ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ-ಯುವ ಕಾಂಗ್ರೆಸ್ ಪ್ರತಿಭಟನೆ

ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ, ಪರೀಕ್ಷಾ ಪಾವಿತ್ರತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಈ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಸಂಸದರು ಸಂಸತ್ತಿನಲ್ಲಿ ಧ್ವನಿ ಮಾಡಬೇಕು ಎಂದು ಒತ್ತಾಯಿಸಿ ತುಮಕೂರು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು.

ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸು, ಭವಿಷ್ಯ ಕೇಂದ್ರ ಸರ್ಕಾರ ಹಾಳು ಮಾಡಿದೆ ಎಂದು ಕಾರ್ಯಕರ್ತರು ಆರೋಪಿಸಿದರು. ಬಿತ್ತಿ ಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲಾಹಿ ಸಿಕಂದರ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೀಟ್ ಪರೀಕ್ಷೆ ಮಾತ್ರವಲ್ಲ, ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಲೀಕ್ ಮಾಡುವ ದೊಡ್ಡ ದಂಧೆಯೇ ನಡೆಯುತ್ತಿದೆ. ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲೂ ಅಕ್ರಮಗಳು ನಡೆದ ಆರೋಪಗಳಿವೆ. ಮೋದಿ ಸರ್ಕಾರ ಬಡವರ ಪರವಾಗಿಲ್ಲ, ಬಂಡವಾಳಶಾಹಿಗಳ ಪರವಿದೆ ಎಂದು ಟೀಕೆ ಮಾಡಿದರು.

ದೇಶದಲ್ಲಿ ಸುಮಾರು 24 ಲಕ್ಷ, ರಾಜ್ಯದಲ್ಲಿ 1.4 ಲಕ್ಷ ವಿದ್ಯಾರ್ಥಿಗಳು ನೀಟ್ ಮೂಲಕ ತಮ್ಮ ವೈದ್ಯಕೀಯ ಪದವಿಯ ಕನಸು ಕಂಡಿದ್ದರು. ಅಷ್ಟೂ ಜನರಿಗೆ ಮೋದಿ ಸರ್ಕಾರ ಅನ್ಯಾಯ ಮಾಡಿದೆ. ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ. ಪ್ರಾಮಾಣಿಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ನೀಟ್ ಮತ್ತಿತರ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಸಬೇಕು ಎಂದು ಇಲಾಹಿ ಸಿಕಂದರ್ ಒತ್ತಾಯಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಮಾತನಾಡಿ, ನೀಟ್ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇಂತಹ ಸೋರಿಕೆ ಇದೇ ಮೊದಲಲ್ಲ, ಪರೀಕ್ಷೆ ಅಕ್ರಮ ದಂಧೆಯಾಗಿದೆ. ವೈದ್ಯರಾಗಬೇಕೆಂಬ ಆಸೆಯಿಂದ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕನಸ್ಸನ್ನು ನುಚ್ಚುನೂರು ಮಾಡಿದೆ ಎಂದು ಟೀಕಿಸಿದರು.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಪ್ರಧಾನಿ ಮೋದಿ ಹಾಗೂ ಸಂಬಂಧಿಸಿದ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಎಲ್ಲಾ ಸಂಸದರು ಸಂಸತ್ತಿನದಲ್ಲಿ ಪ್ರಶ್ನೆ ಮಾಡಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ತುಮಕೂರು ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುತ್ತೇವೆ ಎಂದು ಹೇಳಿದರು.

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ರಮೇಶ್, ಮಾಜಿ ಪ್ರಧಾನ ಕಾರ್ಯದಶಿ ಅನಿಲ್‍ಕುಮಾರ್ ಸೇರಿದಂತೆ ತಾಲ್ಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *