ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸಿಗೆ ಆಗ್ರಹಿಸಿ ಪ್ರತಿಭಟನೆ

ತುಮಕೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು, ಕಳೆದ 30 ವರ್ಷಗಳಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು ಸಹ ಸರ್ಕಾರ ನಿರ್ಲಕ್ಷ್ಯವಹಿಸುತ್ತಿರುವುದು ಖಂಡನೀಯ ಎಂದರು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ನ್ಯಾ.ಎ.ಜೆ.ಸದಾಶಿವ ಆಯೋಗ 2012ರಲಿ ಸಲ್ಲಿಸಿರುವ ವರದಿಯನ್ನು ಅಂಗೀಕಾರ ಮಾಡದೇ ಇರುವುದು ತಳ ಸಮುದಾಯಗಳ ಬಗ್ಗೆ ಸರ್ಕಾರಕ್ಕೆ ಇರುವ ಕಾಳಜಿಯನ್ನು ತೋರಿಸುತ್ತದೆ, ಮುಂದೆ ನಡೆಯಲಿರುವ ಅಧಿವೇಶನದಲ್ಲಿ ಎಜೆ ಸದಾಶಿವ ಆಯೋಗದ ವರದಿಯನ್ನು ಮಂಡಿಸಿ, 341(3) ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕೆಂದು ಆಗ್ರಹಿಸಿದರು.

ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಬಿಜೆಪಿ ಸರ್ಕಾರ ನಿರ್ಲಕ್ಷ್ಯವಹಿಸಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಕ್ಕಪಾಠವನ್ನು ಕಲಿಸಬೇಕಾಗುತ್ತದೆ, ಒಳ ಮೀಸಲಾತಿ ಪರಿಶಿಷ್ಟ ಜಾತಿಯ ಹಕ್ಕೇ ಹೊರತು ಯಾವುದೇ ಸಮುದಾಯಗಳ ಭಿಕ್ಷೆಯಲ್ಲ ಎನ್ನುವುದನ್ನು ಸರ್ಕಾರ ಅರಿಯಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ/ವರ್ಗಗಳ ಅಭಿವೃದ್ಧಿಗಾಗಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಮೀಸಲಿಟ್ಟ ಹಣವನ್ನು ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ಖಂಡನೀಯ, ಈ ಹಣವನ್ನು ವಾಪಾಸ್ ಪಡೆಯಲು ಸರ್ಕಾರದ ರಚಿಸಿಕೊಂಡಿರುವ 7(ಡಿ) ಕಾಯ್ದೆಯನ್ನು ಸರ್ಕಾರ ತಕ್ಷಣವೇ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಅಹಿಂದ ಮುಖಂಡ ವಿರೂಪಾಕ್ಷ ಡ್ಯಾಗೇರಹಳ್ಳಿ ಮಾತನಾಡಿ, ಪರಿಶಿಷ್ಟ ಜಾತಿಯ ಹೆಸರಲ್ಲಿ ವೀರಶೈವ ಲಿಂಗಾಯತ ಸಮುದಾಯಗಳು ಬೇಡಜಂಗಮ/ಬುಡ್ಗ ಜಂಗಮ ಹೆಸರಿನಲ್ಲಿ ಪಡೆದಿರುವ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿ, ಸುಳ್ಳು ಪ್ರಮಾಣಪತ್ರ ನೀಡಿರುವ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕಳೆದ 40 ವರ್ಷಗಳಿಂದ ಉಳುಮೆ ಮಾಡುತ್ತಿರುವ ಬಗರ್‍ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು, ಸರ್ಕಾರಿ ಭೂಮಿಯಲ್ಲಿ ಗುಡಿಸಲು, ಮನೆಗಳನ್ನು ಕಟ್ಟಿಕೊಂಡಿರುವ ಬಡವರಿಗೆ ಹಕ್ಕುಪತ್ರ ನೀಡಬೇಕು, ವಸತಿ ಯೋಜನೆಯಡಿ ವಸತಿ ನಿರ್ಮಾಣಕ್ಕಾಗಿ ನೀಡುವ ಸಹಾಯಧನವನ್ನು 5 ಲಕ್ಷಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಶಿವಶಂಕರ್ ಕುಣಿಗಲ್, ಕುಂದೂರು ಮುರುಳಿ, ನಾಗತಿಹಳ್ಳಿ ಕೃಷ್ಣಮೂರ್ತಿ, ಚೇಳೂರು ಶಿವನಂಜಪ್ಪ, ಮೀನ ಕುಂಟನಹಳ್ಳಿ ನರಸಿಂಹಪ್ಪ, ಡಾ.ಮುರುಳೀಧರ್, ನಿಟ್ಟೂರು ಗಂಗಾರಾಂ, ಉಪ್ಪಾರಹಳ್ಳಿ ನಾಗರಾಜು, ಕೆಂಚಮಾರಯ್ಯ, ಬೆಲ್ಲದಮಡಗು ಶಿವಕುಮಾರ್, ಹಂದನಕೆರೆ ನಾಗರಾಜು ಸೇರಿದಂತೆ ಇತರರಿದ್ದರು.

Leave a Reply

Your email address will not be published. Required fields are marked *