ಪುಟ್ಟರಂಗಶೆಟ್ಟರಿಗೆ ಸಚಿವ ಸ್ಥಾನ ನೀಡಲು ಉಪ್ಪಾರ ಸಂಘದ ಆಗ್ರಹ

ತುಮಕೂರು: ಉಪ್ಪಾರ ಸಮಾಜದ ಏಕೈಕ ಶಾಸಕ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ಸರ್ಕಾರದ ಮಂತ್ರಿಮಡಲದಲ್ಲಿ ಸ್ಥಾನ ನೀಡಬೇಕು, ನಾಲ್ಕು ಬಾರಿ ಶಾಸಕರಾದ ಈ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಸಿ.ಎಸ್. ಮಂಜುನಾಥ್ ಕಾಂಗ್ರೆಸ್ ಹೈಕಮಾಂಡ್ ಹಾಗೂ ಹೊಸ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಲಿರುವ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದರು.

ಸೋಮವಾರ ನಗರದ ಉಪ್ಪಾರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್. ಮಂಜುನಾಥ್, ಅತ್ಯಂತ ಹಿಂದುಳಿದ ಉಪ್ಪಾರ ಸಮಾಜದ ಪ್ರಗತಿಗೆ ಸರ್ಕಾರ ಕಾಳಜಿವಹಿಸಬೇಕು, ನಮ್ಮ ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ಅವರಿಗೆ ಮಂತ್ರಿ ಸ್ಥಾನ ನೀಡಿ, ಸಮಾಜಕ್ಕೆ ಶಕ್ತಿ ತುಂಬಬೇಕು ಎಂದರು.

ಸಮಾಜದ ಸ್ವಾಮೀಜಿಗಳೊಂದಿಗೆ ಸಂಘದ ಪ್ರಮುಖರು ಮುಖ್ಯಮಂತ್ರಿ ಆಗಲಿರುವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಕೋರಲಾಗುವುದು. ರಾಜ್ಯದಲ್ಲಿ ಸುಮಾರು 30ರಿಂದ 35 ಲಕ್ಷ ಉಪ್ಪಾರ ಸಮಾಜದ ಜನಸಂಖ್ಯೆ ಇದೆ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದ ಉಪ್ಪಾರ ಸಮಾಜಕ್ಕೆ ಸರ್ಕಾರ ಅಗತ್ಯ ಸೌಲಭ್ಯ ನೀಡಿ ನಾವೂ ಸಮಾಜದ ಮುಖ್ಯವಾಹಿನಿಗೆ ಬರಲು ನೆರವಾಗಬೇಕು ಎಂದು ಕೋರಿದರು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉಪ್ಪಾರ ಸಮಾಜಕ್ಕೆ ಸರ್ಕಾರ ಜಮೀನು ನೀಡಬೇಕು. ಆ ಜಾಗದಲ್ಲಿ ಶಿಕ್ಷಣ ಸಂಸ್ಥೆ, ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಿ, ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸರ್ಕಾರ ಸಹಕಾರ ನೀಡಬೇಕು ಎಂದು ಸಿ.ಎಸ್. ಮಂಜುನಾಥ್ ಒತ್ತಾಯಿಸಿದರು.

ಸಂಘದ ಗೌರವಾಧ್ಯಕ್ಷ ಗಂಗಪ್ಪ, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಮುಖಂಡರಾದ ಚೆನ್ನಿಗರಾಯಪ್ಪ, ಪಾವಗಡ ಅನಿಲ್, ರೇಣುಕಯ್ಯ, ರಾಮಚಂದ್ರಪ್ಪ, ಮೂಡಲಗಿರಿಯಪ್ಪ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *