ತುಮಕೂರು : ಸೇಂದಿ ವನದಲ್ಲಿ ಉಳುಮೆ ಮಾಡುತ್ತಿರುವ ರೈತರು ಅರ್ಜಿ ಸಲ್ಲಿಸಿದಲ್ಲಿ ಅವರಿಗೆ ಜಮೀನು ಮಂಜೂರು ಮಾಡುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಅವರು ಹೇಳಿದರು.
ನಗರದ ಗಾಜಿನ ಮನೆ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ 2023 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನ್ನಾಡುತ್ತಿದ್ದರು.
ಅಂತೆಯೇ ಕಾಫಿ ಬೆಳೆಗಾರರಿಗೆ 1 ಲಕ್ಷ ಎಕರೆ ಜಮೀನನ್ನು ಮೂವತ್ತು ವರ್ಷಗಳಿಗೆ ಗುತ್ತಿಗೆ ನೀಡುವ ಸಂಬಂಧ ಕಾಯ್ದೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದ್ದು, ಈ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆ ಮಂಡಿಸಲಾಗುವುದು, ಸರ್ಕಾರ ರೂಪಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಜನರ ಮನೆ ಬಾಗಿಲಿದೆ ಕೊಂಡೊಯ್ಯುವ ಕೆಲಸವನ್ನು ಗ್ರಾಮ ಆಡಳಿತ ಅಧಿಕಾರಿಗಳು ಮಾಡಬೇಕು ಎಂದರು.
ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಂತೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರಿಗೂ ಸಹ ವೈಯಕ್ತಿಕ ಬದುಕಿದೆ. ಅವರಿಗೂ ಸಹ ಕುಟುಂಬವಿದೆ. ಆದುದರಿಂದ ಸರ್ಕಾರಿ ನೌಕರರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಅವರೂ ಸಹ ಹೆಚ್ಚು ಕ್ರಿಯಾಶೀಲರಾಗಿ ಸರ್ಕಾರದ ಕೆಲಸಗಳನ್ನು ಜನರಿಗೆ ತಲುಪಿಸುತ್ತಾರೆ. ಕಳೆದ 40 ವರ್ಷಗಳಿಂದ ಹಿಂದಿನ ಸರ್ಕಾರಗಳು ಮಾಡದ ಗ್ರಾಮ ಲೆಕ್ಕಾಧಿಕಾರಿಗಳ ವೃಂದ ಮತ್ತು ಪದನಾಮ ಬದಲಾವಣೆಯನ್ನು ನಮ್ಮ ಸರ್ಕಾರ ಮಾಡಿದೆ ಎಂದು ಅಶೋಕ್ ಅವರು ತಿಳಿಸಿದರು.
ರೈತರ ಮಕ್ಕಳೂ ಸಹ ಡಾಕ್ಟರ್, ಇಂಜಿನಿಯರ್ , ಲಾಯರ್ ಆಗಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ರೈತ ವಿದ್ಯಾನಿಧಿ ಎಂಬ ರೈತರ ಮಕ್ಕಳಿಗೆ ಸಹಾಯಧನ ನೀಡುವ ಯೋಜನೆ ಜಾರಿಗೆ ತಂದಿದೆ. ನಮ್ಮ ಸರ್ಕಾರ ಜಾರಿಗೆ ತಂದಿರುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಬಹಳ ಜನಪ್ರಿಯವಾಗಿದ್ದು, ಲಕ್ಷಾಂತರ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಒದಗಿಸುವ ಈ ಕಾರ್ಯಕ್ರಮದಿಂದಾಗಿ ಜನರು ಸರ್ಕಾರಿ ಅಧಿಕಾರಿಗಳನ್ನು ಪ್ರೀತಿಯಿಂದ ಕಾಣುವಂತೆ ಮಾಡಿದೆ ಎಂದರು.
ತುಮಕೂರು ಜಿಲ್ಲೆಗೆ ಬೆಳೆ ಹಾನಿ ಪರಿಹಾರವಾಗಿ ಇನ್ಪುಟ್ ಸಬ್ಸಿಡಿಯನ್ನಾಗಿ 11,165 ರೈತರಿಗೆ 988 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜ್ಯೋತಿಗಣೇಶ್, ರಾಜೇಶ್ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ರಾಜ್ಯ ಗ್ರಾಮಲೆಕ್ಕಾಧಿಕಾರಿ ಸಂಘದ ಅಧ್ಯಕ್ಷ ದೊಡ್ಡಬಸಪ್ಪರೆಡ್ಡಿ, ಉಪವಿಭಾಗಾಧಿಕಾರಿ ಅಜಯ್, ತಹಸೀಲ್ದಾರ್ ಸಿದ್ದೇಶ್ ಮುಂತಾದವರು ಉಪಸ್ಥಿತರಿದ್ದರು.