
ತುಮಕೂರು:ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಅಮಾನುಷ ಹತ್ಯೆ ಖಂಡಿಸಿ ಶ್ರೀದಿಗಂಬರ ಜೈನ ಶ್ರೀಪಾಶ್ರ್ವನಾಥಸ್ವಾಮಿ ಜಿನ ಮಂದಿರ,ತುಮಕೂರು ಜಿಲ್ಲಾ ಜೈನ ಒಕ್ಕೂಟ ಹಾಗೂ ಜೈನ ಸಮುದಾಯದ ವತಿಯಿಂದ ನಗರದಲ್ಲಿಂದು ಮೌನ ಪ್ರತಿಭಟನೆ ನಡೆಸಿ, ಕೊಲೆಗಡುಕರನ್ನು ಬಂಧಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಮಹಾವೀರ ಭವನದ ಮುಂಭಾಗದಲ್ಲಿ ಜಮಾಯಿಸಿದ ಜೈನ ಸಮುದಾಯದ ನರಸಿಂಹರಾಜಪುರದ ಶ್ರೀಲಕ್ಷ್ಮಿಸೇನ ಭಟ್ಟಾಕರಸ್ವಾಮಿಗಳ ನೇತೃತ್ವದಲ್ಲಿ ನಗರದ ಬಿ.ಹೆಚ್.ರಸ್ತೆ, ಎಂ.ಜಿ.ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರಗೆ ಮೌನ ಮೆರವಣಿಗೆ ನಡೆಸಿ,ಶ್ರೀಕಾಮಕುಮಾರ ನಂದಿ ಸ್ವಾಮೀಜಿಗಳ ಹತ್ಯೆಯನ್ನು ಖಂಡಿಸಿ, ಕೂಡಲೇ ಕೊಲೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡ ಜೈನ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದ ನರಸಿಂಹರಾಜಪುರದ ಶ್ರೀಲಕ್ಷ್ಮಿಸೇನ ಭಟ್ಟಾಕರ ಸ್ವಾಮಿಗಳು,ಅತ್ಯಂತ ಅಹಿಂಸಾತ್ಮಕ ರೀತಿಯಲ್ಲಿ ಮುನಿಶ್ರೀಗಳ ಶರೀರವನ್ನು ವಿಕೃತಗೊಳಿಸಿ ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂತಹ ಕೃತ್ಯವನ್ನು ಜೈನ ಸಮಾಜ ಹಾಗೂ ಜೈನಮಠಗಳು ತೀವ್ರವಾಗಿ ಖಂಡಿಸುತ್ತವೆ.ಇಡೀ ಮನುಕುಲವೇ ತಲೆತಗ್ಗಿಸುವ ವಿಚಾರವಾಗಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಕಪ್ಪುಚುಕ್ಕೆಯಾಗಿದೆ.ಇಂದು ಜೈನಮುಖಿಗಳಿಗೆ ಆಗಿರುವ ಕೆಲಸ, ಬೇರೆ ಸಮುದಾಯದ ಸ್ವಾಮೀಜಿಗಳಿಗೂ ಆಗಬಹುದು.ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಂತಕರನ್ನು ಬಂಧಿಸಿ,ಕಾನೂನಾತ್ಮಕ ವಾದಂತಹ ಕಾರ್ಯಾಚರಣೆ ಮುಂದುವರೆಸಿರುವುದು ಸ್ವಾಗತಾರ್ಹ.ಆದರೆ ಹಂತಕರಿಗೆ ಅತ್ಯಧಿಕ ಶಿಕ್ಷೆಯನ್ನು ವಿಧಿಸಲೇಬೇಕು. ಹಂತಕರಿಗೆ ಯಾವುದೇ ರೀತಿಯ ಕರುಣೆ ತೋರಬಾರದು ಎಂದು ಸರಕಾರವನ್ನು ಆಗ್ರಹಿಸಿದರು.
ಶ್ರೀ ದಿಗಂಬರ ಜೈನ ಶ್ರೀಪಾಶ್ರ್ವನಾಥಸ್ವಾಮಿ ಜಿನ ಮಂದಿರ ಅಧ್ಯಕ್ಷ ಎಸ್.ಜೆ.ನಾಗರಾಜು, ಶಾಸಕ ಜೋತಿಗಣೇಶ್, ಸಂಸದ ಜಿ.ಎಸ್.ಬಸವರಾಜು ಮಾಜಿ ಸಚಿವ ಸೊಗಡು ಶಿವಣ್ಣ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಸ್ಪೂರ್ತಿ ಚಿದಾನಂದ ಮಾತನಾಡಿ ಮುಂತಾದವರು ಮಾತನಾಡಿದರು.
ಈ ಸಂಬಂಧ ಮನವಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ, ಜೈನ ಸಮುದಾಯದ ಬಾಹುಬಲಿ ಬಾಬು, ಜಿನೇಶ್,ಬಾಹುಬಲಿ ಎಂ.ಎ.,ಚಂದ್ರಕೀರ್ತಿ,ನಾಗೇಂದ್ರ,ಆರ್.ಎ.ಸುರೇಶ್ಕುಮಾರ್,ನಾಗರಾಜು ಟಿ.ಜೆ.,ಸುಭೋದ್ ಕುಮಾರ್,ಪದ್ಮಪ್ರಸಾದ್, ಜೈನ್ ಮಿಲನ್, ಜೈನ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.