ತುಮಕೂರು : ಜಿಲ್ಲೆಯ ಶಿರಾ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸಹಕಾರ ಬೇಸಾಯ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬುಧವಾರ ಸ್ಥಳ ಪರಿಶೀಲನೆ ನಡೆಸಿದರು.
ಶಿರಾ ತಾಲ್ಲೂಕು ತರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರ ಗ್ರಾಮದಲ್ಲಿ ಖಾಸಗಿ ಕೊಳವೆ ಬಾವಿಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ನೀರು ಪೂರೈಕೆಯ ಕುರಿತು ಅವರು ಪರಿಶೀಲನೆ ನಡೆಸಿದರು.
ಕಸಬಾ ಹೋಬಳಿಯ ಮೇಲುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ ಹಾಲಿ ರೀ-ಡ್ರಿಲ್ ಮಾಡಿರುವ ಕೊಳವೆಬಾವಿಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಆದರೆ ಹೊಸದಾಗಿ ಕೊರೆದಿರುವ ಕೊಳವೆಬಾವಿಯಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತೊಂದು ಹೊಸ ಕೊಳವೆಬಾವಿಯನ್ನು ಕೊರೆಯುವಂತೆ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸ್ಥಳೀಯರ ಮನವಿಯನ್ನು ಆಲಿಸಿದ ಜಿಲ್ಲಾಧಿಕಾರಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನಂತರ ಅಮ್ಮಾಜಮ್ಮ ದೇವಸ್ಥಾನದ ಸಮಿತಿ ಹಾಗೂ ಖಾಸಗಿ ಒಡೆತನದ ಕೊಳವೆಬಾವಿಯ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವ ಕುರಿತು ದೇವಸ್ಥಾನ ಸಮಿತಿಯ ಸದಸ್ಯರೊಂದಿಗೆ ಅವರು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಸಹಕಾರ ಬೇಸಾಯ ಯೋಜನೆಗೆ ಸಂಬಂಧಿಸಿದಂತೆ ಶಿರಾ ತಾಲ್ಲೂಕಿನ ಕರೆಜ್ಜೀವನಹಳ್ಳಿ ಹಾಗೂ ತೋರಪ್ಪನಹಳ್ಳಿಯ ಫಲಾನುಭವಿಗಳಿಗೆ ಸಾಗುವಳಿ ಹಕ್ಕು ನೀಡುವ ಕುರಿತು ಸ್ಥಳ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಶಿರಾ ತಾಲ್ಲೂಕು ತಹಶೀಲ್ದಾರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.