ರಾಮಲಿಂಗಾರೆಡ್ಡಿಗೆ ಡಿಸಿಎಂ ಹುದ್ದೆ ನೀಡಲು ಒತ್ತಾಯ – ರೆಡ್ಡಿ ಜನಸಂಘ ಆಗ್ರಹ

ತುಮಕೂರು: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಜಿಲ್ಲಾ ರೆಡ್ಡಿ ಜನಸಂಘ ಅಧ್ಯಕ್ಷ ಕೆ. ಶ್ರೀನಿವಾಸ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ನಾಯಕರಿಗೆ ಒತ್ತಾಯಿಸಿದರು.

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಾಂಸ್ಕೃತಿಕ ಚರಿತ್ರೆಯಲ್ಲಿ ವಿಶಿಷ್ಟತೆ ಮೆರೆಯುತ್ತಿರುವ ರೆಡ್ಡಿ ಜನಾಂಗ ರಾಜ್ಯದಲ್ಲಿ ಸುಮಾರು 60 ಲಕ್ಷ ಜನಸಂಖ್ಯೆ ಇದೆ. ಆದರೆ ಜನಸಂಖ್ಯೆಗೆ ತಕ್ಕಂತೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. ಹೀಗಾಗಿ ಈ ಬಾರಿ ಸರ್ಕಾರ ರೆಡ್ಡಿ ಸಮಾಜದ ನಾಯಕರಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದರು.

ರಾಜ್ಯ ರಾಜಕಾರಣದಲ್ಲಿ ಸಿಕ್ಕಿರುವ ಅವಕಾಶ ಬಳಸಿಕೊಂಡು ರೆಡ್ಡಿ ಸಮಾಜದ ನಾಯಕರು ರಾಜಕೀಯದಲ್ಲಿ ಛಾಪು ಮೂಡಿಸಿ ಗಮನ ಸೆಳೆದಿದ್ದಾರೆ. ಪ್ರಸ್ತುತ ನಮ್ಮ ಸಮಾಜದ 24 ಶಾಸಕರಿದ್ದು ಈ ಪೈಕಿ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಉಪ ಮುಖ್ಯಮಂತ್ರಿ ಹಾಗೂ ಇತರೆ 4-5 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಸಮಾಜದ ಮುಖಂಡರನ್ನು ಗುರುತಿಸಿ ಅವರನ್ನು ಎಂಎಲ್ಸಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಶ್ರೀನಿವಾಸ ರೆಡ್ಡಿ ಒತ್ತಾಯಿಸಿದರು.

ರೆಡ್ಡಿ ಜನಾಂಗದ ವಿದ್ಯಾರ್ಥಿ ನಿಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ನಿಲಯ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು.

ಸAಘದ ಜಂಟಿ ಕಾರ್ಯದರ್ಶಿ ರಾಜಗೋಪಾಲ್, ಖಜಾಂಚಿ ಶಿವಾರೆಡ್ಡಿ, ಮುಖಂಡರಾದ ನರಸಿಂಹರೆಡ್ಡಿ, ಗೋವಿಂದರೆಡ್ಡಿ, ನಿರ್ಮಲ, ಶಶಿಕಲಾ ಮೊದಲಾದವರು ಹಾಜರಿದ್ದರು.

Leave a Reply

Your email address will not be published. Required fields are marked *