ತುಮಕೂರು : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (Special Intensive Revision – SIR) ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಎಂಪ್ರೆಸ್ ಕಾಲೇಜು ಆವರಣದಲ್ಲಿರುವ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ವಿಶೇಷ ಸಮಗ್ರ ಪರಿಷ್ಕರಣೆಯ ಮೂಲ ಉದ್ದೇಶ ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ತಿಳಿಸಿದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಎಲ್ಲಾ ಸರ್ಕಾರಿ ನೌಕರರು ಪ್ರಜಾಪ್ರತಿನಿಧಿತ್ವಕಾಯ್ದೆ 1951ರ ಕಲಂ 28ಎ ರನ್ವಯ ಚುನಾವಣಾ ಅವಧಿಯಲ್ಲಿ ಚುನಾವಣಾ ಆಯೋಗದ ಅಧೀನದಲ್ಲಿರುವ ಪ್ರತಿ ನಿಯುಕ್ತ ನೌಕರರೆಂದು ಪರಿಗಣಿಸಲ್ಪಡುತ್ತಾರೆ. ಅವರು ಚುನಾವಣಾ ಆಯೋಗದ ನಿಯಂತ್ರಣ, ಮೇಲ್ವಿಚಾರಣೆ ಹಾಗೂ ಶಿಸ್ತು ಕ್ರಮಗಳಿಗೆ ಒಳಪಟ್ಟಿರುತ್ತಾರೆ ಎಂದು ವಿವರಿಸಿದ ಜಿಲ್ಲಾಧಿಕಾರಿಗಳು, ತರಬೇತಿಯಲ್ಲಿನ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಅರ್ಥೈಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿಗಳು ಆಡಳಿತದ ತಳಮಟ್ಟದ ಕಚೇರಿಗಳಾಗಿರುವುದರಿಂದ ಗ್ರಾಮಪಂಚಾಯಿತಿ ಮಟ್ಟದಲ್ಲಿ ಮತದಾರರ ನೆರವು ಕೇಂದ್ರಗಳನ್ನು (Voter Facilitation Centres – VFC) ಆರಂಭಿಸುವುದು ಅಗತ್ಯವಾಗಿದೆ ಎಂದ ಅವರು, ಈ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಮತದಾರರ ನೆರವು ಕೇಂದ್ರಗಳ ಕಾರ್ಯನಿರ್ವಹಣೆಯನ್ನು ಹಿರಿಯ ಅಧಿಕಾರಿಗಳು ಪ್ರತಿ ದಿನ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದಿಂದ ಆಗಮಿಸಿದ್ದ ಭಾರತ ಚುನಾವಣಾ ಆಯೋಗದ ರಾಷ್ಟ್ರ ಮಟ್ಟದ ಮಾಸ್ಟರ್ ಟ್ರೈನರ್ ಆದ ಪಿ.ಜಯಮಾಧವ ಇವರು ಎಸ್.ಐ.ಆರ್ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿ ನೀಡಿದರು.
ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ನೀಡುವುದು, ಅಗತ್ಯ ನಮೂನೆಗಳು ಹಾಗೂ ದಾಖಲೆಗಳ ಮುದ್ರಣ, ಮತಗಟ್ಟೆಗಳ ಮರುಹೊಂದಿಕೆ, ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯ ಸಂಗ್ರಹ ಮತ್ತು ಪರಿಶೀಲನೆ, ಕರಡು ಮತದಾರರ ಪಟ್ಟಿಯ ಪ್ರಕಟಣೆ, ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕಾರ, ಅರ್ಜಿಗಳ ಪರಿಶೀಲನೆ ಹಾಗೂ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಸೇರಿದಂತೆ ಎಸ್ಐಆರ್ ಪ್ರಕ್ರಿಯೆಯ ಸಂಪೂರ್ಣ ಕಾರ್ಯವಿಧಾನದ ಕುರಿತು ಮಾಹಿತಿ ನೀಡಲಾಯಿತು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರು ಮತದಾರರ ಪಟ್ಟಿಯ ಶುದ್ಧತೆ ಹಾಗೂ ಪಾರದರ್ಶಕತೆಯನ್ನು ಖಚಿತಪಡಿಸುವಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ-ನಗರ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್ಗಳು ಭಾಗವಹಿಸಿದ್ದರು.