವರಿಗೆ ವೈಜ್ಞಾನಿಕ ಕೃಷಿ ಮಾಡಲು ಪ್ರೊತ್ಸಾಹ ನೀಡಬೇಕು ಎಂದರು. ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ಬೆಳೆಯಲು ಅವಕಾಶವಿದ್ದು, ರೈತರಿಗೆ ಈ ಬೆಳೆಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲೆಯಲ್ಲಿ ಕೃಷಿ ವಿಸ್ತರಣೆಯನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಮಾತನಾಡಿ, ಪ್ರತಿ ಅಧಿಕಾರಿಗಳಿಗೆ ಗುರಿ ನೀಡಿ, ರೈತರ ಜೊತೆ ಸಂವಾದ ನಡೆಸಿ, ರೈತರ ಮನವೊಲಿಸಿ, ಕೃಷಿ ವಿಸ್ತರಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಈಶ್ವರಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಕೃಷಿ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.