ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಜಿಲ್ಲಾಡಳಿತ ಸಿದ್ದತೆ

ತುಮಕೂರು : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ವೈಭವಯುತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಾ, ಅಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕøತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆ ಸ್ಥಬ್ತಚಿತ್ರದೊಂದಿಗೆ ಮೆರವಣಿಗೆಯನ್ನು ಕೈಗೊಳ್ಳುವಂತೆ ತುಮಕೂರು ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು. 

 ಪ್ರತಿ ವರ್ಷದಂತೆ ಈ ಬಾರಿಯೂ ಸಹ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗ, ಕ.ರಾ.ರ.ಸಾ.ನಿಗಮ, ಶಿಕ್ಷಣ ಇಲಾಖೆ, ಪಶುವೈದ್ಯಕೀಯ, ರೇಷ್ಮೆ, ಕೃಷಿ ಉತ್ಪನ್ನ ಮಾರುಕಟ್ಟೆ, ಬೆಸ್ಕಾಂ ಇಲಾಖೆಗಳು ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ಥಬ್ತಚಿತ್ರಗಳನ್ನು ವಿಶೇಷವಾಗಿ ರೂಪಿಸಿ, ಅಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂಭಾಗದಲ್ಲಿ ಹಾಜರಿರಲು ತಿಳಿಸಲಾಯಿತು. 

 ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಅಗತ್ಯವಾದ ವೇದಿಕೆ, ವಿಐಪಿ ಕುರ್ಚಿಗಳು, ಶಾಮಿಯಾನ, ಧ್ವನಿವರ್ಧಕ ವ್ಯವಸ್ಥೆ, ಅಲಂಕಾರಿಕ ಹೂಕುಂಡಗಳ ವ್ಯವಸ್ಥೆ, ಕಾರ್ಯಕ್ರಮ ಆಯೋಜನೆ, ನಿರೂಪಣೆ, ನಾಡಗೀತೆಯ ಗಾಯನದ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. 

 ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಕ.ಸಾ.ಪ. ಅಧ್ಯಕ್ಷ ಸಿದ್ಧಲಿಂಗಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *